- ಕಾರ್ಯಕ್ರಮ ಉದ್ಘಾಟಿಸಿ ಶರಣಗೌಡ ಪಾಟೀಲ್ ಸಲಹೆ
ಹಿರಿಯ ನಾಗರಿಕರು ತಮ್ಮ ಹಕ್ಕುಗಳು ಮತ್ತು ಸರ್ಕಾರದಿಂದ ದೊರೆಯುವ ಸಕಲ ಸೌಲಭ್ಯಗಳು ಹಾಗೂ ಕಾನೂನು ರಕ್ಷಣೆಯ ಕುರಿತು ಸಂಪೂರ್ಣ ಅರಿವು ಹೊಂದುವುದರ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಶರಣಗೌಡ ಪಾಟೀಲ್ ಕ್ಯಾತಾನಾಳ ಹೇಳಿದರು.
ವಡಗೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ಉಚಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಹಿರಿಯ ನಾಗರಿಕರಿಗೆ ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕು ಇದೆ.ಅವರ ಹಕ್ಕುಗಳಿಗೆ ಧಕ್ಕೆ ಉಂಟಾ ದಾಗ ಅಥವಾ ಕುಟುಂಬ ಹಾಗೂ ಸಮಾಜದಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾದಾಗ ಮೌನವಾಗಿರದೆ ಕಾನೂನು ನೆರವು ಪಡೆಯಬೇಕು. ಹಿರಿಯ ನಾಗರಿಕರ ರಕ್ಷಣೆಗಾಗಿ ಸರ್ಕಾರ ವಿವಿಧ ಕಾನೂನುಗಳು ಹಾಗೂ ಸೌಲಭ್ಯಗಳನ್ನು ಜಾರಿಗೊಳಿಸಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಲು ಅಗತ್ಯವಾದ ಮಾಹಿತಿ ಪ್ರತಿಯೊಬ್ಬ ಹಿರಿಯ ನಾಗರಿಕರಿಗೂ ತಲುಪಬೇಕು ಎಂದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ ಗುತ್ತೇದಾರ ಮಾತನಾಡಿ, ವಯಸ್ಸಾದಂತೆ ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳು ಕಂಡುಬರುವುದು ಸಹಜ.ಆದರೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಗಳನ್ನು ನಿರ್ಲಕ್ಷ್ಯ ಮಾಡದೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಉಪ ತಹಸೀಲ್ದಾರ್ ಪ್ರಕಾಶ ಹೊಸಮನಿ,ನೇತ್ರಾಧಿಕಾರಿ ಶ್ರೀನಿವಾಸ್,ನಿವೃತ್ತ ಶಿಕ್ಷಕ ಸಿದ್ದಪ್ಪ ಬಬಲಾದ, ಎ ಪಿ ಡಿ ಸಂಸ್ಥೆಯ ತಾಲೂಕು ಸಂಯೋಜಕ ರಮೇಶ್ ಕಟ್ಟಿಮನಿ, ವೈದ್ಯಕೀಯ ಸಿಬ್ಬಂದಿ, ತಾಲೂಕಿನ ಹಿರಿಯ ನಾಗರಿಕರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.
19ವೈಡಿಆರ್7 : ವಡಗೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.