ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ

KannadaprabhaNewsNetwork |  
Published : Mar 13, 2026, 01:15 AM IST
2.ಕಟ್ಟಡ ಕಾರ್ಮಿಕರು (ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ರಾಮನಗರ: ಕಾರ್ಮಿಕರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಬೆಂಗಳೂರು ದಕ್ಷಿಣ ಜಿಲ್ಲೆಗೆ 4 ಶ್ರಮಿಕ ವಸತಿ ಶಾಲೆಗಳನ್ನು ಮಂಜೂರು ಮಾಡಿದೆ

ರಾಮನಗರ: ಕಾರ್ಮಿಕರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಬೆಂಗಳೂರು ದಕ್ಷಿಣ ಜಿಲ್ಲೆಗೆ 4 ಶ್ರಮಿಕ ವಸತಿ ಶಾಲೆಗಳನ್ನು ಮಂಜೂರು ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ನಲ್ಲಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿಗೆ ಶ್ರಮಿಕ ವಸತಿ ಶಾಲೆಗಳನ್ನು ಘೋಷಿಸಿದ್ದು, ಈ ಶಾಲೆಗಳಲ್ಲಿ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ 6ರಿಂದ 12ನೇ ತರಗತಿವರೆಗಿನ ಶಿಕ್ಷಣ ದೊರೆಯಲಿದೆ.

ಈಗಾಗಲೇ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಜೊತೆಗೆ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ, ಕಸ್ತೂರ ಬಾ ಶಾಲೆ, ಆದರ್ಶ ಶಾಲೆ, ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಕೇಂದ್ರೀಯ ವಿದ್ಯಾಲಯ. ನವೋದಯ ವಿದ್ಯಾಲಯ ಶಾಲೆಗಳಿವೆ. ಇವುಗಳ ಜೊತೆಗೆ ಕಾರ್ಮಿಕರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸುಸಜ್ಜಿತ ಶ್ರಮಿಕ ವಸತಿ ಶಾಲೆಗಳು ಸೇರ್ಪಡೆಗೊಳ್ಳುತ್ತಿವೆ.

ಈ ಮೊದಲು ಜಿಲ್ಲೆಗೆ ಒಂದರಂತೆ ಶ್ರಮಿಕ ವಸತಿ ಶಾಲೆಗಳು ಮಂಜೂರಾಗಿತ್ತು. ಆ ಶಾಲೆಯನ್ನು ಕನಕಪುರ ಕ್ಷೇತ್ರದ ರಾಯಸಂದ್ರದಲ್ಲಿ ನಿರ್ಮಿಸಲು ಜಾಗ ಗುರುತಿಸಲಾಗಿದೆ. ಇಲ್ಲಿವರೆಗೂ ಕಾರ್ಮಿಕ ಇಲಾಖೆಗೆ ಹಸ್ತಾಂತರಗೊಂಡಿಲ್ಲ. ಉಳಿದಂತೆ ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ಕ್ಷೇತ್ರಗಳಲ್ಲಿ ಜಾಗ ಗುರುತಿಸಿಕೊಡುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ತಹಸೀಲ್ದಾರ್ ಅವರಿಗೆ ಪತ್ರ ಬರೆದಿದ್ದಾರೆ.

6 -10 ಎಕರೆ ಜಾಗದಲ್ಲಿ ಶಾಲೆ ನಿರ್ಮಾಣ:

ಒಂದು ಶ್ರಮಿಕ ವಸತಿ ಶಾಲೆ ನಿರ್ಮಾಣಕ್ಕೆ 6-10 ಎಕರೆ ಜಾಗ ಬೇಕಾಗಿದ್ದು, ಅದು ಕಾರ್ಮಿಕ ಇಲಾಖೆಗೆ ಮಂಜೂರಾತಿ ಆಗಬೇಕಿದೆ. ಕಾನೂನುಬದ್ದವಾಗಿ ಕಾರ್ಮಿಕ ಇಲಾಖೆ ಹೆಸರಿಗೆ ಖಾತೆಯಾಗಬೇಕಿದೆ. ಆ ಬಳಿಕ ವಸತಿ ಶಾಲೆಗಾಗಿ ಕಟ್ಟಡ ನಿರ್ಮಿಸಿ, ಮೂಲಸೌಕರ್ಯ ಕಲ್ಪಿಸಬೇಕು. ಜತೆಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಿಸಬೇಕಿದೆ. ಇಷ್ಟೆಲ್ಲ ಪ್ರಕ್ರಿಯೆ ನಡೆಯಲು ಕನಿಷ್ಠ 2 ವರ್ಷವಾದರೂ ಬೇಕಿದೆ. ಎಲ್ಲವೂ ಕ್ರಮಬದ್ದ ಮತ್ತು ತ್ವರಿತವಾಗಿ ಆದರೆ 2028-29 ಶೈಕ್ಷಣಿಕ ಸಾಲಿನಿಂದ ಶ್ರಮಿಕ ವಸತಿ ಶಾಲೆ ಪ್ರಾರಂಭವಾಗಬಹುದು.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮೂಲಕ ಶ್ರಮಿಕ ವಸತಿ ಶಾಲೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. 6ರಿಂದ 12ನೇ ತರಗತಿವರೆಗಿನ ಶಿಕ್ಷಣವು ಇಲ್ಲಿ ಸಿಗಲಿದೆ. ಸದ್ಯಕ್ಕೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಶ್ರಮಿಕ ವಸತಿ ಶಾಲೆಗಳಿಗೆ ಪ್ರವೇಶಾವಕಾಶ ನೀಡಲಾಗುತ್ತದೆ ಎನ್ನುವ ಮಾಹಿತಿಯಿದೆ.

ಬಾಕ್ಸ್ ..............

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಾನಾ ವಲಯಗಳ ಲಕ್ಷಾಂತರ ಮಂದಿ ಕಾರ್ಮಿಕರಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯಾಗಿರುವ ಕಾರ್ಮಿಕರನ್ನು ಮಾತ್ರ ಸರ್ಕಾರಿ ಸೌಲಭ್ಯಗಳಿಗೆ ಪರಿಗಣಿಸಲಾಗುತ್ತದೆ. ಪ್ರಸ್ತುತ ಜಿಲ್ಲೆಯಲ್ಲಿ 43,115 ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇದಲ್ಲದೆ, 6700 ಅಸಂಘಟಿತ ಕಾರ್ಮಿಕರು ಇದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಮನಗರ ವೃತ್ತದಲ್ಲಿ 20280, ಚನ್ನಪಟ್ಟಣ ವೃತ್ತದಲ್ಲಿ 4776, ಕನಕಪುರ ವೃತ್ತದಲ್ಲಿ 12240 ಹಾಗೂ ಮಾಗಡಿ ವೃತ್ತದಲ್ಲಿ 5819 ಕಾರ್ಮಿಕರು ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಕೋಟ್ ................

ಮೊದಲ ಹಂತದಲ್ಲಿ ಕನಕಪುರ ಕ್ಷೇತ್ರದಲ್ಲಿ ಶ್ರಮಿಕ ವಸತಿ ಶಾಲೆಗಾಗಿ ಜಾಗ ಗುರುತಿಸಲಾಗಿದೆ. ಅದು ಕಾರ್ಮಿಕರ ಇಲಾಖೆಗೆ ನೋಂದಣಿಯಾಗಬೇಕಿದೆ. ಇದರೊಂದಿಗೆ ಈಗ ಬಜೆಟ್‌ನಲ್ಲಿ ಇನ್ನೂ ಮೂರು ಕ್ಷೇತ್ರಗಳಿಗೂ ಶ್ರಮಿಕ ವಸತಿ ಶಾಲೆ ಘೋಷಣೆಯಾಗಿದ್ದು, ಅದರ ಪ್ರಕ್ರಿಯೆಗಳು ಇನ್ನುಂದೆ ನಡೆಯಲಿವೆ. ಶ್ರಮಿಕ ವಸತಿ ಶಾಲೆಗಳಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಪ್ರವೇಶಾವಕಾಶ ಎನ್ನಲಾಗಿದೆ. ಸರ್ಕಾರದ ಆದೇಶದಂತೆ ಕ್ರಮ ವಹಿಸಲಾಗುವುದು.

-ನಾಗೇಂದ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ, ಕಾರ್ಮಿಕ ಇಲಾಖೆ, ಬೆಂ.ದಕ್ಷಿಣ ಜಿಲ್ಲೆ

12ಕೆಆರ್ ಎಂಎನ್ 2,3.ಜೆಪಿಜಿ

2.ಕಟ್ಟಡ ಕಾರ್ಮಿಕರು (ಸಾಂದರ್ಭಿಕ ಚಿತ್ರ)

3.ನಾಗೇಂದ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ, ಕಾರ್ಮಿಕ ಇಲಾಖೆ, ಬೆಂ.ದಕ್ಷಿಣ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು ಸಮಾಜದ ಅಭಿವೃದ್ಧಿಗೆ ಅಡಿಗಲ್ಲುಗಳು: ಜಿ.ಮುನಿರೆಡ್ಡಿ
ಕರ್ನಾಟಕದ ರಫ್ತುಗಳ ಭವಿಷ್ಯ ಅತ್ಯಂತ ಪ್ರಕಾಶಮಾನ