ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಶರಣರು

KannadaprabhaNewsNetwork |  
Published : Jan 22, 2026, 02:45 AM IST
21ಕೆಪಿಎಲ್22ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ | Kannada Prabha

ಸಾರಾಂಶ

ಅಂಬಿಗರ ಚೌಡಯ್ಯ ತಮ್ಮ ಕಾಯಕದ ಮೂಲಕ ನಿಜ ಶರಣರಾಗಿದ್ದರು. ಅವರು ತಮ್ಮ ವಚನಗಳ ಮೂಲಕ ಸಮಾಜದ ಅಂಕು-ಡೊಂಕು ತಿದ್ದುವ ಕೆಲಸ ಮಾಡಿದ್ದರು

ಕೊಪ್ಪಳ: 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಅಂಬಿಗರ ಚೌಡಯ್ಯ ಆದಿಯಾಗಿ ಅಂದಿನ ಶರಣರು ಸಾಮಾಜಿಕ ಮೌಢ್ಯಗಳ ನಿರ್ಮೂಲನೆ ಮಾಡುವ ಮೂಲಕ ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ್ದರು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.

ಅವರು ಬುಧವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಅಂಬಿಗರ ಚೌಡಯ್ಯ ತಮ್ಮ ಕಾಯಕದ ಮೂಲಕ ನಿಜ ಶರಣರಾಗಿದ್ದರು. ಅವರು ತಮ್ಮ ವಚನಗಳ ಮೂಲಕ ಸಮಾಜದ ಅಂಕು-ಡೊಂಕು ತಿದ್ದುವ ಕೆಲಸ ಮಾಡಿದ್ದರು. ಅವರ ಜಯಂತಿ ಆಚರಣೆ ಮಾಡಿದರೆ ಸಾಲದು ಅವರ ತತ್ವ ಮತ್ತು ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ.ಅವರ ಜೀವನ ಚರಿತ್ರೆ ಯುವ ಪೀಳಿಗೆಗೆ ತಿಳಿಯಬೇಕೆಂಬ ಉದ್ದೇಶದಿಂದಲೇ ನಮ್ಮ ಸರ್ಕಾರ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡುತ್ತಿದೆ ಎಂದರು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಬೇಕೆಂಬ ಉದ್ದೇಶದಿಂದ ಸಿಎಂ ಸಿದ್ರಾಮಯ್ಯ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದರು.ಇದರಿಂದ ರಾಜ್ಯದ ಲಕ್ಷಾಂತರ ಬಡ ಜನರಿಗೆ ಅನುಕೂಲವಾಗಿದೆ.ಅಂಬೇಡ್ಕರ್ ನಮ್ಮ ದೇಶಕ್ಕೆ ಸಂವಿಧಾನ ಕೊಡದಿದ್ದರೆ ಇಂದು ನಾನು ಶಾಸಕನಾಗಿರುತ್ತಿರಲಿಲ್ಲ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕೆಟಗೇರಿಗಳು ಬಂದ ನಂತರ ನಮಗೆ ಸಮಾನ ಅವಕಾಶ ಸಿಕ್ಕವು. ಸಮಾಜದ ಅಭಿವೃದ್ಧಿಯ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು. ನಾವು ಇದೇ ಜಾತಿಯಲ್ಲಿ ಹುಟ್ಟುತ್ತೇವೆ ಎಂದು ಯಾರು ಅರ್ಜಿ ಹಾಕಿ ಹುಟ್ಟಿಲ್ಲ. ಸಮಾಜದ ಪಟ್ಟಭದ್ರ ಹಿತಾಸಕ್ತಿಗಳು ಅದನ್ನು ಹುಟ್ಟು ಹಾಕಿದ್ದಾರೆ. ನಾವು ಸಮಾಜದ ಮುಖ್ಯ ವಾಹಿನಿಗೆ ಬರಬೇಕಾದರೆ ಮೊದಲು ಶಿಕ್ಷಣ ಪಡೆಯಬೇಕು. ಅಂಬಿಗರ ಚೌಡಯ್ಯ ಸಮುದಾಯ ಭವನಕ್ಕೆ ₹2 ಕೋಟಿ ಕೊಡಬೇಕೆನ್ನುವ ಸಮಾಜದ ಮುಖಂಡರ ಬೇಡಿಕೆ ಇದ್ದು, ಈಗ ₹50 ಲಕ್ಷ ಕೊಡುವ ಕೆಲಸ ಮಾಡುತ್ತಿದ್ದೇನೆ. ಉಳಿದ ಹಣ ನೀಡಲಾಗುವುದು ಎಂದರು.

ವಿಪ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಬಸವಣ್ಣನವರ ಅನುಭವ ಮಂಟಪದಲ್ಲಿ ಪ್ರಮುಖ ವಚನಕಾರರಾಗಿದ್ದ ಅಂಬಿಗರ ಚೌಡಯ್ಯ ಕಾಯಕ, ವಚನ ಮತ್ತು ದಾಸೋಹ ತಮ್ಮ ಜೀವನದಲ್ಲಿ ನಡೆಸಿಕೊಂಡು ಬಂದಿದ್ದರು. ಅವರು ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದರು. ಅವರ ವಚನಗಳು ಬಹಳ ಅರ್ಥಗರ್ಭಿತವಾಗಿವೆ. ಅವುಗಳನ್ನು ನಾವು ಓದಿ ತಿಳಿದುಕೊಳ್ಳಬೇಕು. ಸಮಾಜದಲ್ಲಿ ಸೌಲಭ್ಯ ಪಡೆಯಬೇಕಾದರೆ ನಾವು ಮೊದಲು ಶಿಕ್ಷತರಾಗಬೇಕೆಂದು ಹೇಳಿದರು.

ಸರ್ಕಾರಿ ಪದವಿಪೂರ್ವ ಕಾಲೇಜು ಭಾಗ್ಯನಗರ ಇತಿಹಾಸ ಪ್ರಾಧ್ಯಾಪಕ ರಾಜಕುಮಾರ ಡಿ.ಎಸ್.ಅವರು ಅಂಬಿಗರ ಚೌಡಯ್ಯನವರ ಕುರಿತು ವಿಶೇಷ ಉಪನ್ಯಾಸ ನೀಡಿ, ಅಂಬಿಗರ ಚೌಡಯ್ಯ ತಮ್ಮ ಕಾಯಕ ನಿಷ್ಠಿಯ ಮೂಲಕ ಬಸವಣ್ಣನವರ ಪರಮ ಭಕ್ತರಾಗಿದ್ದರು. ಅವರು ಸರ್ವರ ಒಳಿತನ್ನೆ ಬಯಸಿದವರಾಗಿದ್ದರು. ಮಂಗಳೂರು ಮತ್ತು ಕಲಬುರಗಿ ವಿಶ್ವವಿದ್ಯಾಲಯಗಳಲ್ಲಿ ಅಂಬಿಗರ ಚೌಡಯ್ಯನವರ ಕುರಿತು ಅಧ್ಯಯನ ಪೀಠ ತೆರೆಯಲಾಗಿದೆ. ಅವರ ವಚನಗಳು ಸಮಾಜದ ಗೊಡ್ಡು ಸಂಪ್ರದಾಯ ಹೋಗಲಾಡಿಸುತ್ತವೆ ಎಂದು ಹೇಳಿದರು.

ಸಮಾಜದ ಮುಖಂಡ ರಾಜು ಕಲೆಗಾರ್ ಮಾತನಾಡಿದರು. ಜಯಂತಿ ಆಚರಣೆ ಪ್ರಯುಕ್ತ ಬುಧವಾರ ಬೆಳಗ್ಗೆ ಅಂಬಿಗರ ಚೌಡಯ್ಯ ಭಾವಚಿತ್ರದ ಮೆರವಣಿಗೆ ಕೊಪ್ಪಳ ನಗರದ ಶಿರಸಪ್ಪಯ್ಯನ ಮಠದಿಂದ ಗಡಿಯಾರ ಕಂಬದ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ವಿ.ಗಡಾದ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ,ಸಹಾಯಕ ಆಯುಕ್ತ ಮಹೇಶ ಮಾಲಗಿತ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ, ಸಮಾಜದ ಮುಖಂಡರಾದ ಹುಲುಗಪ್ಪ ಬಾರಕೇರ್, ರಾಜು ಕಲೆಗಾರ್, ವಿರೂಪಾಕ್ಷ ಬಾರಕೇರ್, ಈರಪ್ಪ ಕರಿಗಾರ್, ರಮೇಶಪ್ಪ ಕಬ್ಬೇರ್, ಹುಲುಗಪ್ಪ ನರೇಗಲ್, ಶಿವಪ್ಪ ಕಬ್ಬೇರ್, ಉದಯ ಕಬ್ಬೇರ್, ಹನುಮಂತಪ್ಪ ಗಿಡ್ಡಾರಿ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹನುಮಂತಪ್ಪ ಎಲಿಗಾರ ಸೇರಿದಂತೆ ಸಮಾಜದ ಯುವಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ