ಕನ್ನಡಪ್ರಭ ವಾರ್ತೆ ಮುಧೋಳ
ಗುರುವಾರ ನಗರದ ಕಾನಿಪ ಸಂಘದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಸೇನಾ ಕರ್ನಾಟಕ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಕಾರ್ಯತಂತ್ರ ಹಾಗೂ ರಾಜ್ಯದ ಪ್ರಸ್ತುತ ಜ್ವಲಂತ ಸಮಸ್ಯೆಗಳ ಕುರಿತು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು.
ಸದಸ್ಯತ್ವ ಅಭಿಯಾನಕ್ಕೆ ವ್ಯಾಪಕ ಬೆಂಬಲ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಶೀಘ್ರದಲ್ಲೇ ಕಾರ್ಯಕರ್ತರ ಬೃಹತ್ ಸಮಾವೇಶಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಸಮಾವೇಶಗಳ ಮೂಲಕ ಪಕ್ಷದ ತತ್ವ ಸಿದ್ಧಾಂತಗಳನ್ನು ತಲುಪಿಸಿ, ತಳಮಟ್ಟ ದಿಂದ ಸಂಘಟನಾತ್ಮಕವಾಗಿ ಬಲವರ್ಧನೆಗೆ ಯೋಜನೆ ರೂಪಿಸಲಾಗಿದೆ. ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಶಿವಸೇನಾ ಕರ್ನಾಟಕ ಪಕ್ಷದಿಂದ ಅಭ್ಯರ್ಥಿಗಳನ್ನು ಹಾಕಲಾಗುವುದು. ಈ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲವಾಗಲಿ ಅಥವಾ ಸೋಲಾಗಲಿ ಮುಖ್ಯವಲ್ಲ, ಸ್ಪರ್ಧೆ ಮುಖ್ಯವೆಂದು ಹೇಳಿದರು. ಗಣೇಶ ಹಬ್ಬ ಆಚರಣೆಗೆ ಪೊಲೀಸ್ ಇಲಾಖೆ ಕಿರಿಕ್ ಮಾಡುತ್ತಿದ್ದು, ಗಣೇಶ ಹಬ್ಬ ವಿಜೃಂಬಣೆಯಿಂದ ಆಚರಿಸಲು ಮುಕ್ತ ಅವಕಾಶ ನೀಡಬೇಕೆಂದು ಪೊಲೀಸ್ ಇಲಾಖೆಗೆ ಅವರು ಮನವಿ ಮಾಡಿದರು.ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬರಗಾಲದ ಭೀಕರತೆಯಿಂದಾಗಿ ರೈತರು, ಜನಸಾಮಾನ್ಯರು ಮತ್ತು ಜಾನುವಾರುಗಳು ಕುಡಿಯುವ ನೀರು ಹಾಗೂ ಮೇವಿನ ಅಭಾವದಿಂದ ತತ್ತರಿಸುತ್ತಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳದೆ ಕುಂಭಕರ್ಣ ನಿದ್ರೆಯಲ್ಲಿದೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ವೈ.ಡಿ.ಅಮರನಾಥ, ಸಂಘಟನಾ ಕಾರ್ಯದರ್ಶಿ ಮಹಾಲಿಂಗಪ್ಪ ಗುಂಜಿಗಾವಿ, ಬೀಳಗಿ ತಾಲೂಕಾ ಅಧ್ಯಕ್ಷ ಕಲ್ಮೇಶ ಜೋಗಿ, ಉಪಾಧ್ಯಕ್ಷ ಅಶೋಕ ಚಲವಾದಿ, ಯುವ ಮೋರ್ಚಾ ಅಧ್ಯಕ್ಷ ಪ್ರಕಾಶ ಅಣ್ಣಿಗೇರಿ, ತಾಲೂಕಾ ಕಾರ್ಯದರ್ಶಿ ಪ್ರಭು ಜಗದಾಳ, ಎಸ್ಸಿ, ಎಸ್ಟಿ ಘಟಕ ಅಧ್ಯಕ್ಷ ರಾಕೇಶ ಚಲವಾದಿ, ನಗರ ಮಂಡಲ ಅಧ್ಯಕ್ಷ ಪರಶುರಾಮ ಶಿಂಧೆ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.