ಕಾರವಾರ: ರಾಷ್ಟ್ರವನ್ನು ಪರಕೀಯರ ಆಡಳಿತದಿಂದ ಮುಕ್ತಿಗೊಳಸಿ ರಕ್ಷಿಸುವಲ್ಲಿ ಶಿವಾಜಿ ಮಹಾರಾಜರ ಕೊಡುಗೆ ಆಪಾರವಾಗಿದೆ. ಶಿವಾಜಿ ಅವರ ರಾಷ್ಟ್ರ ಮನೋಭಾವ, ದೇಶಪ್ರೇಮ ಇಂದಿನ ಯುವಪೀಳಿಗೆಗೆ ಮಾದರಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು.
ಭಾರತಿಯ ನೌಕಾಪಡೆ ಎಂಬ ಪರಿಕಲ್ಪನೆಯನ್ನು ಹುಟ್ಟು ಹಾಕಿದವರೇ ಶಿವಾಜಿ ಮಹಾರಾಜರಾಗಿದ್ದಾರೆ. ಅವರ ಆಸ್ಥಾನದಲ್ಲಿ ಯಾವುದೇ ಜಾತಿ, ಧರ್ಮ, ಭೇದ-ಭಾವವಿಲ್ಲದೇ ದೀನ-ದಲಿತರಿಗೂ ಆಶ್ರಯ ನೀಡುತ್ತಿದ್ದರು ಎಂದರು.
ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ ಮಾತನಾಡಿ, ಜೀಜಾಬಾಯಿ ಅವರ ಪ್ರೇರಣೆಯಿಂದ ಶಿವಾಜಿ ಮಹಾರಾಜರು ದೇಶಭಕ್ತಿ ಮೈಗೂಡಿಸಿಕೊಂಡರು. ಸ್ವರಾಜ್ಯ ಕಟ್ಟುವುದೇ ಅವರ ಗುರಿಯಾಗಿತ್ತು. ಅವರ ಯುದ್ಧಕಲೆಯನ್ನು ಸೇನೆಯಲ್ಲಿ ಇಂದಿಗೂ ಪಾಲನೆ ಮಾಡಲಾಗುತ್ತದೆ ಎಂದು ಹೇಳಿದರು.ಬಾಡದ ಶಿವಾಜಿ ಶಿಕ್ಷಣ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ನವೀನ ದೇವರಭಾವಿ ಶಿವಾಜಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಶಿವಾಜಿ ಮಹಾರಾಜ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ, ಪೌರಾಯುಕ್ತ ಜಗದೀಶ ಹುಲಗಜ್ಜಿ, ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿ ಸಮಿತಿಯ ಅಧ್ಯಕ್ಷ ಸತೀಶ್ ಕೊಳಂಬಕರ, ನಗರಸಭೆ ಸದಸ್ಯ ಹನುಮಂತ ತಳವಾರು, ಮನೋಜ ಬಾಂದೇಕರ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ ಇದ್ದರು.