ಬಿಜಿಕೆರೆ ಬಸವರಾಜ
ರಾಜ್ಯದಲ್ಲಿ ಅತ್ಯಂತ ಹಿಂದುಳಿದಿರುವ ಬಯಲು ಸೀಮೆಯ ಗಡಿ ನಾಡಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಖಾಯಂ ಉಪನ್ಯಾಸಕರಿಲ್ಲದೆ ಸೊರಗುತ್ತಿದೆ.
ಉನ್ನತ ಶಿಕ್ಷಣದ ಕನಸು ಹೊತ್ತ ಸಾವಿರಾರು ಬಡ ವಿದ್ಯಾರ್ಥಿಗಳು ಶಿಕ್ಷಣಿಕ ಭವಿಷ್ಯ ಭದ್ರ ಪಡಿಸಿಕೊಳ್ಳಲು ಹೆಣಗಾಡುವ ಸ್ಥಿತಿ ಎದುರಾಗಿದ್ದು ಸ್ಥಳೀಯ ಆಡಳಿತಕ್ಕೆ ಹಿಡಿದ ಕೈಗನ್ನಡಿಯಂತಿದೆ ಹೇಳಿ ಕೇಳಿ ಮೊಳಕಾಲ್ಮೂರು ಬಡ ತಾಲೂಕು ಸಾಮಾಜಿಕವಾಗಿ, ಶೈಕ್ಷಣವಾಗಿ, ಆರ್ಥಿಕವಾಗಿ ಅತ್ಯಂತ ಹಿಂದುಳಿದ ನತದೃಷ್ಟ ಬರದ ನಾಡು ಇಂತಹ ತಾಲೂಕು ಕೇಂದ್ರ ಸ್ಥಾನದ ಸರ್ಕಾರಿ ಪದವಿಪೂರ್ವ ಕಾಲೇಜು ಶೇ.75ರಷ್ಟು ಖಾಯಂ ಉಪನ್ಯಾಸಕರ ಕೊರತೆ ಎದುರಿಸುತ್ತಿದೆ.ದಶಕದ ಸಮಸ್ಯೆಗೆ ಪೂರ್ಣ ವಿರಾಮವಿಲ್ಲದಾಗಿದ್ದು ಬಡ ವಿದ್ಯಾರ್ಥಿಗಳು ಇಲ್ಲಿನ ಕಾಲೇಜಿಗೆ ದಾಖಲಾಗಲು ಹಿಂದೇಟು ಹಾಕುವಂತಾಗಿದೆ. ಕಾಲೇಜಿನಲ್ಲಿ ವಿಜ್ಞಾನ, ಕಲಾ, ವಾಣಿಜ್ಯ, ಎಬಿಎಇಎಸ್ಎಂಬ ನಾಲ್ಕು ವಿಭಾಗಗಳಿವೆ. ಈ ನಾಲ್ಕು ವಿಭಾಗಕ್ಕೂ ಕೇವಲ ನಾಲ್ಕು ಜನ ಖಾಯಂ ಉಪನ್ಯಾಸಕರು ಮಾತ್ರ ಇಲ್ಲಿದ್ದಾರೆ. ಉಳಿದಂತೆ ಬಹುತೇಕ ಅಥಿತಿ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದಾರೆ.
ವಿಭಾಗವಾರು ತರಗತಿಗಳಲ್ಲಿ ವಿಷಯಗಳನ್ನು ಸರಿದೂಗಿಸಿ ತೇಪೆ ಹಚ್ಚುವ ಕೆಲಸ ಮಾಡಲಾಗುತ್ತಿದೆ.
ಬಹುತೇಕ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ಬಡ ಸಮುದಾಯಗಳೇ ಹೆಚ್ಚಾಗಿ ವಾಸಿಸುವ ಇಲ್ಲಿನ ಪೋಷಕರಿಗೆ ಖಾಸಗಿ ಕಾಲೇಜುಗಳ ದುಬಾರಿ ಡೊನೇಷನ್ ಮತ್ತು ಶುಲ್ಕ ಕಟ್ಟಿ ಮಕ್ಕಳನ್ನು ಓದಿಸುವ ಶಕ್ತಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಬಡವರ ಮಕ್ಕಳಿಗೆ ಆಸರೆಯಾಗಬೇಕಿದ್ದ ಸರ್ಕಾರಿ ಕಾಲೇಜೇ ಈಗ ಉಪನ್ಯಾಸಕರಿಲ್ಲದೆ ಕತ್ತಲಲ್ಲಿ ತಡಕಾಡುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಣ್ಮುಚ್ಚಿ ಕುಳಿತಿದೆ.
ದಶಕದಿಂದ ನೇಮಕಾತಿ ಪ್ರಕ್ರಿಯೆ ನಡೆಯದೆ ಇಡೀ ತಾಲೂಕಿನ ಶೈಕ್ಷಣಿಕ ಗ್ರಾಫ್ ಕುಸಿಯುತ್ತಿದೆ. ಸರ್ಕಾರಿ ಕಾಲೇಜುಗಳನ್ನು ನಂಬಿದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕಡಿಮೆ ಗೌರವಧನದ ನಡುವೆಯೂ ಪ್ರಾಮಾಣಿಕವಾಗಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರನ್ನು ಸರ್ಕಾರ ಪ್ರತಿ ವರ್ಷ ನೇಮಕಾತಿಯನ್ನು ತಡವಾಗಿ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದ ದಿನಗಳು ವ್ಯರ್ಥವಾಗುತ್ತಿವೆ.
ಇನ್ನು ಹೆಣ್ಣುಮಕ್ಕಳ ಸ್ಥಿತಿಯಂತೂ ಹೇಳತೀರದಾಗಿದೆ. ಉಪನ್ಯಾಸಕರ ಕೊರತೆಯಿಂದ ಕಾಲೇಜಿಗೆ ದಾಖಲು ಮಾಡಲಾಗದೆ. ದೂರದ ಊರುಗಳಿಗೆ ಕಳುಹಿಸಲು ಆಗದೆ ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ವೆಚ್ಚ ಭರಿಸಲಾಗದ ಬಡ ಪೋಷಕರು, ಹೆಣ್ಣುಮಕ್ಕಳ ವಿದ್ಯಾಭ್ಯಾಸವನ್ನು ಅರ್ಧಕ್ಕೇ ಮೊಟಕುಗೊಳಿಸುತ್ತಿದ್ದಾರೆ ಇದು ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗುಗಳು ಮರುಕಳಿಸಲು ಕಾರಣವಾಗುತ್ತಿದೆ.