ಸ್ಥಳಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳ, ಡಿವೈಎಸ್ಪಿ ಭೇಟಿ ; ಶಾಂತಿ ಸಭೆ । ತಟ್ಟೆ ತೊಳೆಯಲು ನಿರಾಕರಿಸಿದ್ದ ಸಹಾಯಕಿಯರ ಬದಲಾವಣೆ
ಕನ್ನಡಪ್ರಭ ವರದಿ ಪರಿಣಾಮ
ಕನ್ನಡಪ್ರಭ ವಾರ್ತೆ ಯಾದಗಿರಿಜಿಲ್ಲೆಯ ಶಹಾಪುರ ತಾಲೂಕಿನ ಕರಕಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿನ ಶಾಲೆಯಲ್ಲಿನ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆಗಳನ್ನು ತೊಳೆಯಲು ನಿರಾಕರಿಸಿದ್ದ ಅಡುಗೆ ಸಹಾಯಕಿಯರ ವರ್ತನೆಯಿಂದಾಗಿ, ಮಧ್ಯಾಹ್ನದ ಬಿಸಿಯೂಟವೇ ಸ್ಥಗಿತರೊಂಡು, ಮಕ್ಕಳು ಉಪ್ಪಿಟ್ಟು ರಾಗೀಗಂಜಿ ಕುಡಿದು ಮನೆಗೆ ಮರಳುತ್ತಿರುವ ಪ್ರಕರಣ ಗಂಭೀರತೆ ಕುರಿತು ಸೋಮವಾರ "ಕನ್ನಡಪ್ರಭ "ದಲ್ಲಿ ಪ್ರಕಟಗೊಂಡ ವರದಿಗೆ ಸ್ಪಂದಿಸಿದ ಜಿಲ್ಲಾಡಳಿತ, ತತ್ಕ್ಷಣವೇ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾಗಿದೆ.
ನಿರಾಕರಿಸಿದ ಅಡುಗೆ ಸಹಾಯಕಿಯರನ್ನು ತಕ್ಷಣವೇ ಬದಲಾಯಿಸಿ, ತಾತ್ಕಾಲಿಕವಾಗಿ ಅಲ್ಲಿ ಅಡುಗೆ ಮಾಡಲಿಕ್ಕಿದ್ದ ಸಿಬ್ಬಂದಿಗಳನ್ನೇ ನೇಮಿಸಿಕೊಳ್ಳುವಂತೆ ಸೂಚಿಸಲಾಗಿದೆ. ಸೋಮವಾರ, ಯಾವುದೇ ತೊಂದರೆಯಿಲ್ಲದಂತೆ ಎಲ್ಲ ಮಕ್ಕಳೂ ಬಿಸಿಯೂಟ ಮಾಡಿದ್ದಾರೆ ಎಂದು ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲನಗೌಡ ಬಿರಾದರ್ "ಕನ್ನಡಪ್ರಭ "ಕ್ಕೆ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ ನಡೆದ ದೌರ್ಜನ್ಯ ನಿಯಂತ್ರಣ ಸಭೆಯಲ್ಲಿಯೂ ಈ ಕುರಿತು ಚರ್ಚೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆನ್ನಲಾಗಿದ್ದು, ಕ್ರಮಕ್ಕೆ ಸೂಚಿಸಿದ್ದಾರೆ.----
24ವೈಡಿಆರ್9 : ಕರಕಳ್ಳಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ನೀಡಲಾಯಿತು.24ವೈಡಿಆರ್10 : ಫೆ.24 ರಂದು ಕನ್ನಡಪ್ರಭ ವರದಿ