ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕ್ರಿಸ್ಮಸ್ ಟ್ರೀ, ಏಸುವಿನ ಜನನ ಸಂದರ್ಭದ ಕ್ಷಣಗಳನ್ನು ನೆನಪಿಸುವ ಗೋದಲಿ ನೋಡುಗರ ಗಮನ ಸೆಳೆಯಿತು.
ಬುಧವಾರ ಮಧ್ಯರಾತ್ರಿ ಹಾಗೂ ಗುರುವಾರ ಮುಂಜಾನೆ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತ ಧರ್ಮೀಯರು ಪಾಲ್ಗೊಂಡಿದ್ದರು. ಚರ್ಚ್ಗಳಲ್ಲಿ ಕೇಕ್, ಚಾಕೊಲೆಟ್, ಸಿಹಿ ತಿಂಡಿ ಹಂಚಲಾಯಿತು.ಮನೆಯಲ್ಲಿ ವಿಶೇಷ ಖಾದ್ಯ ತಯಾರಿಸಿ ಹಬ್ಬದೂಟ ಮಾಡಲಾಯಿತು. ಚರ್ಚ್ಗಳಲ್ಲಿ ಶುಭಾಶಯ ಗೀತೆ, ಕ್ರಿಸ್ತರ ಸ್ತುತಿಯ ಗೀತೆ ಸಾಮೂಹಿಕವಾಗಿ ಕೇಳಿಬಂದವು. ವಿವಿಧ ಚರ್ಚ್ಗಳಲ್ಲಿ ಅಲ್ಲಿನ ಫಾದರ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಪ್ರಾರ್ಥನೆ ನಡೆಯಿತು.
ಶಿವಮೊಗ್ಗ ನಗರದ ಬಿ.ಎಚ್.ರಸ್ತೆಯಲ್ಲಿರುವ ಪವಿತ್ರ ಹೃದಯ ಪ್ರಧಾನಾಲಯ, ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿಯಿರುವ ಸಂತ ಥಾಮಸ್ ಚರ್ಚ್, ಶರಾವತಿ ನಗರದ ಏಸು ಬಾಲರ ಪುಣ್ಯಕ್ಷೇತ್ರ, ಭದ್ರಾವತಿ ನ್ಯೂ ಟೌನ್ ಅಮುಲೋದ್ಭವಿ ಮಾತೆ ದೇವಾಲಯ, ೧೦೦ ವರ್ಷ ಇತಿಹಾಸವಿರುವ ಸಾಗರದ ಸಂತ ಜೋಸೆಫರ ದೇವಾಲಯ, ತೀರ್ಥಹಳ್ಳಿಯ ಸೇಂಟ್ ಫಿಲೋಮಿನಾ ಚರ್ಚ್, ಲೂಥರ್ ಮಾತೆಯ ಚರ್ಚ್, ಹೊಸನಗದ ಸೇಂಟ್ ಆಂಥೋನಿ ಚರ್ಚ್, ಶಿಕಾರಿಪುರದ ಚರ್ಚ್, ಸೊರಬದ ಸಂತ ಸಬಾಸ್ಟಿಯನ್ ಚರ್ಚ್ ಸೇರಿದಂತೆ ಜಿಲ್ಲೆಯ ಎಲ್ಲ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ ನೆರವೇರಿದವು.
ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಚರ್ಚ್ ಗಳನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ವರ್ಣರಂಜಿತ ದೀಪಾಲಾಂಕರದ ವ್ಯವಸ್ಥೆ ಮನಸೂರೆಗೊಂಡಿತು. ಬೆಳಿಗ್ಗೆಯಿಂದಲೇ ಚರ್ಚೆ ಆಗಮಿಸುತ್ತಿದ್ದ ಕ್ರಿಶ್ಚಿಯನ್ ಬಾಂಧವರು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತದನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.