ಉಡುಪಿ: ವಿದ್ಯಾರ್ಥಿ ಜೀವನ ಚಿನ್ನದ ಗಣಿ ಇದ್ದಂತೆ. ಈ ಹಂತದಲ್ಲಿ ಅವಕಾಶಗಳ ಮಹಾಪೂರವೇ ಇರುತ್ತದೆ. ಆದರೆ ಅವಕಾಶಗಳು ಹೆಚ್ಚಾದಂತೆ ಅಸಡ್ಡೆಯ ಮನೋಭಾವವೂ ಬೆಳೆಯುವ ಅಪಾಯವಿದೆ ಎಂದು ಮನೋ ವೈದ್ಯ ಡಾ. ವಿರೂಪಾಕ್ಷ ದೇವರಮನೆ ಹೇಳಿದರು.
ಪೋಷಕರೊಂದಿಗೆ ಸಾಧ್ಯವಾದಷ್ಟು ಆತ್ಮೀಯ ಸಂಬಂಧವನ್ನು ಹೊಂದಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸ್ನೇಹಿತರ ಒತ್ತಡಕ್ಕೊಳಗಾಗಿ ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಮೊದಲ ವರ್ಷದಲ್ಲೇ ನಿಮ್ಮ ವ್ಯಕ್ತಿತ್ವವನ್ನು ವಿಶ್ಲೇಷಿಸಿಕೊಂಡು, ನಿಮ್ಮ ಸಾಮರ್ಥ್ಯಗಳು ಹಾಗೂ ದೌರ್ಬಲ್ಯಗಳನ್ನು ಅರಿತುಕೊಳ್ಳಿ. ಮಾನಸಿಕ ಆರೋಗ್ಯವೂ ದೈಹಿಕ ಆರೋಗ್ಯದಷ್ಟೇ ಮುಖ್ಯ. ಒಂಟಿತನ, ಖಿನ್ನತೆ ಸೇರಿದಂತೆ ಯಾವುದೇ ಮಾನಸಿಕ ಸಮಸ್ಯೆ ಎದುರಾದಲ್ಲಿ ಮುಕ್ತವಾಗಿ ಹಂಚಿಕೊಳ್ಳಿ. ಅಗತ್ಯವಿದ್ದರೆ 14416 ಸಹಾಯವಾಣಿಗೆ ಕರೆ ಮಾಡಿ ನೆರವು ಪಡೆಯಬಹುದು ಎಂದು ಸಲಹೆ ನೀಡಿದರು.
ಉಡುಪಿ ಲೀಡ್ ಬ್ಯಾಂಕ್ನ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಆರ್ಥಿಕ ಸಾಕ್ಷರತೆಯನ್ನು ಬೆಳೆಸಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿಕೇತನ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಮೈಗೂಡಿಸಿಕೊಂಡು ಕಾಲೇಜಿನ ಘನತೆಯನ್ನು ಕಾಪಾಡಬೇಕು. ಗಾಂಧೀಜಿ, ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳನ್ನು ಅರಿತುಕೊಂಡು, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಜ್ಞಾನ ಹಾಗೂ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.