ಇಂದಿನಿಂದ 43 ಕೇಂದ್ರದಲ್ಲಿ ಪಿಯುಸಿ ಪರೀಕ್ಷೆ

KannadaprabhaNewsNetwork |  
Published : Feb 28, 2026, 02:00 AM IST
ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆ ಕುರಿತು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್‌ ಆರ್. ಮಾಹಿತಿ ನೀಡಿದರು. ಜಿಪಂ ಸಿಇಒ ಭುವನೇಶ ಪಾಟೀಲ ಇದ್ದಾರೆ. | Kannada Prabha

ಸಾರಾಂಶ

ಫೆ. 28ರಿಂದ ಮಾ. 17ರ ವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ನಡೆಯುದ ದ್ವಿತೀಯ ಪಿಯುಸಿ ಪರೀಕ್ಷೆಗೆ ಧಾರವಾಡ ಜಿಲ್ಲೆಯಲ್ಲಿ 12,665 ವಿದ್ಯಾರ್ಥಿಗಳು 14,289 ವಿದ್ಯಾರ್ಥಿನಿಯರು ಸೇರಿ ಒಟ್ಟು 176 ಕಾಲೇಜುಗಳ 26,954 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ.

ಧಾರವಾಡ:

ಪರೀಕ್ಷೆಯನ್ನು ಒಂದು ಅವಕಾಶವೆಂದು ಪರಿಗಣಿಸಿ, ಇಷ್ಟು ದಿನ ಓದಿನ ಶ್ರಮ ತೋರಿಸುವ ವೇದಿಕೆಯೆಂದು ಭಾವಿಸಿ, ಸಮರ್ಪಕವಾದ ಉತ್ತರ ಬರೆಯುವ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕೆಂದು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹಾರೈಸಿದರು.

ಕಚೇರಿಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಕೈಗೊಂಡ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಅವರು, ಫೆ. 28ರಿಂದ ಮಾ. 17ರ ವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ 12,665 ವಿದ್ಯಾರ್ಥಿಗಳು 14,289 ವಿದ್ಯಾರ್ಥಿನಿಯರು ಸೇರಿ ಒಟ್ಟು 176 ಕಾಲೇಜುಗಳ 26,954 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಖಾಸಗಿ ಅಭ್ಯರ್ಥಿಗಳಾಗಿ 150 ಪುರುಷ ಹಾಗೂ 148 ಮಹಿಳಾ ವಿದ್ಯಾರ್ಥಿಗಳಿದ್ದಾರೆ. ಹಾಗೆಯೇ, ಫಲಿತಾಂಶ ಸುಧಾರಣೆಗಾಗಿ 12 ವಿದ್ಯಾರ್ಥಿ ಮತ್ತು 14 ವಿದ್ಯಾರ್ಥಿನಿಯರು ಇದ್ದಾರೆಂದು ತಿಳಿಸಿದರು.

43 ಪರೀಕ್ಷಾ ಕೇಂದ್ರ:

ಕಲಾ ವಿಭಾಗದಲ್ಲಿ 6,607, ವಾಣಿಜ್ಯ ವಿಭಾಗದಲ್ಲಿ 7,178 ಹಾಗೂ ವಿಜ್ಞಾನ ವಿಭಾಗದಲ್ಲಿ 13,169 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಒಟ್ಟು 43 ಪರೀಕ್ಷಾ ಕೇಂದ್ರ ಸ್ಥಾಪಿಸಿದ್ದು ಧಾರವಾಡ 16, ಹುಬ್ಬಳ್ಳಿ 18, ಅಳ್ನಾವರ 1, ಕಲಘಟಗಿ 2, ಕುಂದಗೋಳ 3, ನವಲಗುಂದ 2 ಹಾಗೂ ಅಣ್ಣಿಗೇರಿಯಲ್ಲಿ 1 ಪರೀಕ್ಷಾ ಕೇಂದ್ರಗಳಿವೆ. ಈಗಾಗಲೇ ಎಲ್ಲ ಕೇಂದ್ರಗಳಿಗೆ ಭೇಟಿ ಸೌಲಭ್ಯ ಖಚಿತಪಡಿಸಿಕೊಂಡಿದ್ದು ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಸಹ ಕಲ್ಪಿಸಲಾಗುತ್ತದೆ ಎಂದರು.

ಸಕಲ ಸೌಲಭ್ಯ:

ಪರೀಕ್ಷಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ನಕಲು ಮಾಡಲು ಅವಕಾಶ ಹಾಗೂ ಶಾಂತಿಯುತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕೇಂದ್ರಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಸಂಬಂಧಿತ ಚಟುವಟಿಕೆಗಳ ಮೇಲ್ವಿಚಾರಣೆಗಾಗಿ ಜಿಲ್ಲಾ ಖಜಾನೆ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಸಿಸಿ ಕ್ಯಾಮೆರಾ ವೀಕ್ಷಣೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸಿಟಿಂಗ್ ಸ್ಕ್ವಾಡ್‌, ಜಿಲ್ಲಾ ಜಾಗೃತದಳ ಹಾಗೂ ತಾಲೂಕು ಜಾಗೃತ ದಳ ನೇಮಿಸಿ ಪರೀಕ್ಷೆಗಳಲ್ಲಿ ನಕಲು ಆಗದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮುಖ್ಯಾಧಿಕಾರಿ ಹೊರತುಪಡಿಸಿ, ಉಳಿದ ಸಿಬ್ಬಂದಿ ಮೊಬೈಲ್ ಫೋನ್, ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್, ಐ-ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನ ಬಳಸಬಾರದೆಂದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಿಗೆ ಪರೀಕ್ಷಾ ನಿಯಮಗಳ ಬಗ್ಗೆ ಪ್ರತಿ ಕಾಲೇಜುಗಳ ಮೂಲಕ ಮಾಹಿತಿ ನೀಡಲಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಡಾ. ತೇಜಸ್ವಿನಿ ನಾರಾಯಣಕರ, ಎಡಿಸಿ ಗೀತಾ ಸಿ.ಡಿ., ಇದ್ದರು. ಉಚಿತ ಬಸ್ ಪ್ರಯಾಣ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷಾ ದಿನದಂದು ಉಚಿತವಾಗಿ ಪ್ರಯಾಣಿಸಲು ರಾಜ್ಯ ರಸ್ತೆ ಸಾರಿಗೆ ನಿಗಮ ಅವಕಾಶ ಕಲ್ಪಿಸಿದೆ. ಫೆ. 28ರಿಂದ ಮಾ. 17ರ ವರೆಗೆ ಜರುಗುವ ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ತೋರಿಸಿ, ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮ ದಿನಾಚರಣೆ: ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣು ವಿತರಣೆ
ಭೂಮಿಯ ಮೂಲ ಹಕ್ಕುದಾರರಿಗೆ ಆದೇಶಕ್ಕೆ ಆಗ್ರಹಿಸಿ ಪ್ರತಿಭಟನೆ