ಕಂಪ್ಲಿ: ಆಗಸ್ಟ್ ತಿಂಗಳಲ್ಲಿ ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಇದ್ದಿದ್ದು ನಿಜ, ಎರಡು ತಿಂಗಳ ಪಡಿತರ ಏಕಕಾಲಕ್ಕೆ ನೀಡಬೇಕಾಗಿದ್ದರಿಂದ ಎರಡು ಬಾರಿ ಬಯೋಮೆಟ್ರಿಕ್ ಪಡೆಯಬೇಕಾಗಿದ್ದರಿಂದ ಸರ್ವರ್ ಸಮಸ್ಯೆ ಉಂಟಾಗಿ ವಿಳಂಬವಾಗಿತ್ತು. ಇದೀಗ ಕೇಂದ್ರ ಕಚೇರಿ ಸರ್ವರ್ ಸಮಸ್ಯೆ ಪರಿಹರಿಸುತ್ತಿದ್ದು ಎಲ್ಲವೂ ಸುಗಮವಾಗಿ ನಡೆಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕನ್ನಡಪ್ರಭದಲ್ಲಿ ಪ್ರಕಟವಾದ ವರದಿಯ ಪ್ರತಿ ಆಧರಿಸಿ ಮುಖ್ಯಮಂತ್ರಿ ಸಚಿವಾಲಯವು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಪತ್ರ ಬರೆದು ಪಡಿತರ ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದೆ. ಅಲ್ಲದೇ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ನಿವಾರಿಸುವಂತೆ ನಿರ್ದೇಶನ ನೀಡಿದೆ.
ಮುಖ್ಯಮಂತ್ರಿ ಸಚಿವಾಲಯದಿಂದ ಬಂದ ಸೂಚನೆಯ ಹಿನ್ನೆಲೆ ಆಹಾರ, ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿನ ವಾಸ್ತವ ಸ್ಥಿತಿಗತಿ ಪರಿಶೀಲಿಸಿ ಪಡಿತರ ವಿತರಣೆಗೆ ಅಡ್ಡಿಯಾಗಿರುವ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ.ಮುಂದಿನ ದಿನಗಳಲ್ಲಿ ಇದೇ ರೀತಿಯ ತಾಂತ್ರಿಕ ಸಮಸ್ಯೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದಾಗಿ ಇಲಾಖೆಯು ಭರವಸೆ ನೀಡಿದೆ. ಈ ಹಿನ್ನೆಲೆ ಸಾರ್ವಜನಿಕರ ಸಮಸ್ಯೆ ಬೆಳಕಿಗೆ ತಂದ ಕನ್ನಡಪ್ರಭ ವರದಿಗೆ ಇದೀಗ ಸರ್ಕಾರ ಸ್ಪಂದಿಸಿರುವುದು ಗಮನಾರ್ಹವಾಗಿದೆ.