ನಾಡಿದ್ದಿನ ಕಾಂಗ್ರೆಸ್
ಭರಪೂರ ಸಿದ್ಧತೆ
- ಹೊಸಪೇಟೆಯಲ್ಲಿ ‘ಸಮರ್ಪಣೆ ಸಂಕಲ್ಪ ರ್ಯಾಲಿ’- ಸಮಾವೇಶಕ್ಕೆ 4 ಲಕ್ಷ ಜನರ ಆಗಮನ ನಿರೀಕ್ಷೆ
--
- 200 ಅಡಿ ಅಗಲ, 70 ಅಡಿ ಉದ್ದದ ಪ್ರಧಾನ ವೇದಿಕೆ, 1.5 ಲಕ್ಷ ಕುರ್ಚಿ ವ್ಯವಸ್ಥೆ
- ಸಮಾರಂಭದಲ್ಲಿ 1 ಲಕ್ಷ ಫಲಾನುಭವಿಗಳಿಗೆ ಕಂದಾಯ ಹಕ್ಕುಪತ್ರ ವಿತರಣೆಇದು 2ನೇ ಸಿದ್ದರಾಮೋತ್ಸವ
ಕನ್ನಡಪ್ರಭ ವಾರ್ತೆ ಹೊಸಪೇಟೆ
‘ಎಲ್ಲರೂ ಒಟ್ಟಾಗಿ ಸೇರಿ ಸಮಾವೇಶವನ್ನು ಯಶಸ್ವಿಗೊಳಿಸುತ್ತೇವೆ. ಇದು ಎರಡನೇ ‘ಸಿದ್ದರಾಮೋತ್ಸವ’ ಆಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
4 ಲಕ್ಷ ಜನರ ಆಗಮನ:
ಸಮಾವೇಶದಲ್ಲಿ ಕನಿಷ್ಠ 4 ಲಕ್ಷ ಜನರು ಬರುವ ನಿರೀಕ್ಷೆ ಇದೆ. 1 ಲಕ್ಷ ಫಲಾನುಭವಿಗಳು ಭಾಗವಹಿಸುತ್ತಾರೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 3,700 ಬಸ್ ಸೇರಿದಂತೆ 10 ಸಾವಿರಕ್ಕೂ ಅಧಿಕ ವಾಹನಗಳಲ್ಲಿ ಜನ ಆಗಮಿಸುವ ನಿರೀಕ್ಷೆಯಿದೆ. ವೇದಿಕೆ ಬಳಿ 1.50 ಲಕ್ಷ ಕುರ್ಚಿಗಳ ವ್ಯವಸ್ಥೆ ಮಾಡಿದ್ದೇವೆ. 50 ಸಾವಿರ ಕುರ್ಚಿಗಳನ್ನು ಹೆಚ್ಚುವರಿಯಾಗಿ ತರಿಸಲಾಗುತ್ತಿದೆ. ಕ್ರೀಡಾಂಗಣದ ಅಕ್ಕಪಕ್ಕದ ರಸ್ತೆಯಲ್ಲೂ ಎಲ್ಇಡಿ ಪರದೆ ವ್ಯವಸ್ಥೆ ಮಾಡಲಾಗುತ್ತಿದೆ. ಭೋಜನದ ವ್ಯವಸ್ಥೆಗಾಗಿ ಟೆಂಟ್ ನಿರ್ಮಿಸಿ ಕೌಂಟರ್ ತೆರೆಯಲಾಗುತ್ತಿದೆ ಎಂದು ತಿಳಿಸಿದರು.ಸಮಾವೇಶಕ್ಕೆ ವಿಜಯನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ರಾಯಚೂರು ಭಾಗಗಳಿಂದ ಹೆಚ್ಚಿನ ಜನರು ಆಗಮಿಸಲಿದ್ದಾರೆ. ಜನರಿಗೆ ಐದು ಲಕ್ಷ ಪ್ಯಾಕೆಟ್ ನೀರು, ಮೂರು ಲಕ್ಷ ಪ್ಯಾಕೆಟ್ ಮಜ್ಜಿಗೆ, 2.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.ಜರ್ಮನ್ ಟೆಂಟ್:ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಭವ್ಯ ವೇದಿಕೆ ನಿರ್ಮಾಣ ಮಾಡಲಾಗುತ್ತಿದ್ದು, ವೇದಿಕೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಭಾರೀ ಬಿಸಿಲು ಇರುವುದರಿಂದ ನೆರಳಿನ ವ್ಯವಸ್ಥೆಯೊಂದಿಗೆ ಸುಸಜ್ಜಿತ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನ ಉಡುಪಾಸ್ ಸಂಸ್ಥೆಯವರು ವೇದಿಕೆ ನಿರ್ಮಾಣ ಮಾಡುತ್ತಿದ್ದಾರೆ. ಈ ಭವ್ಯ ವೇದಿಕೆಯ ಅಕ್ಕಪಕ್ಕ ಹಾಗೂ ಹೊರಗಡೆ ಹಂಪಿ ಸ್ಮಾರಕಗಳ ಕಂಬ ಬಳಕೆ ಮಾಡಲಾಗುತ್ತಿದೆ.
200 ಅಡಿ ಅಗಲ, 70 ಅಡಿ ಉದ್ದದ ಪ್ರಧಾನ ವೇದಿಕೆ ನಿರ್ಮಿಸಲಾಗುತ್ತಿದೆ. ಪ್ರಧಾನ ವೇದಿಕೆಯಲ್ಲಿ 300 ಜನ ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಉಳಿದಂತೆ ಎರಡು ಕಿರು ವೇದಿಕೆಗಳಿದ್ದು, ಒಂದರಲ್ಲಿ 50 ಜನ ಮಾಜಿ ಸಚಿವರಿಗೆ ವೇದಿಕೆ ಕಲ್ಪಿಸಲಾಗುತ್ತಿದೆ. ಇನ್ನೊಂದು ಕಿರು ವೇದಿಕೆಯಲ್ಲಿ ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖ 50 ಜನ ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.----