ಶಿವಶರಣರ ಬದುಕು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕ

KannadaprabhaNewsNetwork | Published : Jul 24, 2024 12:25 AM

ಸಾರಾಂಶ

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದ ಹೇಮಾಂಗಣದಲ್ಲಿ ಮಂಗಳವಾರದ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯ ಕ್ರಮವನ್ನು ತಾಲೂಕು ಕಚೇರಿ ಗ್ರೇಡ್-2 ತಹಸೀಲ್ದಾರ್ ರಾಮರಾವ್ ದೇಸಾಯಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಶಿವಶರಣರ ಬದುಕು ಇಂದಿನ ಯುವ ಪೀಳಿಗೆಗೆ ಸ್ಪೂರ್ತಿದಾಯಕವಾಗಿದ್ದು, ಅವರ ವಚನದೊಳಗಿನ ವಿಚಾರಗಳು ಸಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಚಿಂತಕ ವಿಶ್ವನಾಥ್ ಸಂಕಲ್ಪ ಹೇಳಿದರು.

ಜಿಲ್ಲಾಡಳಿತದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣನ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದ ಅವರು, ಅಪ್ಪಣ್ಣ ಪ್ರಿಯ ಚೆನ್ನಬಸವ ಎಂಬ ಅಂಕಿತನಾಮದಿಂದ ಪ್ರಸಿದ್ಧರಾಗಿರುವ ಶಿವಶರಣ ಹಡಪದ ಅಪ್ಪಣ್ಣನವರು ಶರಣ ಶ್ರೇಷ್ಠರಾಗಿದ್ದಾರೆ. ಸುಮಾರು 250ಕ್ಕೂ ಹೆಚ್ಚಿನ ವಚನಗಳನ್ನು ರಚಿಸಿ ತಮ್ಮ ವಿಮರ್ಶಾತ್ಮಕ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿ, 12ನೇ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ ಎಂದರು.

ಹಡಪದ ಅಪ್ಪಣ್ಣನವರು ಬಸವಣ್ಣನವರ ಒಡನಾಡಿ ಹಾಗೂ ವಿಶ್ವದ ಪ್ರಥಮ ಪ್ರಜಾಪ್ರಭುತ್ವ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿದ್ದರು, ತಮ್ಮ ಕಾರ್ಯಕ್ಷಮತೆಯಿಂದ ಇಂದಿಗೂ ಮಾದರಿಯಾಗಿದ್ದಾರೆ. ಶಿವಶರಣರ ಆದರ್ಶಗಳನ್ನು ಪ್ರತಿಯೊಬ್ಬರು ಅರಿತು ತಮ್ಮಲ್ಲಿ ಅಳವಡಿಸಿಕೊಳ್ಳುವುದರಿಂದ ಉತ್ತಮ ಸಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಗ್ರೇಡ್-2 ತಹಸೀಲ್ದಾರ್ ರಾಮರಾವ್ ದೇಸಾಯಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಶರಣರು ಭಕ್ತಿ ಭಂಡಾರದ ಜೊತೆಗೆ ಕಾಯಕ ನಿಷ್ಠೆಗೂ ಹೆಸರು ವಾಸಿಯಾಗಿದ್ದರು. ಶಿವಶರಣರು ಎಲ್ಲರನ್ನೂ ಸಮಾನವಾಗಿ ಕಾಣುವ ಸರ್ವರನ್ನು ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರಣೆ ನೀಡುವ ಶರಣರ ಸರಳತೆಯ ಜೀವನ ಪ್ರತಿಯೊಬ್ಬರಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸಿ. ರಮೇಶ್ ಮಾತನಾಡಿ, ಶರಣರಲ್ಲಿ ಎಲ್ಲ ಜಾತಿಯ ಜನರು ಇದ್ದರು, ಮೇಲ್ವರ್ಗದ ಜನರು ಹಾಗೂ ಕೆಳವರ್ಗದ ಜನರು ಎಲ್ಲರೂ ಒಟ್ಟಿಗೆ ಸೇರಿ ಸಾಮಾಜಿಕ ಸಮಾನತೆ ಸಾರಿದರು. ಪ್ರಸ್ತುತ ಸಮಾಜದಲ್ಲಿ ತಲೆದೋರಿರುವ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಶರಣರ ಬದುಕು ಪ್ರೇರಣಾದಯಕವಾಗಿದೆ. ಶರಣ ಧರ್ಮವು ಉದಾರ, ವೈಚಾರಿಕ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿದ್ದು ಉತ್ತಮ ಸಮಾಜ ನಿರ್ಮಾಣದಲ್ಲಿ ಶಿವ ಶರಣರ ಪಾತ್ರ ಮಹತ್ವದ್ದು ಎಂದರು.

ಈ ವೇಳೆ ಕಾರ್ಯಕ್ರಮದಲ್ಲಿ ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷ ಎನ್.ಸತೀಶ್, ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಜೆ. ಸತ್ಯನಾರಾಯಣ, ಹಿರಿಯ ಕಲಾವಿದರಾದ ಮುನಿರತ್ನ, ಸವಿತಾ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Share this article