ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ೩೦೦ ಕ್ಕೂ ಹೆಚ್ಚು ವಚನಗಳನ್ನು ರಚಿಸುವ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದ್ದು, ಅವರ ವಚನಗಳು ಕಠೋರವಾಗಿದ್ದರೂ ಸಹ ಜನಸಾಮಾನ್ಯರಿಗೆ ಮನ ಮುಟುವಂತ್ತಿವೆ
ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ಮೂಢನಂಬಿಕೆ, ಜಾತಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಹೋರಾಟ ಮಾಡಿದವರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಸಹ ಒಬ್ಬರು ಎಂದು ಶಾಸಕ ರವಿಕುಮಾರ್ ತಿಳಿಸಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
300ಕ್ಕೂ ಹೆಚ್ಚು ವಚನ ರಚನೆ
೧೨ನೇ ಶತಮಾನದಲ್ಲಿ ೩೦೦ ಕ್ಕೂ ಹೆಚ್ಚು ವಚನಗಳನ್ನು ರಚಿಸುವ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದ್ದು, ಅವರ ವಚನಗಳು ಕಠೋರವಾಗಿದ್ದರೂ ಸಹ ಜನಸಾಮಾನ್ಯರಿಗೆ ಮನ ಮುಟುವಂತ್ತಿವೆ. ಹೀಗಾಗಿ ನೇರ, ದಿಟ್ಟ ವಚನಕಾರರು ಹೌದು. ಅವರ ತತ್ವಾದರ್ಶಗಳನ್ನು ಸಮಾಜ ಮೈಗೂಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆಯಾಗಲು ಸಾಧ್ಯ ಎಂದು ತಿಳಿಸಿದರು.
ತಹಸೀಲ್ದಾರ್ ಸ್ವಾಮಿ ಮಾತನಾಡಿ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ಕಠೋರವಾದ ವಚನಗಳ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದ ಮಹಾನ್ ಶರಣರಾಗಿದ್ದು. ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಪಾಲಿಸಿದಾಗ ಒಳ್ಳೆಯ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಅಕ್ಷರ ಪಿ.ಯು ಕಾಲೇಜ್ ಉಪನ್ಯಾಸಕರಾದ ಬಿ.ವಿ ಪ್ರಕಾಶ್ ಅವರು ಪ್ರಮುಖ ಭಾಷಣಕಾರರಾಗಿ ಆಗಮಿಸಿದ್ದು, ನಿಜಶರಣ ಅಂಬಿಗರ ಚೌಡಯ್ಯನವರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರ ಕಡೆಯಿಂದ ಪ್ರತಿಭಾ ಪುರಸ್ಕಾರ ಮತ್ತು ತಹಶೀಲ್ದಾರ್ ಸ್ವಾಮಿ ರವರು ಅವರಿಗೆ ಉಪಯೋಗವಾಗುವ ಪಠ್ಯ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಮುನಿರಾಜ, ನಗರಸಭೆ ಆಯುಕ್ತ ಮಂಜುನಾಥ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ರಾಮಚಂದ್ರ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ತಾಲ್ಲೂಕು ಬೆಸ್ತರ ಸಂಘದ ಅಧ್ಯಕ್ಷ ಡಿ.ಎನ್.ಶಿವಣ್ಣ, ಗೌರವಾಧ್ಯಕ್ಷ ಸಂಜೀವಪ್ಪ, ಸಾರ್ವಜನಿಕರು , ಅಧಿಕಾರಿಗಳು ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.