ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯಿಂದ ಹಿಂಪಡೆಯದಂತೆ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಮುಂದಾದರೆ ಸ್ವೀಕರಿಸದೆ ದುರಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ಮುಖ್ಯಮಂತ್ರಿಗೆ ಬಿಜೆಪಿ ಮನವಿ ಸಲ್ಲಿಸುವುದು ತಪ್ಪೇ? ಸಿದ್ದರಾಮಯ್ಯ ಅವರು ಮನವಿ ಸ್ವೀಕರಿಸಲೇಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳ್ಳುತ್ತದೆ. ಅವರು ನಮ್ಮ ಶಾಸಕರ, ಕಾರ್ಯಕರ್ತರ ಮನವಿ ಸ್ವೀಕರಿಸದಿದ್ದರೆ ಮತಾಂಧ ಇಸ್ಲಾಮಿಕ್ ಭಯೋತ್ಪಾದಕರಿಗೆ ಬೆಂಬಲವಾಗಿ ನಿಂತಿರುವುದು ಸಾಬೀತಾದಂತೆ ಎಂದು ಎಚ್ಚರಿಕೆ ನೀಡಿದರು.
ಹಿಂದೆ ಜೆ.ಎಚ್. ಪಟೇಲ್, ಎಸ್.ಎಂ. ಕೃಷ್ಣ, ಧರ್ಮಸಿಂಗ್ ಅವರಿದ್ದಾಗ ನಾವು ಮನವಿ ಸಲ್ಲಿಸಲಿಲ್ಲವೇ? ಅಷ್ಟೇ ಏಕೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಕಾಂಗ್ರೆಸ್ನವರು ಮನವಿ ಸ್ವೀಕರಿಸಲಿಲ್ಲವೇ ಎಂದು ಪ್ರಶ್ನಿಸಿದ ಜೋಶಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ದುರಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ವೋಟ್ ಬ್ಯಾಂಕ್ ರಾಜಕಾರಣ?: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವುದು ಖಚಿತವಾಗುತ್ತಲೇ ಸಿದ್ದರಾಮಯ್ಯ ಅವರು ಗಾಂಧಿದ್ವಯರನ್ನು ಮೆಚ್ಚಿಸಿಕೊಳ್ಳಲು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಈ ಮೂಲಕ ಮುಡಾ ಹಗರಣ, ಹೋರಾಟದ ವಿಷಯಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಜೋಶಿ ಆರೋಪಿಸಿದರು.