ಅಧಿವೇಶನದಲ್ಲಿ ಶಾಸಕ ಎಚ್ಚರಿಕೆ, ಯೋಜನೆ ಸಮರ್ಥಿಸಿದ ಜಾರ್ಜ್ ಕನ್ನಡಪ್ರಭ ವಾರ್ತೆ ಕುಮಟಾ
ಈಗಾಗಲೇ ನಮ್ಮ ಉತ್ತರ ಕನ್ನಡ ಜಿಲ್ಲೆಗೆ ಸಾಕಷ್ಟು ಯೋಜನೆಗಳು ಬಂದಿವೆ. ಯೋಜನೆಗಳಿಗಾಗಿ ಲಕ್ಷಾಂತರ ಜನ ತ್ಯಾಗ ಮಾಡಿದ್ದಾರೆ. ಆದರೆ ಅವರ ತ್ಯಾಗಕ್ಕೆ ಸರ್ಕಾರದಿಂದ ಏನೂ ಲಾಭವಾಗಿಲ್ಲ. ರಾಜ್ಯದಲ್ಲಿ ಪಶ್ಚಿಮ ಘಟ್ಟದ ಶರಾವತಿ ಇಕ್ಕೆಲ ಪ್ರದೇಶಕ್ಕೆ ವಿಶೇಷ ಮಹತ್ವ ಇದೆ. ನಮ್ಮ ಪರಿಸರ ಉಳಿಯಬೇಕು. ಯೋಜನೆಯ ೭ ಕಿಮೀ ಸುರಂಗದ ಸ್ಪಷ್ಟತೆ ಇಲ್ಲ. ಜಿಲ್ಲೆಯಲ್ಲಿ ಭೂಕುಸಿತದ ಅತಂಕವಿದೆ. ಮೊದಲು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಯಾವುದೇ ಕಾರಣಕ್ಕೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಬೇಕು ಎಂದು ಅಧಿವೇಶನದ ಮೂಲಕ ಎರಡನೇ ಬಾರಿಗೆ ಮನವಿ ಮಾಡುತ್ತಿದ್ದೇನೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ. ಜಾರ್ಜ್, ಯೋಜನೆಯ ಬಗ್ಗೆ ಶಾಸಕ ದಿನಕರ ಶೆಟ್ಟ ಅವರಿಗೆ ಆತಂಕವಿದೆ. ಬಹುಶಃ ಅವರಿಗೆ ಮಾಹಿತಿಯ ಕೊರತೆ ಇರಬಹುದು. ಈಗಾಗಲೇ ಸಂಪೂರ್ಣ ಮಾಹಿತಿ ಕಳುಹಿಸಿ ಕೊಡಲಾಗಿದೆ. ನಿಮಗೆ ಅಥವಾ ಯಾರಿಗೆಲ್ಲ ಸಂಶಯವಿದೆಯೋ ಅವರಿಗೆ ಮನವರಿಕೆ ಮಾಡಲು ಮತ್ತೊಮ್ಮೆ ಪ್ರಯತ್ನಿಸುತ್ತೇನೆ ಎಂದರು.ಶರಾವತಿ ಟೇಲರೀಸ್ ಯೋಜನೆ ವೇಳೆ ಸುಮಾರು ೧ ಲಕ್ಷ ಹೆಕ್ಟೇರ್ ಮುಳುಗಡೆಯಾಗಿದ್ದು, ಯೋಜನೆಗಾಗಿ ೨ ಲಕ್ಷ ಮರ ಕಡಿಯಲಾಗಿತ್ತು. ಈ ಯೋಜನೆಯಿಂದ ೧ ಎಕರೆಯೂ ಮುಳುಗಡೆಯಾಗುವುದಿಲ್ಲ. ಪ್ರಸ್ತುತ ಶರಾವತಿ ಮತ್ತು ವಾರಾಹಿ ಸೇರಿ ೧೪೦೦ ಮೆಗಾವ್ಯಾಟ್ ಸಿಗಲಿದೆ. ಇಲ್ಲಿ ಉಪಯೋಗಿಸಿದ ನೀರನ್ನು ಮರಳಿ ಮೇಲೆ ತಂದು ವಿದ್ಯುತ್ ಉತ್ಪಾದನೆಯಾಗಲಿದೆ. ಕಾರಣವೇನೆಂದರೆ ರಾಜ್ಯ ಸಾಕಷ್ಟು ಪುನರ್ಬಳಕೆಯ ಇಂಧನ ಉತ್ಪಾದಿಸುತ್ತಿದೆ. ಸೌರಶಕ್ತಿ, ಗಾಳಿಶಕ್ತಿಯಿಂದ ರಾಯಚೂರು, ಗದಗ ಇನ್ನಿತರ ಕಡೆಗಳಲ್ಲಿ ಉತ್ತಮವಾಗಿ ಹಸಿರುಶಕ್ತಿ ಉತ್ಪಾದಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಹಸಿರು ಇಂಧನ ಉತ್ಪಾದನೆಯಲ್ಲಿ ಮೊದಲ ಸ್ಥಾನ ಗಳಿಸಲಿದೆ.
ಈ ನಡುವೆ ಶಾಸಕ ದಿನಕರ ಶೆಟ್ಟಿ ನೀರನ್ನು ಪಂಪ್ ಮಾಡುವುದಕ್ಕೆ ಎಷ್ಟು ವಿದ್ಯುತ್ ಬಳಸುತ್ತೀರಿ ಎಂದು ಸಚಿವರನ್ನು ಪದೇ ಪದೇ ಕೇಳಿದರೂ ಸಚಿವ ಕೆ.ಜೆ. ಜಾರ್ಜ್ ಉತ್ತರಿಸದೇ ಹೋದರು. ಬಳಿಕ ಈ ಬಗ್ಗೆ ಮಾಹಿತಿ ತರಿಸಿ ಕೊಡುತ್ತೇನೆಂದು ಸಚಿವರು ಸಮಜಾಯಿಸಿ ಕೊಟ್ಟಾಗ, ಎದ್ದುನಿಂತ ಶಾಸಕ ದಿನಕರ ಶೆಟ್ಟಿ, ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ ಜನರು ಸಾಯುವುದಕ್ಕೂ ಸಿದ್ಧರಿದ್ದಾರೆ. ನೀವೇನಾದರೂ ಜನರ ವಿರೋಧದ ನಡುವೆ ಯೋಜನೆ ಮಾಡಲು ಪಣತೊಟ್ಟರೆ ಜನರ ಹೆಣದ ಮೇಲೆ ಯೋಜನೆ ಮಾಡಬೇಕಾಗುತ್ತದೆ ಎಂಬುದೇ ನಮ್ಮ ಅಂತಿಮ ಎಚ್ಚರಿಕೆ ಎಂದರು.