ಕನ್ನಡಪ್ರಭ ವಾರ್ತೆ ಭದ್ರಾವತಿ
ಮಧ್ಯಾಹ್ನ ಸುಮಾರು ೧೨:೩೦ರ ಸಮಯದಲ್ಲಿ ಭಕ್ತರ ಸಮ್ಮುಖದಲ್ಲಿ ಅಲಂಕೃತಗೊಂಡ ಭವ್ಯ ರಥದಲ್ಲಿ ಶ್ರೀ ಸ್ವಾಮಿ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮರಥೋತ್ಸವ ಆರಂಭಗೊಂಡಿತು. ಭಕ್ತರು ಜಯಘೋಷ ಹಾಕಿದರು. ಜಾಗಟೆ, ನಾದಸ್ವರ ವಾದ್ಯಗಳೊಂದಿಗೆ ವಿವಿಧ ಮಹಿಳಾ ಭಜನೆ ತಂಡಗಳಿಂದ ಭಜನೆ ನಡೆಯಿತು. ಇದಕ್ಕೂ ಮೊದಲು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ರಂಗನಾಥ ಶರ್ಮಾ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು.
ದೇವಸ್ಥಾನದ ಆವರಣದಲ್ಲಿ ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಅನ್ನ ಸಂತರ್ಪಣೆ ನೆರವೇರಿತು. ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ನಗರದ ವಿವಿಧ ದೇವಸ್ಥಾನಗಳ ಅರ್ಚಕರು, ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡಿದ್ದರು.