ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ-ಸಡಗರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಕಂಡುಬಂದಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಭರಾಟೆ ಬಲು ಜೋರಾಗಿ ಸಾಗಿದೆ.
ಶಿವಮೊಗ್ಗ: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ-ಸಡಗರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಕಂಡುಬಂದಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಭರಾಟೆ ಬಲು ಜೋರಾಗಿ ಸಾಗಿದೆ.
ಪ್ರತಿಭಾರಿಯೂ ಹಬ್ಬಗಳು ಬೆಲೆ ಏರಿಕೆಯ ಬಿಸಿಯಲ್ಲಿ ನಡೆಯುತ್ತಿದ್ದವು. ಆದರೆ ಈ ಬಾರಿ ಹೂವು, ಹಣ್ಣು, ತರಕಾರಿ ಸೇರಿದಂತೆ ಹಲವು ವಸ್ತುಗಳ ಬೆಲೆಯಲ್ಲಿ ಅಂತಹ ವ್ಯತ್ಯಾಸವೇನೂ ಇರಲಿಲ್ಲ. ಅದರಲ್ಲೂ ಚೆಂಡಿಹೂವು ನಗರಕ್ಕೆ ಅಪಾರ ಪ್ರಮಾಣದಲ್ಲಿ ಬಂದಿದ್ದು, ಕೆಜಿಗೆ 50ರಿಂದ 80 ರು.ವರೆಗೆ ಮಾರಾಟ ಮಾಡಲಾಗುತ್ತಿತ್ತು. ಹಾಗೆಯೇ ಸೇವಂತಿಗೆ ಹೂವಿನ ದರ ಕೂಡ ಇಳಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲೇ ಮಳೆ ಆಗುತ್ತಿರುವ ಕಾರಣ ಹೂವಿನ ಬೆಲೆ ಅಷ್ಟೇನೂ ಏರಿಕೆಯಾಗಿಲ್ಲ. ನಗರದ ಗಾಂಧಿ ಬಜಾರ್, ದುರ್ಗಿಗುಡಿ, ಬಿ.ಎಚ್.ರಸ್ತೆ, ಲಕ್ಷ್ಮಿ ಟಾಕೀಸ್ ವೃತ್ತ, ಪೊಲೀಸ್ ಚೌಕಿ, ಗೋಪಾಳ, ವಿದ್ಯಾನಗರ, ಸವಳಂಗ ರಸ್ತೆ, ಗೋಪಿ ವೃತ್ತ ಸೇರಿದಂತೆ ವಿವಿಧೆಡೆ ಮಾರುಕಟ್ಟೆ ಪ್ರದೇಶಗಳು ಜನಜಂಗುಳಿಯಿಂದ ಕೂಡಿದ್ದವು. ಬೆಳಕಿನ ಹಬ್ಬದ ಮೆರುಗು ಹೆಚ್ಚಿಸುವ ಹೂವು, ಹಣ್ಣು, ಹಣತೆ, ಆಲಂಕಾರಿಕ ವಸ್ತುಗಳ ಖರೀದಿ ಹೆಚ್ಚಾಗಿದೆ. ಮಾರುಕಟ್ಟೆಗಳಲ್ಲಿ ತರಹೇವಾರಿ ವಿನ್ಯಾಸದ ಹಣತೆಗಳು ಜನರನ್ನು ಆಕರ್ಷಿಸುತ್ತಿದ್ದವು. ದೀಪವೊಂದರ ಬೆಲೆ 5 ರು. 300 ರೂ.ವರೆಗೂ ಇದೆ. ತರಕಾರಿ, ದಿನಸಿ ಮತ್ತು ಪೂಜೆಗೆ ಬೇಕಾಗುವ ಬೂದುಗುಂಬಳ, ಬಾಳೆ ಕಂದು, ವೀಳ್ಯದೆಲೆ, ತೆಂಗಿನಕಾಯಿ ಖರೀದಿ ಜೋರಾಗಿತ್ತು. ನಗರದ ವಿವಿಧ ಭಾಗಗಳಲ್ಲಿ ಹೂವು ಹಾಗೂ ಆಲಂಕಾರಿಕ ವಸ್ತುಗಳನ್ನು ಮಾರಾಟ ಮಾಡುವ ಕಿರು ಮಾರುಕಟ್ಟೆಗಳು ತಲೆಎತ್ತಿವೆ.
ಸೋಮವಾರ ಮತ್ತೆ ಮಂಗಳವಾರ ಅಮಾವಾಸ್ಯೆ ಇರುವುದರಿಂದ ಲಕ್ಷ್ಮಿ ಪೂಜೆ ಸಂಭ್ರಮ ಎಲ್ಲೆಡೆ ಕಂಡುಬಂದಿದೆ. ಅಂಗಡಿ ಮಳಿಗೆಗಳಲ್ಲಿ, ಕಾರ್ಖಾನೆಗಳಲ್ಲಿ ಲಕ್ಷ್ಮಿ ಪೂಜೆಗೆ ಸಿದ್ಧತೆ ಭರದಿಂದ ನಡೆದಿದೆ. ಗ್ರಾಮೀಣ ಭಾಗದಲ್ಲಿ ದೀಪಾವಳಿಯ ಸಂಭ್ರಮದ ವಾತಾವರಣ ಕಂಡು ಬಂದಿದೆ. ಉದ್ಯೋಗದ ಸಲುವಾಗಿ ಪರ ಊರುಗಳಲ್ಲಿ ನೆಲೆಸಿರುವವರು ತಮ್ಮ ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗುತ್ತಿರುವುದರಿಂದ ರೈಲು ಹಾಗೂ ಬಸ್ಸುಗಳಲ್ಲಿ ಪ್ರಯಾಣಿಕರ ದಟ್ಟಣೆ ಕಂಡು ಬಂದಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ಕೆಎಸ್ಆರ್ಟಿಸಿ ವಿವಿಧ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೌಲಭ್ಯವನ್ನು ಕಲ್ಪಿಸಿದೆ. ಗಮನ ಸೆಳೆದ ಆಕಾಶಬುಟ್ಟಿನಗರದ ಹಲವು ಅಂಗಡಿಗಳ ಎದುರು ನೇತುಹಾಕಿದ್ದ ಆಕಾಶಬುಟ್ಟಿಗಳು ಗಮನ ಸೆಳೆಯುತ್ತಿವೆ. ನಕ್ಷತ್ರ ಮಾದರಿ ಆಕಾಶ ಬುಟ್ಟಿ, ಚಂದ್ರನ ಆಕಾರದ ಆಕಾಶಬುಟ್ಟಿ ಜನರನ್ನು ಆಕರ್ಷಿಸುತ್ತಿವೆ. ಮಹಾರಾಷ್ಟ್ರ, ದೆಹಲಿ, ರಾಜಸ್ತಾನ ಮೊದಲಾದ ಕಡೆಗಳಿಂದ ವಿವಿಧ ವಿನ್ಯಾಸದ ಆಕಾಶ ಬುಟ್ಟಿಗಳು ಬಂದಿದ್ದು, ಮಾರುಕಟ್ಟೆಯುದ್ದಕ್ಕೂ ಕಂಗೊಳಿಸುತ್ತಿವೆ. ವರ್ಣ ವೈವಿಧ್ಯ ಹಾಗೂ ಗಾತ್ರವನ್ನುಆಧರಿಸಿ ಆಕಾಶಬುಟ್ಟಿಯ ದರವು ಕನಿಷ್ಠ 150 ರಿಂದ ಗರಿಷ್ಠ 800 ರು.ವರೆಗೂ ದರವಿದೆ.
ಪಟಾಕಿ ಖರೀದಿಗೆ ಮುಗಿಬಿದ್ದಿ ಜನ
ದೀಪಾವಳಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ವಿವಿಧ ಮಳಿಗೆಗಳಲ್ಲಿ ಖರೀದಿ ಬಿರುಸುಗೊಂಡಿದೆ. ನಗರದ ಅಲ್ಲಮಪ್ರಭು ಮೈದಾನದಲ್ಲಿ ವಿವಿಧ ಮಳಿಗೆಗಳಲ್ಲಿ ಜನರು ಪಟಾಕಿ ಖರೀದಿಗೆ ಮುಗಿಬಿದ್ದಿದ್ದರು.
ಅಲ್ಲಮಪ್ರಭು ಮೈದಾನದಲ್ಲಿ ಸುಮಾರು 30ಕ್ಕೂ ಹೆಚ್ಚು ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದ್ದು, ನೂರಾರು ರುಪಾಯಿಯಿಂದ ಸಾವಿರಾರು ರುಪಾಯಿವರೆಗೆ ವಿವಿಧ ಬಗೆಯ ಪಟಾಕಿಗಳು ಖರೀದಿಸಲಾಗುತ್ತಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.