ಕನ್ನಡಪ್ರಭ ವಾರ್ತೆ ಹಾಸನ
ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಮರ್ಪಕ ವೇತನ ನೀಡದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಆರೋಪಿಸಿ, ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಕಂಪನಿ ಎದುರು ಜಮಾಯಿಸಿ ಆಕ್ರೋಶ ಹೊರಹಾಕಿದರು. ಬೆಳಗ್ಗೆ ಕಂಪನಿಗೆ ಕೆಲಸಕ್ಕೆ ಆಗಮಿಸಿದ ನೂರಾರು ಕಾರ್ಮಿಕರು ಏಕಾಏಕಿ ಕೆಲಸ ನಿಲ್ಲಿಸಿ, ಕಂಪನಿ ಆಡಳಿತ ಮಂಡಳಿಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಸಂಬಳ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಿಂದ ಕೆಲಕಾಲ ಕಂಪನಿಯ ಕಾರ್ಯಚಟುವಟಿಕೆ ಅಸ್ತವ್ಯಸ್ತಗೊಂಡಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಕಂಪನಿ ಕಾರ್ಮಿಕ ಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ಈ ಕಂಪನಿಯಲ್ಲಿ ನೂರಾರು ಜನ ಕಾರ್ಮಿಕರು ದುಡಿಯುತ್ತಿದ್ದಾರೆ. ಸ್ಥಳೀಯರು ಮಾತ್ರವಲ್ಲದೆ ಹೊರ ಜಿಲ್ಲೆಗಳಿಂದ ಬಂದವರೂ ಇಲ್ಲಿ ಕೆಲಸ ಮಾಡುತ್ತಿದ್ದಾರೆ, ಆದರೆ ಕಾರ್ಮಿಕರ ಶ್ರಮಕ್ಕೆ ತಕ್ಕ ಗೌರವ ಸಿಗುತ್ತಿಲ್ಲ. ಕಳೆದ ಐದು ವರ್ಷಗಳಿಂದ ಸಂಬಳ ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ ಇಂದಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.ಈಗ ಹೊಸದಾಗಿ ಕೆಲಸಕ್ಕೆ ಸೇರುವವರಿಗೆ ₹೧೭ ಸಾವಿರವರೆಗೆ ಸಂಬಳ ನೀಡಲಾಗುತ್ತಿದೆ. ಆದರೆ ೫ರಿಂದ ೮ ವರ್ಷಗಳಿಂದ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಹಳೆಯ ಕಾರ್ಮಿಕರಿಗೆ ಕೇವಲ ₹೧೨,೫೦೦ ರಿಂದ ₹೧೩ ಸಾವಿರ ಮಾತ್ರ ನೀಡಲಾಗುತ್ತಿದೆ. ಅನುಭವ ಹೊಂದಿದ ಕಾರ್ಮಿಕರನ್ನೇ ಕಡೆಗಣಿಸಲಾಗುತ್ತಿದೆ, ಇದರಿಂದ ನಮ್ಮ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ರಾತ್ರಿ ಪಾಳಿಯಲ್ಲಿ ಹೆಚ್ಚುವರಿ ಸಮಯ ಕೆಲಸ ಮಾಡಿದರೂ ಅಲ್ಪ ಪ್ರಮಾಣದ ಹಣ ಮಾತ್ರ ನೀಡಲಾಗುತ್ತಿದೆ ಎಂದು ದೂರಿದ ಅವರು, ಹೆಚ್ಚುವರಿ ಸಮಯ ದುಡಿದರೂ ಕೇವಲ ₹100 ನೀಡುತ್ತಾರೆ. ಹಾಜರಾತಿ ಬೋನಸ್ ನೀಡುವುದಾಗಿ ಹೇಳಿ ಇದುವರೆಗೂ ಕೊಟ್ಟಿಲ್ಲ. ಮ್ಯಾನೇಜ್ಮೆಂಟ್ ಹಾಗೂ ಮೇಲಾಧಿಕಾರಿಗಳಿಂದ ಆದೇಶ ಬರಬೇಕೆಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟಕ್ಕೆ ಇಳಿದಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡರು.
ಕಾರ್ಮಿಕರ ಪ್ರಕಾರ, ಕಂಪನಿಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಯಾವುದೇ ವಿಶೇಷ ಸೌಲಭ್ಯ ಅಥವಾ ಪ್ರೋತ್ಸಾಹ ನೀಡಲಾಗುತ್ತಿಲ್ಲ. ವೇತನ ವ್ಯತ್ಯಾಸ, ಬೋನಸ್ ಸಮಸ್ಯೆ, ಹೆಚ್ಚುವರಿ ಕೆಲಸದ ಭತ್ಯೆ ಕೊರತೆ ಹಾಗೂ ಮೂಲಸೌಕರ್ಯಗಳ ಅಭಾವದಿಂದ ಕಾರ್ಮಿಕರಲ್ಲಿ ಅಸಮಾಧಾನ ಹೆಚ್ಚಾಗಿದೆ ಎನ್ನಲಾಗಿದೆ. ಪ್ರತಿಭಟನೆ ನಡೆಯುತ್ತಿದ್ದಂತೆ ಕಂಪನಿ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವೆ ಮಾತುಕತೆ ನಡೆಸಲು ಪ್ರಯತ್ನಗಳು ನಡೆದವು. ಆದರೆ ಕಾರ್ಮಿಕರು ತಮ್ಮ ಬೇಡಿಕೆಗಳಿಗೆ ಸ್ಪಷ್ಟ ಭರವಸೆ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.