ಹೊಸಪೇಟೆ: ಧೀರನಾಗಿ, ಶೂರನಾಗಿದ್ದರೆ ಸ್ವಂತ ಬಲದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯಬೇಕು. ಆದರೆ, ಹೈಕಮಾಂಡ್ ಹೇಳಿದರೆ ಕುರ್ಚಿ ಬಿಟ್ಟು ಬಿಡುತ್ತೇನೆ ಎಂದು ಹೇಡಿತನದ ಮಾತನಾಡುತ್ತಾ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಲೇವಡಿ ಮಾಡಿದರು.
ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರೇ ಮಾತನಾಡಿದರೆ ಸಿದ್ದರಾಮಯ್ಯನವರು ಮಾತೆತ್ತಿದರೆ ಹೈಕಮಾಂಡ್ ಕುರಿತು ಹೇಳುತ್ತಾ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡಿದ್ದಾರೆ. ಸಿದ್ದರಾಮಯ್ಯನವರು ಇನ್ನು ಮುಂದೆಯೂ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಕೆಲ ತಿಂಗಳಿಂದ ನಡೆಯುತ್ತಿರುವ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಶಾಸಕರು ಹಾಗೂ ಅಧಿಕಾರಿಗಳು ಗೊಂದಲದಲ್ಲಿ ಸಿಲುಕಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಎಲ್ಲ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದು ಅವರು ಹೇಳಿದರು.ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವ ಅನುಮಾನಗಳು ಜನರಲ್ಲಿ ಇವೆ. ಈ ಸರ್ಕಾರದ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಮತ್ತೆ ಬಿಜೆಪಿಯನ್ನೇ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂದು ರಾಜ್ಯದ ಜನರು ಕಾಯುತ್ತಿದ್ದಾರೆ. 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯವಾಗಿದೆ ಎಂದರು.
ನಾನು ಸಚಿವನಾಗಿದ್ದಾಗ ಹಂಪಿಯಲ್ಲಿ ಥೀಮ್ ಪಾರ್ಕ್ ನಿರ್ಮಿಸುವ ಕನಸು ಆಗಿತ್ತು. ಹೊಸಪೇಟೆ ಮತ್ತು ಬಳ್ಳಾರಿ ಮಧ್ಯೆ ವಿಮಾನ ನಿಲ್ದಾಣ ನಿರ್ಮಿಸಿ, ವಿಮಾನ ನಿಲ್ದಾಣದಿಂದಲೇ ನೇರವಾಗಿ ಹಂಪಿಗೆ ಉತ್ತಮ ರಸ್ತೆಯನ್ನು ಅಭಿವೃದ್ಧಿ ಪಡಿಸಿ, ಹಂಪಿಗೆ ದೇಶ, ವಿದೇಶ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ನಿತ್ಯ ಬರುವಂತಹ ವ್ಯವಸ್ಥೆ ರೂಪಿಸಲಾಗಿತ್ತು. ಹಂಪಿಯಲ್ಲಿ ಹಂಪಿ ಬೈ ಸ್ಕೈ ಯೋಜನೆ ಸಿದ್ಧಪಡಿಸಲಾಗಿತ್ತು. ಅದನ್ನು ಈಗ ಮುಂದುವರೆಸಿಕೊಂಡು ಹೋಗುತ್ತಿಲ್ಲ ಎಂದು ಅವರು ಹೇಳಿದರು.