ಉಡುಪಿ ಡಿಸಿ ವಿರುದ್ಧ ಸಿಎಂಗೆ ಕಾಂಗ್ರೆಸ್, ಸಹಬಾಳ್ವೆ ದೂರು

KannadaprabhaNewsNetwork |  
Published : Jan 22, 2026, 03:15 AM IST
ಕಾಂಗ್ರೆಸ್ | Kannada Prabha

ಸಾರಾಂಶ

ಶಿರೂರು ಮಠದ ಪರ್ಯಾಯೋತ್ಸವ ಮೆರವಣಿಗೆಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಭಗವಧ್ವಜವನ್ನು ಬೀಸಿ ಚಾಲನೆ ನೀಡಿದ್ದರ ವಿರುದ್ಧ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಪ್ರಗತಿಪರ ಸಂಘಟನೆಗಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ

ಉಡುಪಿ: ಶಿರೂರು ಮಠದ ಪರ್ಯಾಯೋತ್ಸವ ಮೆರವಣಿಗೆಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಭಗವಧ್ವಜವನ್ನು ಬೀಸಿ ಚಾಲನೆ ನೀಡಿದ್ದರ ವಿರುದ್ಧ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಪ್ರಗತಿಪರ ಸಂಘಟನೆಗಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿವೆ.

ಜಿಲ್ಲಾಧಿಕಾರಿ ಅವರು ಪರ್ಯಾಯೋತ್ಸವ ಮೆರವಣಿಗೆ ಸಂದರ್ಭ ಆರ್‌ಎಸ್‌ಎಸ್‌ ಧ್ವಜವನ್ನು ಕೈಯಲ್ಲಿ ಹಿಡಿದು ಮೇಲಕ್ಕೆತ್ತಿ ಸಾರ್ವಜನಿಕವಾಗಿ ಪ್ರದರ್ಶಿಸಿದ್ದಾರೆ. ಜಿಲ್ಲಾಧಿಕಾರಿಯವರ ಈ ನಡೆ ಸರ್ಕಾರಿ ಸೇವಾ ನಿಯಮಗಳು ಮತ್ತು ಸಂವಿಧಾನದ ಧರ್ಮ ನಿರಪೇಕ್ಷತೆಯ ತತ್ವಗಳಿಗೆ ವಿರುದ್ಧವಾಗಿದ್ದು, ಅತ್ಯಂತ ಆಕ್ಷೇಪಾರ್ಹವಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್‌ನ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಅವರು ಸಿಎಂ ಮತ್ತು ಡಿಸಿಎಂ ಅವರಿಗೆ ಮನವಿ ಮಾಡಿದ್ದಾರೆ.

ಸಹಬಾ‍ಳ್ವೆ ವಿರೋಧ: ಜಿಲ್ಲಾಧಿಕಾರಿ ಅಥವಾ ಸರ್ಕಾರಿ ನೌಕರರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ಕಾನೂನು ಕ್ರಮ ಜರುಗಲೇ ಬೇಕು. ಉಡುಪಿ ಜಿಲ್ಲಾಧಿಕಾರಿ ತಮ್ಮ ನಡೆಯಲ್ಲಿ ಬೇರೆ ರಾಜಕೀಯ ಹಿತಾಸಕ್ತಿ ಇರಲಿಲ್ಲ ಎಂದಿದ್ದಾರೆ. ಆದರೆ ಜಿಲ್ಲಾಡಳಿತದ ಪರವಾಗಿ ಭಾಗವಹಿಸಿದಾಗ ಅವರಿಗೆ ಸಾಂವಿಧಾನಿಕ ನಿಯಮಗಳನ್ನು ಪಾಲಿಸಬೇಕು ಎಂಬ ಜಾಗೃತಿ ಇರಬೇಕಿತ್ತು, ಸಂವಿಧಾನ ವಿರೋಧಿ ಸಂಘಟನೆಯ ಧ್ವಜವನ್ನು ನಿರಾಕರಿಸಬೇಕಿತ್ತು. ಜಿಲ್ಲಾಧಿಕಾರಿಯವರ ಸಂವಿಧಾನ ನಿಯಮ ಬಾಹಿರ ವರ್ತನೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರ ಮೇಲೆ ಕಠಿಣ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ಸಹಬಾಳ್ವೆ ಸಂಘಟನೆಯ ಸಂಚಾಲಕ ಕೆ. ಫಣಿರಾಜ್ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ
24ರಿಂದ ಎಬಿವಿಪಿ ರಾಜ್ಯಮಟ್ಟದ ಪ್ರಾಂತ ಸಮ್ಮೇಳನ