ಶಿಗ್ಗಾಂವಿ: ಪಟ್ಟಣದ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಯ ಮನೆ ತೆರವುಗೊಳಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆಗ್ರಹಿಸಿದ್ದಲ್ಲದೇ ಆ.26 ರಂದು ಈದ್ ಮಿಲಾದ್ ದಿನವೇ ಶಿಗ್ಗಾಂವಿ ಪಟ್ಟಣ ಬಂದ್ಗೆ ಕರೆ ನೀಡಿದ್ದಾರೆ.
ಹಿಂದುಗಳು ಇತರ ಧರ್ಮದವರಿಗೆ ತೊಂದರೆ ನೀಡಿಲ್ಲ. ವಿದ್ಯಾರ್ಥಿಗಳ ವಿದ್ಯಾಭ್ಯಾಸ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ತೊಂದರೆಯಾಗುವ ರೀತಿಯಲ್ಲಿ ಧ್ವನಿವರ್ಧಕ ಬಳಸುವುದಿಲ್ಲ. ಕಾನೂನುಬದ್ಧವಾಗಿ ನಿಗದಿತ ಸಮಯದೊಳಗೆ ಧ್ವನಿವರ್ಧಕ ಬಳಕೆ ಮಾಡಬೇಕು. ಆದರೆ ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಗಳು ನಡೆದರೆ ಅದನ್ನು ಸಹಿಸುವುದಿಲ್ಲ ಎಂದು ಹೇಳಿದರು.
ರಟ್ಟಿಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಹಲವರು ಗಾಯಗೊಂಡಿರುವುದನ್ನು ಉಲ್ಲೇಖಿಸಿದ ಅವರು, ಶಿಗ್ಗಾಂವಿಗೆ ಆರೋಪಿಯಾಗಿರುವ ವ್ಯಕ್ತಿ ಹಾನಗಲ್ನಿಂದ ಹೇಗೆ ಬಂದನು, ಆತನಿಗೆ ಮನೆ ನೀಡಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು. ಅವರ ಹಿಂದೆ ಯಾರಾದರೂ ಪ್ರಭಾವಿ ವ್ಯಕ್ತಿಗಳು ಅಥವಾ ಧಾರ್ಮಿಕ ಮುಖಂಡರ ಕೈವಾಡವಿದೆಯೇ ಎಂಬುದನ್ನು ತನಿಖೆ ಮೂಲಕ ಪತ್ತೆಹಚ್ಚಬೇಕು ಎಂದು ಒತ್ತಾಯಿಸಿದರು.ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು. ಆರೋಪಿಯ ಪರವಾಗಿ ವಕೀಲರು ವಕಾಲತ್ತು ವಹಿಸಬಾರದು ಎಂದು ಮನವಿ ಮಾಡಿದ ಅವರು, ದೇವಸ್ಥಾನವನ್ನು ಶುದ್ಧೀಕರಿಸಿ ಪುನಃಸ್ಥಾಪಿಸಲು ಸರ್ಕಾರ ₹೧೦ ಲಕ್ಷ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.
ದೇವಸ್ಥಾನಗಳು ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ. ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರಮೋದ ಮುತಾಲಿಕ್ ಹೇಳಿದರು.
ಈದ್-ಮಿಲಾದ್ ದಿನದಂದೇ ಬಂದ್ಗೆ ಕರೆ: ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ಮೂತ್ರ ವಿಸರ್ಜನೆ ಘಟನೆಗೆ ಸಂಬಂಧಿಸಿದಂತೆ ಆ. ೨೬ರ ಈದ್ -ಮಿಲಾದ್ ದಿನದಂದೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಶಿಗ್ಗಾಂವಿ ಪಟ್ಟಣ ಬಂದ್ಗೆ ಕರೆ ನೀಡಿದ್ದಾರೆ.