ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣ ಹೊರವಲಯದ ಚಂದ್ರವನ ಆಶ್ರಮದಲ್ಲಿ ಜ.26 ರಿಂದ 28ರ ವರೆಗೆ ಶ್ರೀ ಮರಿದೇವರು ಶಿವಯೋಗಿ ಮಹಾಸ್ವಾಮಿಗಳವರ 130ನೇ ಜಯಂತಿ ಹಾಗೂ ಚಂದ್ರವನ ಆಶ್ರಮದ ಪೀಠಾಧಿಪತಿ ಡಾ. ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿಯ 25 ನೇ ವರ್ಷದ ಪಟ್ಟಾಧಿಕಾರ ರಜತ ಮಹೋತ್ಸವ ಆಚರಣೆಗೆ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.ಚಂದ್ರವನ ಆಶ್ರಮದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.26ರಂದು ಬೆಳಿಗ್ಗೆ 6ಕ್ಕೆ ನವಗ್ರಹ ಪೂಜೆ, ಮೃತ್ಯುಂಜಯ ಪೂಜೆ, ನವದುರ್ಗಿಯರ ಪೂಜೆ, ಪ್ರಧಾನ ಕಳಸ ಪೂಜಾಕಾರ್ಯ, ಬೆಳಿಗ್ಗೆ 7ಕ್ಕೆ ನಂಜನಗೂಡು ತಾಲೂಕಿನ ಬಸವನಪುರ ಶ್ರೀ ಮಲ್ಲನಮೂಲೆ ಮಠದ ಷ.ಬ್ರ.ಸ್ವ. ಚನ್ನಬಸವ ಸ್ವಾಮೀಜಿ ಷಟ್ಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಸಂಜೆ 5ಕ್ಕೆ ಭಕ್ತಾಧಿಗಳಿಂದ ನಾಣ್ಯ, ನವಧಾನ್ಯ, ಅಕ್ಕಿ, ಬೆಲ್ಲಗಳಿಂದ ಶ್ರೀಗಳಿಗೆ ತುಲಾಭಾರ ಸೇವೆ ನಡೆಯಲಿದೆ. ಸಂಜೆ 6ಕ್ಕೆ ವಿಭೂತಿಮಠದ ಷ.ಬ್ರ.ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಚಂದ್ರವನ ಸಿರಿ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ. ನಂತರ ಡಿಎಂಎಸ್ ಜ್ಞಾನಕುಟೀರ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದರು.ಮಠದ ಪೀಠಾಧಿಪತಿ ಡಾ. ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಬೆಳಗಾವಿ ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ, ಷ.ಬ್ರ.ಸ್ವ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮ.ನಿ.ಪ್ರ. ಕಲ್ಯಾಣ ಸ್ವಾಮೀಜಿ ದಿವ್ಯ ಸಮುಖದಲ್ಲಿ ಮೈಸೂರು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಉದ್ಘಾಟಿಸುವರು. ಮಾಜಿ ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಡಿಡಿಪಿಐ ಎಚ್. ಶಿವರಾಮೇಗೌಡ, ಬಿಇಒ ಬಿ. ಚಂದ್ರಶೇಖರ್ ಭಾಗವಹಿಸುವರು ಎಂದು ತಿಳಿಸಿದರು.
ಜ.27ರಂದು ಬೆಳಗ್ಗೆ ಶ್ರೀ ಕಾಶಿ ಚಂದ್ರಮೌಳೇಶ್ವರ ಸ್ವಾಮಿ ಹಾಗೂ ಪರಿವಾರ ದೇವತೆಗಳಿಗೆ ರುದ್ರಾಭಿಷೇಕ, ವಿಶೇಷ ಅಲಂಕಾರ, ಕುಂಕುಮಾರ್ಚನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಶ್ರೀಗಳಿಗೆ ತುಲಾಭಾರ ಸೇವೆ, ಬೆನಂತರ ಭಕ್ತಿಗೀತೆ ಮತ್ತು ವಚನ ಗಾಯನ ನಡೆಯಲಿದೆ ಎಂದರು.ಶ್ರೀ ತ್ರಿನೇತ್ರ ಅಂತರಾಷ್ಟ್ರೀಯ ಯೋಗ ಅಧ್ಯಯನ ಕೇಂದ್ರದ 3ನೇ ವರ್ಷದ ಘಟಿಕೋತ್ಸವ ಸಮಾರಂಭ ನಡೆಯಲಿದೆ. ಡಾ.ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ತುಮಕೂರಿನ ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಸ್ಕೋಪ್ ಫೌಂಡೇಷನ್ನ ಛೇರ್ಮನ್ ಡಾ.ಎಲ್.ಎನ್. ಮೂರ್ತಿ ಹಲ್ಲೇಗೆರೆ, ಅಭಿನವ ಭಾರತಿ ಶಿಕ್ಷಣ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ ಕೀಲಾರ, ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನದ ಅರ್ಚಕ ಬಸವರಾಜ ಗುರೂಜಿ, ಏರೋಸ್ಪೇಸ್ನ ಮುಖ್ಯ ಸಂಶೋಧನಾ ವಿಜ್ಞಾನಿ ಡಾ.ಎಸ್.ಎನ್. ಓಂಕಾರ್, ಆಯುಷ್ ಇಲಾಖೆ ನಿವೃತ್ತ ನಿರ್ದೇಶಕ ಗಾ.ನ. ಶ್ರೀಕಂಠಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.
ನಂತರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ಪ್ರಮಾಣ ವಚನ ಬೋಧನೆ, 1008 ಗಿಡಗಳ ಉಚಿತ ವಿತರಣೆ, ನಂತರ ಸಂತರ ಸಮಾಗಮ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 80 ಪ್ರಮುಖ ಮಠಗಳ ಸ್ವಾಮೀಜಿಗಳು ಸಾನಿಧ್ಯ ವಹಿಸುವರು. ರಾತ್ರಿ ಕಾವೇರಿ ದೀಪಾರತಿ ನಡೆಯಲಿದೆ ಎಂದು ತಿಳಿಸಿದರು.ಜ.28ರಂದು ಬೆಳಿಗ್ಗೆ ಮಠ ಪೀಠಾಧಿಪತಿ ಡಾ. ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿಗೆ ಪಾದಪೂಜೆ, ಪುಷ್ಪವೃಷ್ಟಿ, ಬಿಲ್ವಾರ್ಚನೆ, ಆರತಿ ಮತ್ತು ಗುರುವಂದನೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಧಾರ್ಮಿಕ ಸಮಾರಂಭ , ವಿಶೇಷ ಲಕೋಟೆ ಮತ್ತು ಅಂಚೆಚೀಟಿ ಬಿಡುಗಡೆ, ಫಲಪ್ರದಾಯಿನಿ ಶ್ರೀ ಪಾರ್ವತಿದೇವಿ ವ್ರತ-ಕಥೆ ಪುಸ್ತಕ ಬಿಡುಗಡೆ, ಪುಸ್ತಕ ಮಳಿಗೆ ಉದ್ಘಾಟನೆ ನಡೆಯಲಿದೆ ಎಂದರು.
ಸಮಾರಂಭದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸುವರು. ಹಿರಿಯ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಸಮರ್ಪಣೆಯಲ್ಲಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ಹಾಗೂ ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಭಾಗವಹಿಸುವರು. ಶಿವಯೋಗಿ ದರ್ಶನ ಅಭಿವಂದನಾ ಗ್ರಂಥವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ್ವಾಮಿ ಬಿಡುಗಡೆ ಮಾಡುವರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು. ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಜಿಲ್ಲೆಯ ಎಲ್ಲ ಶಾಸಕರು, ಸಚಿವರು, ಸಾಹಿತಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದರು.ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾಮಠದ ಸಿದ್ದಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಡಿಎಂಎಸ್ ಆಯುರ್ವೇದ ಆಸ್ಪತ್ರೆ ಉದ್ಘಾಟಿಸುವರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಶತಾಯುಷಿ ಶ್ರೀ ಮರಿದೇವರ ಶಿವಯೋಗ ಚರಿತೆ ಕೃತಿ ಲೋಕಾರ್ಪಣೆ ಮಾಡುವರು. ಧ್ಯಾನಮಂದಿರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸುವರು. ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.
ಸುದ್ಧಿಗೋಷ್ಠಿಯಲ್ಲಿ ಮಠದ ಪೀಠಾಧ್ಯಕ್ಷ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಸ್ವಾಗತ ಸಮಿತಿ ಸದಸ್ಯರಾದ ಕೃಷ್ಣಪ್ಪ, ಎಸ್.ಎ.ಮಲ್ಲೇಶ್ ಇತರರು ಹಾಜರಿದ್ದರು.