ಕರಾವಳಿಗೆ ಪ್ರತ್ಯೇಕ ಪ್ರವಾಸಿ ನೀತಿ: ಡಿಕೆಶಿ

KannadaprabhaNewsNetwork |  
Published : Jan 11, 2026, 02:30 AM IST
ಕರಾವಳಿ ಪ್ರವಾಸೋದ್ಯಮ ಸಮಾವೇಶ | Kannada Prabha

ಸಾರಾಂಶ

ರಾಜ್ಯ ಸರ್ಕಾರವು ಕರಾವಳಿ-ಮಲೆನಾಡು ಜಿಲ್ಲೆಗಳಿಗೆ ಪೂರಕವಾಗುವ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಜ್ಯ ಸರ್ಕಾರವು ಕರಾವಳಿ-ಮಲೆನಾಡು ಜಿಲ್ಲೆಗಳಿಗೆ ಪೂರಕವಾಗುವ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ಪ್ರವಾಸೋದ್ಯಮ ಸಮಾವೇಶ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ 300 ಕಿಮೀ ಉದ್ದದ, ಸಂಪದ್ಭರಿತ ಕರಾವಳಿ ತೀರ ಪ್ರದೇಶವಿದ್ದರೂ ಹಲವು ಕಾರಣಗಳಿಂದ ಪ್ರವಾಸೋದ್ಯಮದಲ್ಲಿ ಹಿಂದುಳಿದಿದೆ. ಇದೀಗ ಈ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಕಾನೂನು ಅಡೆತಡೆಗಳನ್ನು ನಿವಾರಿಸುವ ಉದ್ದೇಶದಿಂದ ಹೂಡಿಕೆದಾರರು, ಉನ್ನತ ಅಧಿಕಾರಿಗಳು, ಸ್ಥಳೀಯ ಸಂಘ-ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿದ ಬಳಿಕ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಿ ಕ್ಯಾಬಿನೆಟ್‌ಗೆ ತರುವ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.

ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತನ್ನೊಳಗೊಂಡ ಪ್ರವಾಸಿಗರ ಸ್ವರ್ಗ. ಇಲ್ಲಿನ ಹಿರಿಯರು ಸಂಪತ್ತಿನ ಜತೆಗೆ ರಾಷ್ಟ್ರಕ್ಕೆ ಹಲವು ಬ್ಯಾಂಕ್‌ಗಳ ಕೊಡುಗೆ ನೀಡಿದ್ದಾರೆ. ಈ ಭಾಗವು ಶಿಕ್ಷಣದ ಹಬ್ ಆಗಿ ಸಶಕ್ತ ಮಾನವ ಸಂಪನ್ಮೂಲ ತಯಾರಿಯಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದ ಬೇರೆ ಯಾವ ಜಿಲ್ಲೆಯಲ್ಲೂ ಇಂತಹ ವ್ಯವಸ್ಥೆ ಇಲ್ಲ. ಕರಾವಳಿ- ಮಲೆನಾಡಿನ ಪ್ರಕೃತಿ ಸೌಂದರ್ಯ ಗೋವಾ ರಾಜ್ಯಕ್ಕೆ ಕಡಿಮೆಯಿಲ್ಲ. ಹಾಗಿದ್ದರೂ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಎಲ್ಲೋ ಎಡವಿದ್ದೇವೆ. ಈ ಅಡೆತಡೆಗಳನ್ನು ನಿವಾರಿಸಿ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಅದನ್ನು ಮಂಗಳೂರಿನಿಂದಲೇ ಚರ್ಚಿಸಿ ಆರಂಭಿಸಲಾಗುವುದು, ಅದಕ್ಕಾಗಿ ಈ ಮಹತ್ವದ ಸಮಾವೇಶ ಏರ್ಪಡಿಸಲಾಗಿದೆ ಎಂದರು.

ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಪ್ರವಾಸೋದ್ಯಮ ಎನ್ನುವುದು ಹೂಡಿಕೆ. ಕರಾವಳಿಯಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅತ್ಯುತ್ತಮ ಪ್ರದೇಶಗಳಿದ್ದು, ಕೈಗಾರಿಕೆಗಳ ಮಾದರಿಯಲ್ಲಿ ಇವುಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಆಗಬೇಕಿದೆ. ಕೈಗಾರಿಕೆಗಳಿಗೆ ಕೆಐಎಡಿಬಿ ಮೂಲಕ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ಮೂಲ ಸೌಕರ್ಯ ಒದಗಿಸುವಂತೆ ಪ್ರವಾಸೋದ್ಯಮ ಅಭಿವೃದ್ಧಿಗೂ ಭೂಸ್ವಾಧೀನ ಮಾಡಿದರೆ ಹೂಡಿಕೆ ಮಾಡಲು ಸಾಕಷ್ಟು ಮಂದಿ ಸಿದ್ಧರಿದ್ದಾರೆ. ಈ ನಿಟ್ಟಿನಲ್ಲಿ ಸಮಗ್ರ ನಿರ್ಧಾರಕ್ಕೆ ಬರಬೇಕಾಗಿದೆ ಎಂದು ಸಲಹೆ ನೀಡಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಕರಾವಳಿ ಪ್ರವಾಸೋದ್ಯಮದಲ್ಲಿ ಮಂಗಳೂರು, ಉಡುಪಿ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಆದರೆ, ಉತ್ತರ ಕನ್ನಡ ಹಿಂದುಳಿದಿದೆ. ರಾಜ್ಯದಲ್ಲೇ ಶೇ.80ರಷ್ಟು ಹಸಿರು ಪ್ರದೇಶ ಇರುವ ಜಿಲ್ಲೆ ರಾಜ್ಯದಲ್ಲೇ ಬೇರೆ ಇಲ್ಲ. ಪ್ರಗತಿಗೆ ಪೂರಕವಾಗಿ, ಉದ್ಯೋಗ ಸೃಷ್ಟಿಯ ಯೋಜನೆ ಬರಬೇಕಿದೆ ಎಂದರು.

ಶಾಸಕ ಸುನಿಲ್ ಕುಮಾರ್ ಮಾತನಾಡಿ, ಟೆಂಪಲ್, ಇಕೋ, ಬೀಚ್ ಪ್ರವಾಸೋದ್ಯಮ ಅಡಿಪಾಯವಾಗಿರಿಸಿ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಾಗಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಕೆ.ವಿ.ತಿಲೋಕಚಂದ್ರ ಅವರು ಕರಾವಳಿ ಪ್ರವಾಸೋದ್ಯಮದ ರೂಪುರೇಷೆಗಳನ್ನು ವಿವರಿಸಿದರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಯಶಪಾಲ್ ಸುವರ್ಣ, ಸುರೇಶ್ ಗುರ್ಮೆ, ಕಿಶೋರ್ ಕುಮಾರ್, ಕಿರಣ್ ಕೊಡ್ಗಿ, ಸತೀಶ್, ಐವನ್ ಡಿಸೋಜ, ರಾಜೇಗೌಡ, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಅಕ್ರಮ್ ಪಾಷಾ ಇದ್ದರು.ಛಲ ಮೂಡಿಸಲು ಟೀಕೆ ಮಾಡಿದ್ದೆ: ಶಿವಕುಮಾರ್‌

ಕೆಲ ದಿನಗಳ ಹಿಂದೆ ನಾನು ‘ಮಂಗಳೂರು ರಾತ್ರಿ 7-8 ಗಂಟೆಗೇ ಡೆಡ್‌ ಸಿಟಿಯಾಗುತ್ತದೆ’ ಎಂದು ಹೇಳಿದ್ದೆ. ಈ ಕಾರಣದಿಂದಲಾದರೂ ಈ ಭಾಗಕ್ಕೆ ಛಲ ಮೂಡಿ ಏಳಿಗೆಗೆ ಕಾರಣವಾಗಲಿ ಎಂಬ ಕಾರಣಕ್ಕೆ ಈ ಟೀಕೆ ಮಾಡಿದ್ದೆ ಎಂದು ತಿಳಿಸಿದ ಡಿ.ಕೆ.ಶಿವಕುಮಾರ್‌ ಅವರು, ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಆದರೆ ಸಿಕ್ಕಿದ ಅವಕಾಶದಲ್ಲಿ ಮಾಡಿದ ಕಾರ್ಯಗಳು ಮಾತ್ರ ಉಳಿಯುತ್ತವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ಕಾರ್ಯಕ್ಕೆ ಕೈಹಾಕಿದ್ದೇವೆ ಎಂದರು.ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು:

ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶವಿದ್ದು, ಸರ್ಕಾರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಿದೆ. ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ಪ್ರವಾಸೋದ್ಯಮ ಸಮಾವೇಶದ ಸಮಾರೋಪದಲ್ಲಿ ಅವರು ಮಾತನಾಡಿದರು.

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 5 ವರ್ಷದ ನೀತಿ ಘೋಷಣೆ ಮಾಡಿ ಜಾರಿಗೆ ತಂದಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ್‌, ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ಇವರು ಈ ಭಾಗದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಎಲ್ಲರ ಸಹಕಾರದಿಂದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದರು.ಬೆಂಗಳೂರು ಹೊರತುಪಡಿಸಿದರೆ ಆದಾಯ ಹೆಚ್ಚು ಇರುವ ನಗರ ಮಂಗಳೂರು. ದೇಶದಲ್ಲಿ ಮಹಾರಾಷ್ಟ್ರ ಬಿಟ್ಟರೆ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ದ್ವಿತೀಯ ಸ್ಥಾನದಲ್ಲಿದೆ. 320 ಕಿ.ಮೀ. ಉದ್ದದ ಈ ಕರಾವ‍ಳಿಯಲ್ಲಿ ಶಿಕ್ಷಣ, ಬ್ಯಾಂಕಿಂಗ್‌, ಆರೋಗ್ಯ, ಸಂಸ್ಕೃತಿ ಎಲ್ಲವೂ ಇದೆ. ಆದರೆ ಪ್ರವಾಸೋದ್ಯಮ ಮಾತ್ರ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಂಡಿಲ್ಲ. ಕೇರಳಕ್ಕಿಂತ ಕರ್ನಾಟಕ ಪ್ರವಾಸೋದ್ಯಮದಲ್ಲಿ ಮುಂದೆ ಇರಬೇಕು. ಹಾಗಾದಾಗ ಮಾತ್ರ ಆದಾಯದಲ್ಲೂ ಕರಾವಳಿ ಕರ್ನಾಟಕ ಮುಂಚೂಣಿ ದಾಖಲಿಸಲು ಸಾಧ್ಯವಿದೆ ಎಂದರು.

ಶಾಂತಿಸ್ಥಾಪನೆ ಉಳಿಸಿಕೊಳ್ಳಿ:ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಮಾತ್ರ ಅಂತಹ ಪ್ರದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಸದ್ಯ ಇಲ್ಲಿ ಶಾಂತಿ ಸ್ಥಾಪನೆಯಾಗಿದ್ದು, ಇದು ಹೀಗೆಯೇ ಮುಂದುವರಿಯಬೇಕು. ಜಾತಿ, ಧರ್ಮಗಳ ಹೆಸರಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಹೊರತು ದ್ವೇಷವನ್ನು ಬೋಧಿಸಿಲ್ಲ. ಕರಾವಳಿ ಯಾವಾಗಲೂ ಕುವೆಂಪು ಕಲ್ಪನೆಯ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು. ಇದಕ್ಕೆ ಪೂರಕವಾದ ಎಲ್ಲ ಸಹಕಾರವನ್ನೂ ಸರ್ಕಾರ ನೀಡುತ್ತದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಠಾರೋತ್ಸವ: ಚೆಲುವನಾರಾಯಣಸ್ವಾಮಿಗೆ ಪುಷ್ಪಾಲಂಕಾರ ಸೇವೆ
ಹಿಪ್ಪು ನೇರಳೆ ಮತ್ತು ರೇಷ್ಮೆ ಲಾಭದಾಯಕ ಬೆಳೆಗಳು