ಏ.30 ರಿಂದ ಮೇ 13ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2: ಜಿಲ್ಲಾಧಿಕಾರಿ

KannadaprabhaNewsNetwork |  
Published : Apr 29, 2026, 01:45 AM IST
ಕ್ಯಾಪ್ಷನ28ಕೆಡಿವಿಜಿ31 ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2 ರ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಮುಂಬರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2 ಅನ್ನು ಅತ್ಯಂತ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ದಾವಣಗೆರೆಯಲ್ಲಿ ಸೂಚನೆ ನೀಡಿದ್ದಾರೆ.

- ಅಧಿಕಾರಿಗಳು ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಜರುಗಿಸಬೇಕು: ಸೂಚನೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ಜಿಲ್ಲೆಯಲ್ಲಿ ಮುಂಬರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2 ಅನ್ನು ಅತ್ಯಂತ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-2ರ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏ.30ರಿಂದ ಮೇ 13ರವರೆಗೆ ಜಿಲ್ಲೆಯ ವಿವಿಧ ದಿನಾಂಕಗಳಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆ ನಡೆಯುವ ದಿನದಂದು ಆಯಾ ವಿಷಯಗಳ ಉಪನ್ಯಾಸಕರನ್ನು ಮೇಲ್ವಿಚಾರಕರನ್ನಾಗಿ ನೇಮಿಸಬಾರದು ಎಂಬ ನಿಯಮ ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ದೋಷರಹಿತ ಪರೀಕ್ಷೆಗಾಗಿ ಜಿಲ್ಲಾಡಳಿತ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಿದ್ದು, ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.

ಒಟ್ಟು 2995 ವಿದ್ಯಾರ್ಥಿಗಳು:

ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕ ಪಳನಿಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 2995 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದಾವಣಗೆರೆ ತಾಲೂಕಿನಲ್ಲಿ 1629, ಜಗಳೂರು- 391, ಚನ್ನಗಿರಿ- 401, ಹರಿಹರ-321 ಹಾಗೂ ಹೊನ್ನಾಳಿ ತಾಲೂಕಿನಲ್ಲಿ 250 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಜಿಲ್ಲಾ ಖಜಾನೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಇರಿಸಲಾಗಿದ್ದು, ಅಲ್ಲಿ 24*7 ಸಿಸಿಟಿವಿ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಸಾಗಿಸುವ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಲಾಗಿದೆ ಎಂದು ತಿಳಿಸಿದರು.

7 ಪರೀಕ್ಷಾ ಕೇಂದ್ರ, ಎಲ್ಲೆಲ್ಲಿ, ಎಷ್ಟೆಷ್ಟು?:

ದಾವಣಗೆರೆ ತಾಲೂಕು: ಸರ್ಕಾರಿ ಮೋತಿವೀರಪ್ಪ ಪಿಯು ಕಾಲೇಜು, ಸರ್ಕಾರಿ ಪಿಯು ಕಾಲೇಜು (ಬಾಲಕಿಯರ) ಪಿ.ಜೆ. ಬಡಾವಣೆ, ಸರ್ಕಾರಿ ಮುನ್ಸಿಪಲ್ ಪಿಯು ಕಾಲೇಜು. ಹರಿಹರ ತಾಲೂಕು: ಸರ್ಕಾರಿ ಡಿ.ಆರ್.ಎಂ ಪಿಯು ಕಾಲೇಜು. ಜಗಳೂರು ತಾಲೂಕು: ಸರ್ಕಾರಿ ಪಿಯು ಕಾಲೇಜು. ಚನ್ನಗಿರಿ ತಾಲೂಕು: ಸರ್ಕಾರಿ ಪಿಯು ಕಾಲೇಜು. ಹೊನ್ನಾಳಿ ತಾಲೂಕು: ಸರ್ಕಾರಿ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕ್ಷೇತ್ರ ಸ್ಥಾಪಿಸಲಾಗಿದೆ.

ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಪ್ರತಿ ಕೇಂದ್ರಕ್ಕೂ ಒಬ್ಬೊಬ್ಬ ವೀಕ್ಷಕರನ್ನು ನೇಮಿಸಲಾಗಿದ್ದು, ಸಿಸಿಟಿವಿ ಕಣ್ಗಾವಲು ಇರಲಿದೆ. ಅನಗತ್ಯವಾಗಿ ಕೇಂದ್ರದ ಆವರಣಕ್ಕೆ ಬರುವವರ ಮೇಲೆ ನಿಗಾ ಇಡಲು ಮತ್ತು ಪರೀಕ್ಷೆ ಮುಗಿಯುವವರೆಗೆ ಮುಖ್ಯ ದ್ವಾರಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬ ಸಿಬ್ಬಂದಿಯು ಕಡ್ಡಾಯವಾಗಿ ಇಲಾಖೆ ನೀಡಿದ ಗುರುತಿನ ಚೀಟಿಯನ್ನು ಧರಿಸಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿಗಳ ಕೊರತೆಯಿದ್ದಲ್ಲಿ, ಪಕ್ಕದ ಸರ್ಕಾರಿ ಪ್ರೌಢಶಾಲೆಗಳ ಕೊಠಡಿಗಳನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಜಿಪಂ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- - -

(ಬಾಕ್ಸ್‌)

* ಪರೀಕ್ಷಾ ವೇಳಾಪಟ್ಟಿ:

ಏ.30 ಕನ್ನಡ ಅರೇಬಿಕ್, ಮೇ 2ರಂದು ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ ಮತ್ತು ರಸಾಯನ ಶಾಸ್ತ್ರ. ಮೇ 4ರಂದು ಇಂಗ್ಲಿಷ್, ಮೇ 5ರಂದು ವ್ಯವಹಾರ ಅಧ್ಯಯನ, ಭೌತಶಾಸ್ತ್ರ ಮತ್ತು ಶಿಕ್ಷಣಶಾಸ್ತ್ರ. ಮೇ 6ರಂದು ಅರ್ಥಶಾಸ್ತ್ರ ಮತ್ತು ಜೀವಶಾಸ್ತ್ರ, ಮೇ 7ರಂದು ಇತಿಹಾಸ, ಗಣಿತ ಮತ್ತು ಗೃಹವಿಜ್ಞಾನ ಮೇ 8ರಂದು ರಾಜ್ಯಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಕ ಶಾಸ್ತ್ರ. ಮೇ 9ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ ಮತ್ತು ಮೂಲಗಣಿತ, ಮೇ 11ರಂದು ಸಮಾಜ ಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ಮೇ 12ರಂದು ಹಿಂದಿ, ಮೇ 13ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ. ಈ ಎಲ್ಲ ಪರೀಕ್ಷೆಗಳೂ ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿ ಮಧ್ಯಾಹ್ನ 1.00 ಗಂಟೆಗೆ ನಡೆಯಲಿವೆ.

ಮೇ 13ರಂದು ಅಪರಾಹ್ನ 2 ರಿಂದ ಸಂಜೆ 4.15 ರವರೆಗೆ ಹಿಂದುಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ ಮತ್ತು ಬ್ಯೂಟಿ ಅಂಡ್ ವೆಲ್ ನೆಸ್ ಪರೀಕ್ಷೆಗಳು ನಡೆಯಲಿವೆ.

- - -

-28ಕೆಡಿವಿಜಿ31:

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಪೂರ್ವಭಾವಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒತ್ತಡ ನಿರ್ವಹಣೆಗೆ ವ್ಯಕ್ತಿತ್ವ ವಿಕಸನ ಪೂರಕ
ಕನ್ನಡ ಪಠ್ಯಪುಸ್ತಕ ಸರಳೀಕರಣಕ್ಕೆ ಇಲಾಖೆ ಚಿಂತನೆ