- ರೈತರ ಪ್ರತಿಭಟನೆಯಲ್ಲಿ ಸರ್ಕಾರಕ್ಕೆ ಹುಚ್ಚವ್ವನಹಳ್ಳಿ ಮಂಜುನಾಥ ಒತ್ತಾಯ- - - ಕನ್ನಡಪ್ರಭ ವಾರ್ತೆ ದಾವಣಗೆರೆ
ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಇತ್ಯರ್ಥಗೊಳಿಸಿ, ಅರ್ಜಿ ವಿಲೇಯಾಗದ ಹೊರತು, ಅರ್ಜಿದಾರರನ್ನು ಒಕ್ಕಲೆಬ್ಬಿಸಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.ಗಾಂಧಿ ವೃತ್ತದಿಂದ ಹಳೆ ಪಿ.ಬಿ. ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪಾದಯಾತ್ರೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಲಾಯಿತು. ರೈತರು, ರೈತ ಮಹಿಳೆಯರ ಧರಣಿ ಬಳಿಕ ಅಪರ ಡಿಸಿ ಪಿ.ಎನ್.ಲೋಕೇಶ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.
ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ ಮಾತನಾಡಿ, ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿಯಲ್ಲಿ ಅರಣ್ಯ ಭೂಮಿ ಸಾಗುವಳಿದಾರರ ಮೇಲೆ ದೌರ್ಜನ್ಯ ನಡೆಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಗ್ರಾಮದ ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿಗಳ ವಿಲೇ ಆಗುವವರೆಗೂ ಜಮೀನು ಬಿಡಿಸುವ ಪ್ರಯತ್ನ ಮಾಡಬಾರದು. ಚನ್ನಗಿರಿ ತಾಲೂಕಿನಲ್ಲಿ 9 ಸಾವಿರ, ಜಗಳೂರಿಲ್ಲಿ 6 ಸಾವಿರ, ದಾವಣಗೆರೆಯಲ್ಲಿ 7 ಸಾವಿರಕ್ಕೂ ಅಧಿಕ ಬಗರ್ಹುಕುಂ ಸಾಗುವಳಿದಾರರು ಫಾರಂ ನಂ.53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಪುರಸ್ಕರಿಸಬೇಕು ಎಂದು ಒತ್ತಾಯಿಸಿದರು.ಈ ಹಿಂದೆ ನಲ್ಲೂರು ಗ್ರಾಮದಿಂದ ದಾವಣಗೆರೆ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಡಿಸಿ ಭರವಸೆ ನೀಡಿದ ಮೇರೆಗೆ ಮುಷ್ಕರ ಹಿಂತೆಗೆದುಕೊಂಡಿದ್ದೆವು. ಈವರೆಗೂ ಬೇಡಿಕೆ ಈಡೇರದೇ, ವಿವಿಧ ಗ್ರಾಮಗಳ ರೈತರ ಅರ್ಜಿಗಳು ಬಾಕಿ ಉಳಿದಿವೆ. ಶೀಘ್ರ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.
ಸಂಘಟನೆ ಮುಖಂಡರಾದ ಯಲೋದಹಳ್ಳಿ ರವಿಕುಮಾರ, ಅಸ್ತಾಪನಹಳ್ಳಿ ಗಂಡುಗಲಿ, ಕೋಗಲೂರು ಕುಮಾರ, ಚಿಕ್ಕಮಲ್ಲನಹೊಳೆ ಚಿರಂಜೀವಿ, ರಾಜನಹಟ್ಟಿ ರಾಜು, ಗೌಡಗೊಂಡನಹಳ್ಳಿ ಸತೀಶ, ಚಿನ್ನಸಮುದ್ರ ಪರಶುರಾಮ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.- - - -27ಕೆಡಿವಿಜಿ10, 11, 12, 13.ಜೆಪಿಜಿ: