ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಹೆಚ್ಚು ಜನಪ್ರಿಯ ಯೋಜನೆ ಶಕ್ತಿ ಯೋಜನೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ ಸಂಭ್ರಮದ ಹಿನ್ನೆಲೆಯಲ್ಲಿ ಬಸ್ಗೆ ಪೂಜೆ ಮಾಡಿ, ಸಿಹಿ ವಿತರಣೆ ಮಾಡಿ ಅವರು ಮಾತನಾಡಿದರು.ರಾಜ್ಯಾದ್ಯಂತ ಶಕ್ತಿ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರ್ಯಕ್ರಮವನ್ನು ರಾಜ್ಯದ ವಿವಿಧೆಡೆ ಆಯೋಜನೆ ಮಾಡಲಾಗಿದೆ. ಈ ಯೋಜನೆ ಯಶಸ್ವಿಯಾಗಲು ಸರ್ಕಾರದ ಜೊತೆಗೆ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕಾರ್ಯ ಪ್ರಮುಖವಾಗಿದೆ ಎಂದರು.
ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಸ್ವತಂತ್ರವಾಗಿ ರಾಜ್ಯದ ಎಲ್ಲಡೆ ಉಚಿತ ಪ್ರಯಾಣಿಸಲು ಅನುಕೂಲವಾಗಿದೆ. ದೇಶ ಸುತ್ತು, ಕೋಶ ಓದು ಎಂಬ ಹಿನ್ನಲೆಯಲ್ಲಿ ಮಹಿಳೆಯರು ರಾಜ್ಯ ಸುತ್ತಿ ನಮ್ಮ ಐತಿಹಾಸಿಕ ಪರಂಪರೆ, ಇತಿಹಾಸ, ಸಂಸ್ಕೃತಿ ನೋಡಿ ತಿಳಿದುಕೊಂಡಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರ ಇಚ್ಚಾಶಕ್ತಿ ಕಾರ್ಯವೈಖರಿಯಿಂದ ಮತ್ತು ಸಹಕಾರದಿಂದ ಯಶ್ವಸಿಯಾಗಿದೆ. ಗದಗ ಜಿಲ್ಲೆಯಲ್ಲಿ 10.98 ಲಕ್ಷ ಮಹಿಳೆಯರು ಪ್ರಯಾಣಿಸುವ ಮೂಲಕ 358.89 ಕೋಟಿ ಆದಾಯವಾಗಿದೆ ಎಂದು ತಿಳಿಸಿದರು.ಈ ವೇಳೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಪೀರ್ ಸಾಬ್ ಕೌತಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಕೃಷ್ಣಗೌಡ ಎಚ್.ಪಾಟೀಲ, ಅಶೋಕ ಮಂದಾಲಿ ಸೇರಿದಂತೆ ಸಮಿತಿಯ ಸದಸ್ಯರು ನೆರೆದ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ವಾಯು ಕರ್ನಾಟಕ ರಸ್ತೆ ಸಾರಿಗೆ ನಿಗಮದ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ದೇವರಾಜ, ವಿಭಾಗೀಯ ಸಂಚಲನಾಧಿಕಾರಿ ಪಿ.ವೈ.ಮೇತ್ರಿ, ಡಿಪೋ ಮ್ಯಾನೇಜರ್ ಬಿ.ಎಲ್.ಗೆಣ್ಣೂರ, ಕಂಟ್ರೋಲರಾದ ವೆಂಕಟೇಶ್ ಜಾಧವ, ಶಿವಾನಂದ ಸಂಗಣ್ಣನವರ, ಎಂ.ಬಿ.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.