- ಮಡಬೂರಿನಲ್ಲಿ ಹಿರಿಯ ನಾಗರಿಕರ ದಿನ
ಸರ್ಕಾರ ಹಿರಿಯ ನಾಗರಿಕರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಜೆಎಂಎಪ್ ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ತಿಳಿಸಿದರು.
ಬುಧವಾರ ಮಡಬೂರಿನ ಡಿಎನ್ ವಿ ಸಮುದಾಯ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಹಿರಿಯ ನಾಗರಿಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾನೂನು ಸೇವಾ ಸಮಿತಿಯಿಂದ ಮಹಿಳೆಯರಿಗೆ, 5 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಬಡವರಿಗೆ ಕಾನೂನು ಸೇವಾ ಸಮಿತಿಯಿಂದ ಉಚಿತವಾಗಿ ಕಾನೂನು ನೆರವು ನೀಡುತ್ತೇವೆ. ತ್ವರಿತಗತಿಯಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಈ ಸೌಲಭ್ಯ ಸಹ ಮಹಿಳೆಯರು, ಬಡವರು ಉಪಯೋಗಿಸಿಕೊಳ್ಳಬೇಕು ಎಂದರು.ಸಭೆ ಅಧ್ಯಕ್ಷತೆ ವಹಿಸಿದ್ದ ಮಡಬೂರು ಪಂಚವಟಿ ಸೇವಾ ಕೇಂದ್ರ ವೃದ್ಧಾಶ್ರಮದ ಅಧ್ಯಕ್ಷ ಡಿ.ಸಿ.ದಿವಾಕರ ಮಾತನಾಡಿ, ಹಿರಿಯ ನಾಗರಿಕರನ್ನು ಮಕ್ಕಳು ವೃದ್ದಾಪ್ಯದಲ್ಲಿ ಚೆನ್ನಾಗಿ ನೋಡಿಕೊಳ್ಳಬೇಕು. ಹಿರಿಯ ನಾಗರಿಕರಿಗೆ ಅನುಕೂಲವಾಗಲಿ ಎಂದು ಮಡಬೂರಿನಲ್ಲಿ ದಾನಿಗಳ ಸಹಕಾರದೊಂದಿಗೆ ಪಂಚವಟಿ ಸೇವಾ ಕೇಂದ್ರ ಪ್ರಾರಂಭಿಸಿದ್ದು ಪ್ರಸ್ತುತ 10 ಜನ ಹಿರಿಯ ನಾಗರಿಕರಿದ್ದಾರೆ. ಸಾಮಾನ್ಯ ಜನರಿಗೆ ಅನುಕೂಲವಾಗುವ ದೃಷ್ಠಿಯಿಂದ ಮಡಬೂರಿನಲ್ಲಿ ಡಿಎನ್ ವಿ ಸಮುದಾಯ ಭವನ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಎರಡನೇ ತಾಯಿಯಿದ್ದಂತೆ. ಪುಟ್ಟ ಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅತಿಥಿಗಳಾಗಿ ಮಡಬೂರು ಪಂಚವಟಿ ಸೇವಾ ಕೇಂದ್ರದ ಉಪಾಧ್ಯಕ್ಷ ಎಲ್.ಎಂ.ಸತೀಶ್, ಖಜಾಂಚಿ ಎಸ್.ಎಸ್. ಶಾಂತಕುಮಾರ್, ಸದಸ್ಯರಾದ ವನಮಾಲಮ್ಮ, ಕೃಷ್ಣಪ್ಪಗೌಡರು, ರೋಟರಿ ಕ್ಲಬ್ ಅಧ್ಯಕ್ಷ ದಿವಾಕರ್ ಇದ್ದರು. ಮಂಜುಳಾ ಸ್ವಾಗತಿಸಿದರು. ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.ಶೈಲಾ ವಂದಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.