ಕನ್ನಡಪ್ರಭ ವಾರ್ತೆ ಮಡಿಕೇರಿ
ಅರೆಭಾಷಿಕ ಗೌಡ ಜನಾಂಗವನ್ನು ತೇಜೋವಧೆ ಮಾಡಿದವರ ವಿರುದ್ಧ ದೂರು ನೀಡಿದ್ದರೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿವಿಧ ಗೌಡ ಸಂಘಟನೆಗಳಿಂದ 20ರಂದು ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ, ನಗರದ ಸುಬೇದಾರ್ ಗುಡ್ಡೆಮನೆ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಯಾವುದೇ ಘೋಷಣೆಗಳನ್ನು ಕೂಗದೆ ಕೂಗದೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಪ್ರಚೋದನೆಯ ಹೇಳಿಕೆಗಳನ್ನು ನೀಡಿ ಶಾಂತಿ ಕದಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಜನಾಂಗದವರು ಕಳೆದ ಅನೇಕ ವರ್ಷಗಳಿಂದ ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಾ ಬಂದಿದ್ದಾರೆ. ಪ್ರಮುಖ ಜನಾಂಗಗಳಾದ ಅರೆಭಾಷಿಕ ಗೌಡ ಹಾಗೂ ಕೊಡವ ಜನಾಂಗದ ಮಂದಿ ಅತ್ಯಂತ ಉತ್ತಮ ಸಂಬಂಧ ಹೊಂದಿದ್ದಾರೆ. ವಾಣಿಜ್ಯ ವ್ಯವಹಾರಗಳಲ್ಲಿ ಸಹಕಾರಿಯಾಗಿ, ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕವಾಗಿ ಬಹಳಷ್ಟು ಸ್ನೇಹ ಪೂರಕವಾಗಿದ್ದಾರೆ ಎಂದರು.ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮಹಾ ಮೃತ್ಯುಂಜಯ ದೇವಸ್ಥಾನದಲ್ಲಿ ಜಾತಿ, ಜನಾಂಗದ ಬೇಧ ಭಾವವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ದೇವಸ್ಥಾನದ ನಿರ್ಮಾಣ ಮಾಡಿದ್ದಾರೆ. ದೇವಸ್ಥಾನದಲ್ಲಿ ಮೂಡಿರುವ ಭಿನ್ನಾಭಿಪ್ರಾಯ ಒಂದು ಊರಿಗೆ ಸಂಬಂಧಿಸಿದ ವಿಚಾರವಾಗಿದೆ. ಇದನ್ನು ಕಟ್ಟೆಮಾಡು ಗ್ರಾಮದವರೇ ಇತ್ಯರ್ಥ ಮಾಡಿಕೊಳ್ಳಬಹುದಾಗಿತ್ತು, ಅಲ್ಲದೆ ಎಲ್ಲಾ ಸನ್ನಿವೇಶಗಳನ್ನು ಸ್ಥಳೀಯರೇ ಸರಿಪಡಿಸುವ ಅವಕಾಶಗಳಿತ್ತು. ಆದರೆ ಈ ಭಿನ್ನಾಭಿಪ್ರಾಯದ ಲಾಭವನ್ನು ಪಡೆಯಲೆಂದು ಸಂಘಟನೆಯೊಂದರ ಅಧ್ಯಕ್ಷರು ವೀಡಿಯೋ ಕ್ಲಿಪ್ ಮಾಡಿ ಅರೆಭಾಷಿಕ ಗೌಡ ಜನಾಂಗವನ್ನು ನಿಂದಿಸಿ ಅಶಾಂತಿಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದರು.
ಜನಾಂಗದ ನಿಂದನೆ, ಅಪಮಾನ, ಕಪೋಲ ಕಲ್ಪಿತ ಇತಿಹಾಸ ಸೃಷ್ಟಿಸಿ ಪ್ರಚೋದನೆ ನೀಡಿದ ಆರೋಪದಡಿ ಅವರ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಪೊಲೀಸ್ ಅಧೀಕ್ಷಕರಿಗೂ ದೂರು ನೀಡಲಾಗಿತ್ತು. ಆದರೆ ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಅವರ ಅನುಯಾಯಿಗಳು ಪೊನ್ನಂಪೇಟೆಯಲ್ಲಿ ಮತ್ತೆ ಗೌಡ ಜನಾಂಗವನ್ನು ತೇಜೋವಧೆ ಮಾಡಿದ್ದಾರೆ.ಈ ಕುರಿತು ಜ.9 ರಂದು ದೂರು ನೀಡಿದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಘಟನೆಯ ಅಧ್ಯಕ್ಷರ ವಿರುದ್ಧ ಪೊಲೀಸ್ ಇಲಾಖೆಯೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರೂ ಇಲ್ಲಿಯವರೆಗೆ ದಸ್ತಗಿರಿ ಮಾಡಿಲ್ಲ. ಇದಕ್ಕೆ ಪ್ರಭಾವಿ ವ್ಯಕ್ತಿಗಳ ಕೈವಾಡವೇ ಕಾರಣವಿರಬಹುದು ಎನ್ನುವ ಅನುಮಾನ ಮೂಡುತ್ತಿದೆ ಎಂದು ರಿಶಿತ್ ಮಾದಯ್ಯ ಆರೋಪಿಸಿದರು.
ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು. ತಪ್ಪಿದಲ್ಲಿ ಪ್ರಚೋದನಾಕಾರಿ ಹೇಳಿಕೆಗಳು ನಿರಂತರವಾಗಿ ಬರುತ್ತಲೇ ಇರುತ್ತವೆ ಎಂದು ಅಭಿಪ್ರಾಯಪಟ್ಟರು.ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ, ಕಟ್ಟೆಮಾಡು ದೇವಾಲಯದ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶಾಂತಿಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇದಕ್ಕೆ ಬೆಲೆ ನೀಡದ ಕೆಲವರು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಒಕ್ಕಲಿಗ ಗೌಡ ಮತ್ತು ಅರೆಭಾಷೆ ಗೌಡರ ನಡುವೆ ದ್ವೇಷ ಬಿತ್ತುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕುಶಾಲನಗರ ಗೌಡ ಯುವಕ ಸಂಘದ ನಿರ್ದೇಶಕ ಪೆರುಬಾಯಿ ನವೀನ್, ಕೊಡಗು ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಬೈತಡ್ಕ ಜಾನಕಿ ಬೆಳ್ಳಿಯಪ್ಪ ಹಾಗೂ ನಿದೇಶಕರಾದ ಕರ್ಣಯ್ಯನ ಗುಲಾಬಿ ಇದ್ದರು.