ಪ್ರತ್ಯೇಕ ಸಚಿವಾಲಯದ ಜೊತೆಗೆ ಬೆಳಗಾವಿಯನ್ನು ಎರಡನೇ ರಾಜಧಾನಿ ಎಂದು ಘೋಷಿಸಬೇಕು ಹಾಗೂ ಸುವರ್ಣ ಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರವನ್ನಾಗಿಸುವಂತೆ ಆಗ್ರಹ
ಕನ್ನಡಪ್ರಭ ವಾರ್ತೆ ಬೆಳಗಾವಿ
ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಿತ್ತೂರು ಕರ್ನಾಟಕದ 7 ಜಿಲ್ಲೆಗಳ ಎಲ್ಲಾ ಜನಪ್ರತಿನಿಧಿಗಳಿಗೆ ಇಂದಿನಿಂದ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ಹೇಳಿದರು.ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಸಚಿವಾಲಯದ ಜೊತೆಗೆ ಬೆಳಗಾವಿಯನ್ನು ಎರಡನೇ ರಾಜಧಾನಿ ಎಂದು ಘೋಷಿಸಬೇಕು ಹಾಗೂ ಸುವರ್ಣ ಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರವನ್ನಾಗಿಸಬೇಕೆಂಬ ಅಭಿಲಾಷೆ ಇಟ್ಟುಕೊಂಡು ಹಲವು ದಶಕಗಳಿಂದ ವಿವಿಧ ಸಂಘಟನೆಗಳು ಹೋರಾಟ ಮುಂದುವರಿಸಿವೆ ಎಂದರು.
ಈ ಹೋರಾಟದ ಭಾಗವಾಗಿ ಈಗ ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಅಂಚೆ ಇಲಾಖೆ ಮೂಲಕ ಪತ್ರ ಚಳವಳಿ ನಡೆಸಿದ್ದೇವೆ ಎಂದರು. ಇನ್ನು ಅಕ್ಟೋಬರ್ ತಿಂಗಳಾದ್ಯಂತ ಜನಸಂಪರ್ಕ ಅಭಿಯಾನದಡಿ ಕಿತ್ತೂರು ಕರ್ನಾಟಕದ ಏಳು ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳನ್ನು ಭೇಟಿ ಮಾಡುವ ಮೂಲಕ ನಮ್ಮ ಹಕ್ಕೋತಾಯ ಮಂಡಿಸಲಿದ್ದೇವೆ. ಅಲ್ಲದೇ ಜನಪ್ರತಿನಿಧಿಗಳು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕೂಡಲೇ ಪ್ರತ್ಯೇಕ ಸಚಿವಾಲಯ ಮಂಜೂರು ಮಾಡಿಸಬೇಕೆಂದು ಮನವಿ ಮಾಡುತ್ತೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.