ನ್ಯಾಯಾಲಯದಲ್ಲಿ ಭದ್ರತಾ ಲೋಪ, 6ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗಿಲ್ಲ ಗನ್ ಮ್ಯಾನ್ ಭದ್ರತೆ

KannadaprabhaNewsNetwork |  
Published : Jul 25, 2024, 01:19 AM ISTUpdated : Jul 25, 2024, 01:20 AM IST
32 | Kannada Prabha

ಸಾರಾಂಶ

ಕಾನೂನು, ನ್ಯಾಯಾಲಯ, ನ್ಯಾಯವಾದಿಗಳು ಹಾಗೂ ನ್ಯಾಯಾಧೀಶರೆಂದರೆ ಪೊಲೀಸ್ ಅಧಿಕಾರಿಗಳಿಗೆ ಮೊದಲಿನಿಂದಲೂ ನಿರ್ಲಕ್ಷ್ಯ!, ಕೇವಲ ಜನಪ್ರತಿನಿಧಿಗಳಿಗೆ ಭದ್ರತೆ ಒದಗಿಸುವುದು ಮಾತ್ರ ಪೊಲೀಸರ ಕೆಲಸವಲ್ಲ. ನ್ಯಾಯದೇವತೆಗೇ ಭದ್ರತೆ ನೀಡಲು ನಿರಾಕರಿಸಿರುವ ನಮ್ಮ ಪೊಲೀಸ್ ಇಲಾಖೆಯು ಜನಸಾಮಾನ್ಯರಿಗೆ ಭದ್ರತೆ ನೀಡಲು ಹೇಗೆ ಸಾಧ್ಯ?.

ಕನ್ನಡಪ್ರಭ ವಾರ್ತೆ ಮೈಸೂರು

ಕಳೆದ ಒಂದು ವರ್ಷದಿಂದ ಮೈಸೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರೊಬ್ಬರಿಗೆ ಗನ್ ಮ್ಯಾನ್ ಭದ್ರತೆ ಒದಗಿಸಲು ಪೊಲೀಸ್ ಆಯುಕ್ತರು ವಿಫಲರಾಗಿರುವ ಸಂಗತಿ ಬಯಲಾಗಿದೆ.

ಮೈಸೂರಿನ ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ 6ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ನೀಡಲಾಗಿದ್ದ ಗನ್ ಮ್ಯಾನ್ ಭದ್ರತೆಯನ್ನು ಹಿಂಪಡೆದು ವರುಷ ಉರುಳಿದೆ. ಪಿ.ಜೆ.ಸೋಮಶೇಖರ ಅವರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರ ಸ್ವೀಕರಿಸಿ ವರುಷ ಉರುಳಿದರೂ ಅವರಿಗೆ ಗನ್ ಮ್ಯಾನ್ ಭದ್ರತೆ ಒದಗಿಸುವಲ್ಲಿ ಪೊಲೀಸ್ ಆಯುಕ್ತರು ವಿಫಲರಾಗಿದ್ದಾರೆ.

ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಟು ಜಿಲ್ಲಾ ನ್ಯಾಯಾಧೀಶರು, ನಾಲ್ಕು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಔದ್ಯಮಿಕ ನ್ಯಾಯಾಧೀಕರಣದ ಪೀಠಾಸೀನಾಧಿಕಾರಿಗಳಿಗೆ ಸಶಸ್ತ್ರ ಮೀಸಲು ಪಡೆಯಿಂದ ಗನ್ ಮ್ಯಾನ್ ಭದ್ರತೆಯನ್ನು ಒದಗಿಸಿರುವಾಗ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಗನ್ ಮ್ಯಾನ್ ಭದ್ರತೆಯನ್ನು ನೀಡಲು ನಿರಾಕರಿಸಿರುವ ಪೊಲೀಸ್ ಆಯುಕ್ತರ ನಿರ್ಧಾರ ಅನುಮಾನಾಸ್ಪದವಾಗಿದೆ.

6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಕೊಲೆ, ಸುಲಿಗೆ, ದರೋಡೆ, ಡಕಾಯತಿಯಂತಹ ಗಂಭೀರ ಅಪರಾಧ ಮತ್ತು ಅಪರಾಧಿಗಳ ವಿಚಾರಣೆ ನಡೆಯುತ್ತಿರುತ್ತದೆ. ಜೀವಾವಧಿ ಶಿಕ್ಷೆಯಿಂದ ಹಿಡಿದು ಗಲ್ಲು ಶಿಕ್ಷೆ ವಿಧಿಸಬಹುದಾದಂತಹ ಗಂಭೀರ ಅಪರಾಧ ಎಸಗಿರುವ ಆರೋಪಿಗಳು ಈ ನ್ಯಾಯಾಲಯಕ್ಕೆ ಬಂದು ಹೋಗುತ್ತಿರುತ್ತಾರೆ. ಹೀಗಿರುವಾಗ ಇಂತಹ ಗಂಭೀರ ಪ್ರಕರಣಗಳಲ್ಲಿ ನ್ಯಾಯಾಧೀಶರಿಗೆ ಭದ್ರತೆ ಒದಗಿಸುವುದು ಪೊಲೀಸ್ ಆಯುಕ್ತರ ಕರ್ತವ್ಯ ಹಾಗೂ ಜವಾಬ್ದಾರಿ.

ಈ ಕೂಡಲೇ ಮೈಸೂರಿನ ಪೊಲೀಸ್ ಆಯುಕ್ತರು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಗನ್ ಮ್ಯಾನ್ ಭದ್ರತೆ ಒದಗಿಸಿ ನ್ಯಾಯಾಲಯವು ನಿರ್ಭೀತಿಯಿಂದ ಕಾರ್ಯ ನಿರ್ವಹಿಸಲು ಸಹಕರಿಸಿ ಜವಾಬ್ದಾರಿ ಮೆರೆಯಬೇಕಾಗಿದೆ. ಕಾನೂನು, ನ್ಯಾಯಾಲಯ, ನ್ಯಾಯವಾದಿಗಳು ಹಾಗೂ ನ್ಯಾಯಾಧೀಶರೆಂದರೆ ಪೊಲೀಸ್ ಅಧಿಕಾರಿಗಳಿಗೆ ಮೊದಲಿನಿಂದಲೂ ನಿರ್ಲಕ್ಷ್ಯ!, ಕೇವಲ ಜನಪ್ರತಿನಿಧಿಗಳಿಗೆ ಭದ್ರತೆ ಒದಗಿಸುವುದು ಮಾತ್ರ ಪೊಲೀಸರ ಕೆಲಸವಲ್ಲ. ನ್ಯಾಯದೇವತೆಗೇ ಭದ್ರತೆ ನೀಡಲು ನಿರಾಕರಿಸಿರುವ ನಮ್ಮ ಪೊಲೀಸ್ ಇಲಾಖೆಯು ಜನಸಾಮಾನ್ಯರಿಗೆ ಭದ್ರತೆ ನೀಡಲು ಹೇಗೆ ಸಾಧ್ಯ?.ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ನೀಡಲಾಗಿದ್ದ ಗನ್ ಮ್ಯಾನ್ ಭದ್ರತೆಯನ್ನು ಪೊಲೀಸ್ ಆಯುಕ್ತರು ಹಿಂಪಡೆದ ವಿಚಾರವಾಗಿ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಶಿಸ್ತುಕ್ರಮ ಜರುಗಿಸಬೇಕಾಗಿದೆ.

- ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು