ಕೊಪ್ಪಳ: ಜನಪ್ರತಿನಿಧಿಗಳು ನಿಸ್ವಾರ್ಥದಿಂದ ಜನರ ಸೇವೆ ಮಾಡಿದರೆ ಅವರು ನಮಗೆ ಯಾವಾಗಲೂ ಆಶೀರ್ವಾದ ಮಾಡುತ್ತಾರೆ. ಹಾಗಾಗಿ ನಮ್ಮ ಸೇವೆ ಯಾವಾಗಲೂ ಜನಪರವಾಗಿರಬೇಕೆಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ್ ಹೇಳಿದರು.
ನಾಯಕರಾದವರು ಮೊದಲು ಅವಕಾಶ ವಂಚಿತರಿಗೆ ಅನುಕೂಲ ಮಾಡಿಕೊಡಬೇಕು. ತಾವು ಕುರ್ಚಿಯಲ್ಲಿ ಕುಳಿತ ಮೇಲೆ ಜನರ ಸಮಸ್ಯೆಗಳಿಗೆ ಪರಿಹಾರ ನೀಡದಿದ್ದರೆ ಜಾತ್ರೆಯಲ್ಲಿ ದೇವರು ಕೂಡಿಸಿ ಮೆರೆಸಿದಂತಾಗುತ್ತದೆ. ತಮ್ಮಿಂದ ಸಮಾಜದಲ್ಲಿ ಪರಿವರ್ತನೆಯಾಗಬೇಕು. ಗ್ರಾಪಂ,ತಾಲೂಕು, ಜಿಪಂ ಹಾಗೂ ನಗರಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಸೇರಿದರೆ ದೇಶದಲ್ಲಿ ತಾವು 32 ಲಕ್ಷ ಆಗುತ್ತೀರಿ. ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ದುಡ್ಡೆ ಬೇಕಿಲ್ಲ ಜನರ ಪ್ರೀತಿ ವಿಶ್ವಾಸ ಗಳಿಸುವ ಮೂಲಕ ಹಲವಾರು ಅಭಿವೃದ್ಧಿ ಕಾರ್ಯ ಮಾಡಬಹುದು ಎಂದು ಜನಪ್ರತಿನಿಧಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಮಾತನಾಡಿ, ಅಧಿಕಾರ ವಿಕೇಂದ್ರೀಕರಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವ ರಾಜ್ಯವಾಗಿದೆ. ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯ ಪೂರ್ವದಲ್ಲಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಮತ್ತು ನಜೀರ್ ಸಾಹೇಬರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ನಮ್ಮ ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಲ್ಲಿತ್ತು. ಮಾಜಿ ಪ್ರಧಾನ ಮಂತ್ರಿ ದಿ.ರಾಜೀವ್ ಗಾಂಧಿ ಸಂವಿಧಾನದಲ್ಲಿ ತಿದ್ದುಪಡಿ ತಂದು ಈ ವ್ಯವಸ್ಥೆಯನ್ನು ದೇಶಾದ್ಯಂತ ವಿಸ್ತರಿಸಿದರು. ಅದರ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ತ್ರಿ ಟಯರ್ ಸಿಸ್ಟಮ್ ಪ್ರಕಾರದಲ್ಲಿ ಗ್ರಾಪಂ, ತಾಪಂ ಮತ್ತು ಜಿಪಂ ವ್ಯವಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯವಸ್ಥೆ ಜಾರಿಗೆ ತರಲಾಗಿದೆ.ಇದರ ಮುಖ್ಯ ಉದ್ದೇಶ, ಗ್ರಾಪಂ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿ ಅನುದಾನ ಜನರಿಗೆ ಸದ್ಭಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ಮಾಡುವಂತಹ ಸ್ವಯತ್ತತೆ ನೀಡುವುದು ಮತ್ತು ಯೋಜನೆ ರೂಪಿಸಿ ಅನುಷ್ಠಾನ ಮಾಡುವ ಜವಾಬ್ದಾರಿ ಸ್ಥಳೀಯವಾಗಿ ಆಯ್ಕೆಯಾದ ಜನಪ್ರತಿನಿಧಿಗಳು ಮಾಡಲಿ ಎಂಬುವುದಾಗಿದೆ ಎಂದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಕೊಪ್ಪಳ ಜಿಲ್ಲಾ ಯೋಜನೆ ಸಮಿತಿ ರಚನೆಗಾಗಿ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಚುನಾವಣೆ ನಡೆಯುತ್ತಿದೆ. ಗ್ರಾಮ ಸ್ವರಾಜ್ಗಾಗಿ ಜಿಲ್ಲಾ ಮಟ್ಟದಲ್ಲಿ ಯೋಜನಾ ವರದಿ ಸಲ್ಲಿಕೆ ಮಾತ್ರ ಆಗಲಿದೆ. ಇದರ ಎಲ್ಲ ಕೆಲಸ ಗ್ರಾಮ ಸಭೆಯಲ್ಲಿಯೇ ಆಗಲಿವೆ. ಮಹಾತ್ಮ ಗಾಂಧೀಜೀ ಗ್ರಾಮ ಸ್ವರಾಜ್ಯದ ಕನಸನ್ನು ಅನುಷ್ಠಾನ ಮಾಡಲು ಗ್ರಾಮಸಭೆಗಳು ಸರಿಯಾದ ರೀತಿಯಲ್ಲಾಗಬೇಕು. ಇದರ ಜತೆಗೆ ಜಿಲ್ಲೆಯ ಎಲ್ಲ ಗ್ರಾಪಂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಗಾಂಧಿ ಸ್ಮಾರಕ ನಿಧಿ ಕಾರ್ಯದರ್ಶಿ ಶಿವರಾಜ, ಗ್ರಾಪಂ ಚುನಾಯಿತ ಸದಸ್ಯರ ರಾಜ್ಯ ಒಕ್ಕೂಟದ ಅಧ್ಯಕ್ಷ ಸತೀಶ್, ಪ್ರೊ.ಪ್ರಸನ್ನಮೂರ್ತಿ, ಬ್ರಹ್ಮಕುಮಾರಿ ಯೋಗಿನಿ ಅಕ್ಕನವರು ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಜಿಲಾ ಮಟ್ಟದ ಅಧಿಕಾರಿಗಳು ಜಿಲ್ಲೆಯ 153 ಗ್ರಾಪಂ ಅಧ್ಯಕ್ಷರು,ಉಪಾಧ್ಯಕ್ಷರು, 9 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಆಡಳಿತಾಧಿಕಾರಿ, ಜಿಲ್ಲೆಯ ಎಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಯೋಜನಾಧಿಕಾರಿ, ಯೋಜನಾ ನಿರ್ದೇಶಕರು, ನಗರಸಭೆ ಪೌರಾಯುಕ್ತರು, ಪುರಸಭೆ ಹಾಗೂ ಪಪಂ ಮುಖ್ಯಾಧಿಕಾರಿ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.