ಅನಧಿಕೃತ ಮಳಿಗೆ ತೆರವುಗೊಳಿಸಲು ಶರವಣ್ ಒತ್ತಾಯ

KannadaprabhaNewsNetwork |  
Published : Feb 18, 2025, 12:30 AM IST
17ಸಿಎಚ್‌ಎನ್‌51ಹನೂರು ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶರವಣ್ ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಹನೂರು ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶರವಣ್ ಸುದ್ದಿಗೋಷ್ಠಿ ನಡೆಸಿದರು.

ಕನ್ನಡಪ್ರಭ ವಾರ್ತೆ ಹನೂರು

ಮಲೆಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಅನಧಿಕೃತ ಮಳಿಗೆ ನಡೆಸುತ್ತಿರುವ ವ್ಯಾಪಾರಸ್ಥರನ್ನು ತೆರವುಗೊಳಿಸಿ ಟೆಂಡರ್ ಬಿಡುವಂತೆ ಗ್ರಾಮ ಪಂಚಾಯಿತಿ ಸದಸ್ಯ ಶರವಣ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ 40 ಮಳಿಗೆಗಳಿದ್ದು 18 ಜನರು ನಿಯಮಾನುಸಾರ ಟೆಂಡರ್ ಪಡೆದು ಲಕ್ಷಾಂತರ ರುಪಾಯಿ ಬಾಡಿಗೆ ಕಟ್ಟಿ ಅಂಗಡಿ ನಡೆಸುತ್ತಿದ್ದಾರೆ. ಆದರೆ 22 ಜನರು ಕಳೆದ 8 ವರ್ಷಗಳಿಂದ ಅನಧಿಕೃತ ಮಳಿಗೆಗಳನ್ನು ನಡೆಸುತ್ತಾ ಪ್ರಾಧಿಕಾರಕ್ಕೆ ₹100 ಕೋಟಿಗೂ ಹೆಚ್ಚು ಆದಾಯಕ್ಕೆ ಕುತ್ತು ತಂದಿದ್ದಾರೆ ಎಂದು ಆರೋಪಿಸಿದರು.

ಕಳೆದ 8 ವರ್ಷಗಳಿಂದ ಅಧಿಕಾರ ನಡೆಸಿದ ಕಾರ್ಯದರ್ಶಿ ಸೂಕ್ತ ಕ್ರಮ ಕೈಗೊಳ್ಳದೆ ಇರುವುದರಿಂದ ಇವರು ನಿಯಮ ಬಾಹಿರವಾಗಿ ಅಂಗಡಿ ಮಳಿಗೆಗಳನ್ನು ಇಟ್ಟು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ಲಕ್ಷಾಂತರ ರುಪಾಯಿ ಬಾಡಿಗೆ ಕಟ್ಟಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ ಎಂದರು.

ಈ ಕೂಡಲೇ ಪ್ರಾಧಿಕಾರದ ಅಧಿಕಾರಿಗಳು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿರುವವರನ್ನು ತೆರವುಗೊಳಿಸಿ ಟೆಂಡರ್ ಬಿಡುವ ಮೂಲಕ ಶ್ರೀ ಕ್ಷೇತ್ರದ ಪ್ರಾಧಿಕಾರಕ್ಕೆ ಆದಾಯ ಬರುವಂತೆ ಮಾಡಬೇಕು ಎಂದು ಆಗ್ರಹಿಸಿದರು. ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್ ಮಂಜುನಾಥ್ ಕ್ಷೇತ್ರದಲ್ಲಿ ಕಳೆದ 2 ವರ್ಷಗಳಿಂದ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅದೇ ರೀತಿ ಕೋಟ್ಯಂತರ ರುಪಾಯಿ ಆದಾಯ ಬರುವ ಅಂಗಡಿಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಇರುವುದು ಹಲವು ಅನುಮಾನಗಳಿಗೆ ತಡೆ ಮಾಡಿಕೊಟ್ಟಿದೆ ಎಂದರು.

ಕ್ಷೇತ್ರದ ಪ್ರತಿಯೊಂದು ಸಮಸ್ಯೆಗಳು ಹಾಗೂ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಶಾಸಕರಿಗೆ ಕಳೆದ ಹಲವು ವರ್ಷಗಳಿಂದ ಅನಧಿಕೃತವಾಗಿ ಮಳಿಗೆ ನಡೆಸುತ್ತಿರುವುದು ಇವರ ಗಮನಕ್ಕೆ ಬಂದಿಲ್ಲವೇ? ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಈ ವಿಚಾರ ಗಮನಕ್ಕೆ ಬರಲಿಲ್ಲ ಎಂದ ಮೇಲೆ ಯಾವ ರೀತಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.ಶಾಸಕ ಎಂ.ಆರ್ ಮಂಜುನಾಥ್ ಅವರ ಆಪ್ತರೆ ಅನಧಿಕೃತವಾಗಿ ಮಳಿಗೆ ನಡೆಸುತ್ತಿರುವುದು ವಿಪರ್ಯಾಸ. ಇಲ್ಲಿ ಮಳಿಗೆ ನಡೆಸುತ್ತಿರುವ ಶಾಸಕರ ಆಪ್ತರು ರಾಜಾರೋಷವಾಗಿ ನಮ್ಮ ಮುಂದೆಯೇ ಬಂದು ನಮ್ಮ ಶಾಸಕರು ಇರುವವರೆಗೂ ನಮ್ಮನ್ನು ಯಾರು ಖಾಲಿ ಮಾಡಿಸಲು ಆಗುವುದಿಲ್ಲ ಎಂದು ಸವಾಲು ಹಾಕುತ್ತಿದ್ದಾರೆ. ಇದಕ್ಕೆ ಶಾಸಕ ಮಂಜುನಾಥ್ ಸಹಕಾರ ಇಲ್ಲದೆ ಈ ರೀತಿ ಹೇಳಲು ಹೇಗೆ ಸಾಧ್ಯ ಎಂಬ ಅನುಮಾನ ಕಾಡುತ್ತಿದೆ ಎಂದರು.

ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸದಾಕಂಕಣ ಬದ್ಧನಾಗಿದ್ದೇನೆ ಎಂದು ಹೇಳುವ ಶಾಸಕರು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡದೇ ಅನಧಿಕೃತ ನಡೆಸುತ್ತಿರುವ ಎಲ್ಲ ವ್ಯಾಪಾರಸ್ಥರನ್ನು ತೆರವುಗೊಳಿಸಲು ಇವರೇ ಸೂಚನೆ ನೀಡಿ ಟೆಂಡರ್ ಮಾಡಿಸುವ ಮೂಲಕ ದೇವಸ್ಥಾನದ ಆದಾಯವನ್ನು ಹೆಚ್ಚು ಮಾಡಬೇಕು ಎಂದರು.

2 ದಿನಕ್ಕಷ್ಟೇ ಅಂಗಡಿ ಬಂದ್ :

ಕಳೆದ ಒಂದು ವಾರದ ಹಿಂದೆ ಪ್ರಾಧಿಕಾರದ ಕಾರ್ಯದರ್ಶಿ ರಘು ಹಾಗೂ ಸಿಬ್ಬಂದಿ ಅನಧಿಕೃತ ಮಳಿಗೆ ನಡೆಸುತ್ತಿರುವವರಿಗೆ 8 ದಿನಗಳ ಕಾಲಾವಕಾಶ ನೀಡಿ ಅಂಗಡಿ ಖಾಲಿ ಮಾಡಬೇಕು ಎಂದು ಎಚ್ಚರಿಕೆ ನೀಡಿ ಅಂಗಡಿಗಳನ್ನು ಬಂದ್ ಮಾಡಿಸಿದ್ದರು. ಆದರೆ ಎರಡು ದಿನ ಕಳೆದ ನಂತರ ವ್ಯಾಪಾರಸ್ಥರು ಮತ್ತೆ ಮಳಿಗೆ ಪ್ರಾರಂಭಿಸಿದ್ದಾರೆ. ಅಧಿಕಾರಿಗಳು ಯಾರ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಈಗ ಅನಧಿಕೃತ ವ್ಯಾಪಾರಸ್ಥರು ಮತ್ತೆ ತಮ್ಮ ಮಳಿಗೆಗಳನ್ನು ಪ್ರಾರಂಭಿಸಿರುವುದರಿಂದ ಇದರಿಂದ ಬಾಡಿಗೆ ಪಾವತಿಸಿ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಇನ್ನು ಶ್ರೀ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಮುಕ್ತ ವಲಯ ಪ್ರದೇಶವನ್ನಾಗಿ ಮಾಡುತ್ತಿರುವುದು ಸಂತಸದ ವಿಚಾರ ಆದರೆ ನೀರಿನ ಬಾಟಲ್‌ಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ ಆನಂತರ ಪ್ಲಾಸ್ಟಿಕ್ ನೀರಿನ ಬಾಟಲ್ ನಿಷೇಧ ಮಾಡುವಂತೆ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!