ರಾಮನಗರ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಮಹತ್ವದ ಕೊಡುಗೆ ನೀಡಿದ್ದು, ನಾಗರೀಕರು ಯಾವುದೇ ರೀತಿಯ ದುಶ್ಚಟಗಳು ಮತ್ತು ವ್ಯಸನಗಳಿಗೆ ದಾಸರಾಗಬಾರದೆಂದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರಂತರ ತೊಡಗಿಸಿಕೊಂಡಿದ್ದರು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಬಣ್ಣಿಸಿದರು.
ವಿವಿಧ ಮಠಗಳ ಸ್ವಾಮೀಜಿಗಳು ಪೂಜೆ, ಪುನಸ್ಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದ ಆಧ್ಯಾತ್ಮಿಕ ಬೆಳವಣಿಗೆಗೆ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರು ವ್ಯಸನಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿದ್ದರು. ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಿದ ಮಹಾಂತ ಶಿವಯೋಗಿ ಸ್ವಾಮೀಜಿಗಳು ಸಮಾಜದಲ್ಲಿನ ದುಶ್ಚಟಗಳನ್ನು ತ್ಯಜಿಸುವಂತೆ ಪ್ರೇರೇಪಿಸಲು ಶ್ರೀಗಳು ಜೋಳಿಗೆಯನ್ನೇ ಒಡ್ಡಿ, ಅದರಲ್ಲಿ ಅಮಲು ಪದಾರ್ಥಗಳನ್ನು ಹಾಕಿಸಿಕೊಂಡು ಮತ್ತೆಂದೂ ದುಶ್ಚಟಗಳಿಗೆ ಬಲಿಯಾಗದಂತೆ ನಾಗರೀಕರಲ್ಲಿ ಮನವಿ ಮಾಡುತ್ತಿದ್ದರು ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಮಾದಕ ಪದಾರ್ಥಗಳು ಲಭ್ಯವಾಗುತ್ತಿದ್ದು, ಅವು ಆರೋಗ್ಯದ ಜೊತೆಗೆ ವ್ಯಕ್ತಿಯ ಭವಿಷ್ಯವನ್ನೂ ಹಾಳುಮಾಡುತ್ತಿದ್ದು, ಅವುಗಳಿಂದ ದೂರವಿರಬೇಕು. ರಾಜ್ಯ ಸರ್ಕಾರ ಇದೀಗ ವಿವಿಧ ಇಲಾಖೆಗಳ ಸುಮಾರು 72 ಸಾವಿರಕ್ಕೂ ಹೆಚ್ಚಿನ ಹುದ್ದೆಗಳ ಭರ್ತಿಗೆ ಕ್ರಮವಹಿಸಿದೆ. ಆ ನೇಮಕಾತಿಗಳಿಗೆ ನಡೆಯುವ ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ಶ್ರಮವಹಿಸಿ ಓದುವ ಮೂಲಕ ನೇಮಕಾತಿ ಹೊಂದಿ ಉತ್ತಮ ಜೀವನ ನಡೆಸುವಂತೆ ತಿಳಿಸಿದರು.ವಿದ್ಯಾರ್ಥಿಗಳು ಧೂಮಪಾನ, ಮದ್ಯಪಾನ ಸೇರಿದಂತೆ ಇತರೆ ರೀತಿಯ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡು ಅವುಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಿ, ತಮ್ಮ ತಂದೆ-ತಾಯಿಯ ಆಸೆಗಳನ್ನು ಈಡೇರಿಸಬೇಕೆಂದು. ವ್ಯಸನ ಮುಕ್ತ ಜೀವನವನ್ನು ದಿನಾಚರಣೆಯಂದು ಮಾತ್ರವಲ್ಲದೆ ಪ್ರತಿದಿನದ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದು ಚಂದ್ರಯ್ಯ ಹೇಳಿದರು.
ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವವನ್ನು ಬೆಳೆಸಬೇಕು. ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆಗಳನ್ನು ಓದಿ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳಬೇಕು, ಮದ್ಯಪಾನ ಹಾಗೂ ಇತರ ಮಾದಕ ವ್ಯಸನಗಳ ಗೀಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ನಶೆಯ ಪರಿಣಾಮ ಕುಟುಂಬಗಳನ್ನೇ ಅಧಃಪತನಕ್ಕೆ ತಳ್ಳುತ್ತವೆ, ನಶೆಯಲ್ಲಿರುವ ವ್ಯಕ್ತಿಗಳಿಗೆ ತಂದೆ, ತಾಯಿ, ಮಕ್ಕಳು ಎಂಬ ಅರಿವೇ ಇಲ್ಲದ ಸ್ಥಿತಿ ಉಂಟಾಗಿ ಅನೇಕ ಅಪರಾಧಗಳು ಮತ್ತು ಸಾವುಗಳು ಸಂಭವಿಸುತ್ತಿವೆ ಆದ್ದರಿಂದ ಎಲ್ಲಾ ರೀತಿಯ ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು.
ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಶ್ರೇಷ್ಠ ಸಂವಿಧಾನವನ್ನು ನೀಡಿದ್ದು, ಅದರಲ್ಲಿರುವ ಹಕ್ಕುಗಳು ಮತ್ತು ಅವಕಾಶಗಳನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು. ಭಗತ್ ಸಿಂಗ್ ಹಾಗೂ ಸ್ವಾಮಿ ವಿವೇಕಾನಂದರಂತಹ ಮಹನೀಯರು ಯಾವುದೇ ದುಶ್ಚಟಗಳಿಗೆ ಒಳಗಾಗದೆ ದೇಶಸೇವೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದರು. ಅವರ ಆದರ್ಶಗಳನ್ನು ಯುವಜನತೆ ಅನುಸರಿಸಬೇಕು ಎಂದು ಶೇಖರ್ ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ , ಸಹಾಯಕ ನಿರ್ದೇಶಕಿ ಜೆ.ಹೇಮಾವತಿ, ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶಿವಲಿಂಗೇ ಗೌಡ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಅತಿಥಿಗಳು ಉದ್ಘಾಟಿಸಿದರು.