-ವಿಪ ಸದಸ್ಯ ಕೆ.ಎಸ್.ನವೀನ್ ಆರೋಪ । ಚಿತ್ರದುರ್ಗ ಜಿಲ್ಲೆ ಬಿಜೆಪಿ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ
-----ಕನ್ನಡಪ್ರಭವಾರ್ತೆ ಚಿತ್ರದುರ್ಗ
ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಕೋಟ್ಯಂತರ ರುಪಾಯಿ ದೋಚಿಸುವ ಸಿಎಂ ಸಿದ್ದರಾಮಯ್ಯಗೆ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಇಲ್ಲವೆಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದರು.ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಹಗರಣಗಳ ಡಾನ್ ಎಂದು ವಾಗ್ದಾಳಿ ನಡೆಸಿದರು. ವಾಲ್ಮೀಕಿ ರಚಿಸಿರುವ ರಾಮಾಯಣವು ನಮ್ಮ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದೆ. ಈ ಹಿಂದೆ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವ ಬಿಜೆಪಿ ಸರ್ಕಾರ ಶ್ರೀವಾಲ್ಮೀಕಿ ಜಯಂತಿ ಆಚರಣೆಯನ್ನು ಜಾರಿಗೆ ತಂದಿತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಟಿ ವರ್ಗದ ಜನರಿಗೆ ತಮ್ಮದೇ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಏಳು ತಿಂಗಳಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರು. ಹಗರಣ ಮಾಡಿದೆ ಎಂದು ಆರೋಪಿಸಿದರು.
ವಾಲ್ಮೀಕಿ ಸಮುದಾಯದ ಜನರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸ್ವಂತ ಬಳಕೆ ಮಾಡುವುದರ ಜೊತೆಗೆ ಲೋಕಸಭಾ ಚುನಾವಣೆ ಹಾಗೂ ತೆಲಂಗಾಣ ಚುನಾವಣೆಗೆ ಬಳಕೆಯಾಗಿರೋದು ಸ್ಪಷ್ಟವಾಗಿ ಗೋಚರವಾಗುತ್ತದೆ. ಸರ್ಕಾರದ ಅನುದಾನ ಯಾರ ಬದುಕಿಗೆ ಬೆಳಕಾಗಬೇಕಾಗಿತ್ತೋ, ಯಾರ ಬದುಕಿಗೆ ಭದ್ರಬುನಾದಿಯಾಗ ಬೇಕಾಗಿತ್ತೋ ಆ ಹಣವನ್ನು ಅವರು ತಮ್ಮ ಐಷಾರಾಮಿ ಜೀವನ ನಡೆಸುವುದಕ್ಕೆ ಬಳಸಿಕೊಂಡಿದ್ದಾರೆ ಎಂದು ದೂರಿದರು.ಸಿದ್ದರಾಮಯ್ಯ ಸರ್ಕಾರ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಕಳೆದುಕೊಂಡಿದ್ದಾರೆ. ಎಸ್ಟಿ ಸಮುದಾಯದ ವಿದ್ಯಾರ್ಥಿಗಳ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಸಿದ್ದರಾಮಯ್ಯ ಆ ಸಮುದಾಯದ ಯುವಕರು, ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಬೇಕಿತ್ತು. ಸರ್ಕಾರದ ಹಣ ಬಳಸಿಕೊಂಡು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ನವೀನ್ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಎಸ್ಟಿ ಹಣವನ್ನು ದುರ್ಬಳಕೆ ಮಾಡಿಕೊಂಡು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಚುನಾವಣೆಗೆ ಖರ್ಚು ಮಾಡಿದೆ ಎಂಬುವುದು ಇಡಿ ತನಿಖೆ ಮೂಲಕ ಗೊತ್ತಾಗಿದೆ. ನಾಯಕ ಜನಾಂಗದ ಬಳಿ ಕ್ಷಮೆ ಕೇಳಿ ವಾಲ್ಮೀಕಿ ಜಯಂತಿ ಆಚರಿಸಬೇಕಿತ್ತು. ಕಾಂಗ್ರೆಸ್ ಸರ್ಕಾರ ಜಾಹಿರಾತು ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದೆ. ವಾಲ್ಮೀಕಿ ಜಯಂತಿಯಂದೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಕಂಡವರ ಮಕ್ಕಳನ್ನ ಬಲಿ ಕೊಡುವುದರಲ್ಲಿ ಸಿದ್ದರಾಮಯ್ಯ ಎತ್ತಿದ ಕೈ ಎಂದು ತೋರಿಸಿದ್ದಾರೆ. ಸಿನಿಮಾಗಳಲ್ಲಿ ಗುಂಪಿನ ಹಿಂದೆ ಒಬ್ಬ ಸೂತ್ರದಾರ ಇರುವ ಹಾಗೆ ಸಿದ್ದರಾಮಯ್ಯ ಇದ್ದಾರೆ. ಹಗರಣಗಳಿಗೆ ನಾನೇ ಡಾನ್ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ ಎಂದರು.ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಲಾಯಿತು. ಮೂಡಾ ಹಗರಣದಲ್ಲಿ ಸಿದ್ದರಾಮಯ್ಯನವರು ನೇರವಾಗಿ ಕಾರಣರಿದ್ದರೂ ಕೇವಲ ಅಧಿಕಾರಿಗಳನ್ನು ಮಾತ್ರ ಅಮಾನತ್ತು ಗೊಳಿಸಲಾಗಿದೆ. ಸಿದ್ದರಾಮಯ್ಯರವರೇ ಸದನದಲ್ಲಿ 187 ಕೋಟಿ ಅಲ್ಲ 89 ಕೋಟಿ ರು. ಎಂದು ಒಪ್ಪಿಕೊಂಡಿದ್ದಾರೆ. ಇಷ್ಟೆಲ್ಲಾ ಹಗರಣ ಮಾಡಿರೋ ಸಿದ್ದರಾಮಯ್ಯನವರೇ ಈ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಹೇಗೆ ಭಾಗವಹಿಸುತ್ತೀರಿ? ಎಂದು ಪ್ರಶ್ನಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮಾಧುರಿ ಎಸ್.ಆರ್ರ್ ಗಿರೀಶ್,ವಕ್ತಾರ ನಾಗರಾಜ್ ಬೇದ್ರೇ ಇದ್ದರು.----------------
ಪೋಟೋ: ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ವಿಪ ಸದಸ್ಯ ಕೆ.ಎಸ್.ನವೀನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.--------
17 ಸಿಟಿಡಿ7