ಕನ್ನಡಪ್ರಭ ವಾರ್ತೆ, ಭದ್ರಾವತಿ
ಶ್ರೀ ಸಿದ್ದರಾಮೇಶ್ವರ ಅವರು ಕೇವಲ ಭೋವಿ ಸಮಾಜಕ್ಕೆ ಮಾತ್ರ ಸೀಮಿತವಾಗಿಲ್ಲ. ಆ ಕಾಲದಲ್ಲಿ ಸಮಾಜ ಸುಧಾರಕರಾಗಿದ್ದ ಅವರು ಕೈಗೊಂಡಿರುವ ಜನಪರ ಕಾರ್ಯಗಳು ಇಂದಿಗೂ ಉಳಿದುಕೊಂಡಿವೆ ಎಂದು ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಧನಂಜಯ ಹೇಳಿದರು.ತಾಲೂಕು ಆಡಳಿತ ಮತ್ತು ಭೋವಿ ಜನಾಂಗದ ಅಭಿವೃದ್ಧಿ ಸಂಘ ವತಿಯಿಂದ ಬುಧವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಕಾಯಕಯೋಗಿ ಸಿದ್ದರಾಮೇಶ್ವರರ 851ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀ ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರ ಅನುಭವ ಮಂಟಪದಲ್ಲಿನ ವಚನಗಾರರ ಪೈಕಿ ಒಬ್ಬರಾಗಿದ್ದರು. ಸಮಾಜದಲ್ಲಿ ಶೋಷಣೆಗೆ ಒಳಗಾಗಿದ್ದ ವಡ್ಡ ಸಮುದಾಯದ ಪರವಾಗಿ ತಮ್ಮ ನಿಲುವುಗಳನ್ನು ಸಮಾಜಕ್ಕೆ ತಿಳಿಯಪಡಿಸಿದ್ದರು. ಅಲ್ಲದೆ, ಎಲ್ಲ ಸಮುದಾಯಗಳಿಗೂ ಮಾರ್ಗದರ್ಶಕರಾಗಿದ್ದರು. ಹಲವಾರು ಜನಪರ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದರು. ಇಂಥ ಮಹಾನ್ ವ್ಯಕ್ತಿಯ ಆದರ್ಶತನ, ಚಿಂತನೆಗಳನ್ನು ಸ್ವಲ್ಪಮಟ್ಟಿಗಾದರೂ ಮೈಗೂಡಿಸಿಕೊಳ್ಳಬೇಕಾಗಿದೆ. ಶೋಷಣೆಗೆ ಒಳಗಾಗಿರುವ ಎಲ್ಲ ಸಮುದಾಯಗಳು ಸಹ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು.ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ. ಮೋಹನ್ ಮಾತನಾಡಿ, ಆದರ್ಶ ವ್ಯಕ್ತಿಗಳಿಗೆ ಅವಮಾನ ಮಾಡುವ ರೀತಿಯಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಆಚರಿಸಬಾರದು. ಇದನ್ನು ಆಯಾ ಸಮಾಜದವರು ಹಾಗೂ ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಳ್ಳುವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅರ್ಥ ಮಾಡಿಕೊಳ್ಳಬೇಕು. ಆದರ್ಶ ವ್ಯಕ್ತಿಗಳ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಆಗ ಮಾತ್ರ ಆ ಕಾರ್ಯಕ್ರಮಗಳು ಸಾರ್ಥಕಗೊಳ್ಳುತ್ತವೆ ಎಂದರು.
ಶಾಸಕ ಬಿ.ಕೆ. ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿ, ಮುಂದಿನ ದಿನಗಳಲ್ಲಿ ಈ ರೀತಿಯ ತಪ್ಪುಗಳಿಗೆ ಅವಕಾಶ ಮಾಡಿಕೊಡಬಾರದು. ಎಲ್ಲರೂ ಒಗ್ಗೂಡಬೇಕು. ಆದರ್ಶ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ ಇನ್ನಿತರರು ಮಾತನಾಡಿದರು.
ಭೋವಿ ಜನಾಂಗದ ಅಭಿವೃದ್ಧಿ ಸಂಘದ ಅಧ್ಯಕ್ಷ ಶಿವಣ್ಣ ತಹಸೀಲ್ದಾರ್ ಕೆ.ಆರ್. ನಾಗರಾಜು, ತಾಪಂ ಕಾರ್ಯನಿರ್ವಾಹಕಾಧಿಕಾರಿ ಎಂ.ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ, ಮುಖಂಡರಾದ ಎಸ್.ಕುಮಾರ್, ಸುಕನ್ಯಾ ರಾಜ್, ಚೌಡಯ್ಯ, ತಮ್ಮಯ್ಯ, ಶಿವು ಪಾಟೀಲ್, ಜಲ್ಲಿ ರಾಮಣ್ಣ, ಕೃಷ್ಣ, ಸಿದ್ಧ ಭೋವಿ ವೈ. ಮಂಜುನಾಥ್, ನಾಗೇಶ, ವಿಠಲ ಇನ್ನಿತರರು ಉಪಸ್ಥಿತರಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಸ್ವಾಗತಿಸಿದರು. ಸುಮತಿ ಕಾರಂತ್ ತಂಡದಿಂದ ನಾಡಗೀತೆ, ಪ್ರಾರ್ಥನೆ ನಡೆಯಿತು. ಎಸ್.ಕೆ ಮೋಹನ್ ನಿರೂಪಿಸಿದರು.
- - - -ಡಿ17ಬಿಡಿವಿಟಿ(ಎ):ಭದ್ರಾವತಿ ತಾಪಂ ಆವರಣದಲ್ಲಿ ಬುಧವಾರ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ಗಣ್ಯರು ಪಾಲ್ಗೊಂಡಿದ್ದರು.