ಶಿವಾಜಿ ಮಹಾರಾಜರ ತತ್ವಗಳು ಭಾಷಣಕ್ಕೆ ಸೀಮಿತ ಬೇಡ: ಎಡಿಸಿ ಬಿ.ಟಿ.ಕುಮಾರಸ್ವಾಮಿ

KannadaprabhaNewsNetwork |  
Published : Feb 20, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ   | Kannada Prabha

ಸಾರಾಂಶ

ಶಿವಾಜಿ ಮಹಾರಾಜರ ತತ್ವ ಕೇವಲ ಭಾಷಣಕ್ಕೆ ಸೀಮಿತ ಬೇಡ. ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗಳಿಗೆ ಅರ್ಥ ಬರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಶಿವಾಜಿ ಮಹಾರಾಜರ ತತ್ವ ಕೇವಲ ಭಾಷಣಕ್ಕೆ ಸೀಮಿತ ಬೇಡ. ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗಳಿಗೆ ಅರ್ಥ ಬರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಜಂಟಿಯಾಗಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉದ್ಘಾಟಿಸಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ಅವರು ಇಡೀ ದೇಶದ ಅಸ್ಮಿತೆ ಮತ್ತು ಶೌರ್ಯದ ಸಂಕೇತ. ಭಾರತೀಯ ಇತಿಹಾಸದ ಧೃವತಾರೆ ಎಂದು ಬಣ್ಣಿಸಿದರು.

ಶಿವಾಜಿ ಮಹಾರಾಜರು ಬಾಲ್ಯದಲ್ಲಿಯೇ ತಮ್ಮ ತಾಯಿ ಜೀಜಾಬಾಯಿ ಅವರಿಂದ ಸಂಸ್ಕಾರ ಮತ್ತು ಶೌರ್ಯದ ಪಾಠಗಳನ್ನು ಕಲಿತವರು. ರಾಮಾಯಣ ಮತ್ತು ಮಹಾಭಾರತದ ಕಥೆಗಳಿಂದ ಪ್ರೇರಿತರಾಗಿ, ಸ್ವರಾಜ್ಯ ಸ್ಥಾಪನೆಯ ಕನಸು ಕಂಡು ಅದನ್ನು ನನಸಾಗಿಸಿದರು. ಅವರ ಆಡಳಿತದಲ್ಲಿ ಮಹಿಳೆಯರಿಗೆ ನೀಡುತ್ತಿದ್ದ ಗೌರವ ಮತ್ತು ಶಿಸ್ತು ಇಂದಿಗೂ ನಮಗೆ ಮಾದರಿ ಎಂದರು.

ಇಂದು ನಾವು ಕತ್ತಿ ಹಿಡಿದು ಯುದ್ಧ ಮಾಡುವ ಕಾಲದಲ್ಲಿಲ್ಲ. ಇಂದಿನ ಯುಗದಲ್ಲಿ ಶಿಕ್ಷಣವೇ ನಮಗೆ ದೊಡ್ಡ ಆಯುಧವಾಗಿದೆ. ಸರ್ಕಾರವು ಮರಾಠ ಸಮುದಾಯಕ್ಕೆ 3ಎ ಮೀಸಲಾತಿ ಕಲ್ಪಿಸಿದೆ. ಈ ಸೌಲಭ್ಯ ಬಳಸಿಕೊಂಡು ಸಮಾಜದ ಯುವಕರು ಉನ್ನತ ಶಿಕ್ಷಣ ಪಡೆದು, ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಬೇಕು. ಮರಾಠ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. ಈ ನಿಗಮದ ಮೂಲಕ ದೊರೆಯುವ ವಿವಿಧ ಸಾಲ ಸೌಲಭ್ಯಗಳು ಮತ್ತು ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ ತಾಜ್‍ಪೀರ್ ಮಾತನಾಡಿ, ಶಿವಾಜಿ ಮಹಾರಾಜರು ಸರ್ವರಿಗೂ ಪ್ರೇರಣೆಯಾಗಿದ್ದಾರೆ. ನಗರದಲ್ಲಿರುವ ಮರಾಠ ಸಮಾಜದವರು ಪೂರ್ವಜರಿಂದ ಬಳುವಳಿಯಾಗಿ ಬಂದ ಮರಾಠಿ ಭಾಷೆ ಹಾಗೂ ಸಂಪ್ರದಾಯಗಳನ್ನು ನಿರ್ಲಕ್ಷಿಸದೆ, ಮಕ್ಕಳಿಗೆ ಮಾತೃಭಾಷೆ ಹಾಗೂ ಸತ್ಸಂಪ್ರದಾಯಗಳನ್ನು ಕಲಿಸಬೇಕು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಬಾಲಕರ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಿ. ತಿಪ್ಪೇಸ್ವಾಮಿ ಮಾತನಾಡಿದರು.

ಉಪನ್ಯಾಸಕ ಚನ್ನಬಸವಯ್ಯ ಕಾರ್ಯಕ್ರಮದ ನಿರೂಪಣೆ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ.ಬಿ.ಎಂ.ಗುರುನಾಥ ಸ್ವಾಗತಿಸಿದರು. ರಂಗನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ ಮತ್ತು ತಂಡ ನಾಡಗೀತೆ ಹಾಡುವುದರೊಂದಿಗೆ ಜಯಂತಿಯಲ್ಲಿ ಗೀತಗಾಯನ ಪ್ರಸ್ತುತ ಪಡಿಸಿದರು.

ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಉಪ ವಿಭಾಗಧಿಕಾರಿಗಳ ಕಚೇರಿ ತಹಸೀಲ್ದಾರ್ ನರಸಿಂಹಮೂರ್ತಿ, ಮರಾಠ ವಿದ್ಯಾವರ್ಧಕ ಸಂಘದ ಆದ್ಯಕ್ಷ ಸುರೇಶ್ ರಾವ್ ಜಾದವ್, ಕಾರ್ಯದರ್ಶಿ ಜೆ.ಗೋಪಾಲರಾವ್ ಜಾದವ್, ಜೀಜಾಮಾತ ಮಹಿಳಾ ಮಂಡಳಿಯ ಅಧ್ಯಕ್ಷೆ ಜಿ.ಉಷಾ ಬಾಯಿ ಜಾದವ್, ಸಮಾಜದ ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌