ಸಿದ್ದು ಬೆಂಬಲಿಸಿ ಅ. 3ರಿಂದ ಅಹಿಂದ ನಾಯಕನ ಉಳಿಸಿ ಬೃಹತ್‌ ಜಾಥಾ

KannadaprabhaNewsNetwork |  
Published : Sep 26, 2024, 09:52 AM IST
44 | Kannada Prabha

ಸಾರಾಂಶ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ ನಡೆಸಲು ನ್ಯಾಯಾಲಯ ನೀಡಿರುವ ತೀರ್ಪಿಗೆ ನಾವು ವಿರೋಧಿಸುತ್ತಿಲ್ಲ. ಬಿಜೆಪಿ, ಜೆಡಿಎಸ್ ಮುಖಂಡರ ಷಡ್ಯಂತ್ರ ವಿರೋಧಿಸುತ್ತಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡರ ಹೇಳಿಕೆ

ಹುಬ್ಬಳ್ಳಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಾರ್ಥವಾಗಿ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಅ.3, 4ರಂದು ಹುಬ್ಬಳ್ಳಿಯಿಂದ ಬೆಂಗಳೂರಿನ ವಿಧಾನಸೌಧ ವರೆಗೆ ಅಹಿಂದ ನಾಯಕನ ಉಳಿಸಿ ಎಂಬ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ರಾಷ್ಟ್ರೀಯ ಅಹಿಂದ ಸಂಘಟನೆ ವತಿಯಿಂದ ಹುಬ್ಬಳ್ಳಿಯಿಂದ ಬೆಂಗಳೂರಿನ ವಿಧಾನಸೌಧದ ವರೆಗೆ ಜಾಥಾ ನಡೆಸಲಾಗುತ್ತಿದೆ ಎಂದರು.

ಅ. 3ರಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಿಂದ ಆರಂಭವಾಗುವ ಜಾಥಾ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಡಾ. ಬಿ.ಆರ್‌. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಹಾವೇರಿ ದಾವಣಗೆರೆ ಮಾರ್ಗವಾಗಿ ತೆರಳಲಾಗುವುದು. ಚಿತ್ರದುರ್ಗದಲ್ಲಿ ವಾಸ್ತವ್ಯ ಮಾಡಿ, ಅ. 4ರಂದು ಬೆಂಗಳೂರಿನ ವಿಧಾನಸೌಧಕ್ಕೆ ತಲುಪಿ ಜಾಥಾ ಕೊನೆಗೊಳಿಸಲಾಗುವುದು ಎಂದು ತಿಳಿಸಿದರು.

ಅಸ್ಥಿರಗೊಳಿಸಲು ಯತ್ನ:

ಹಲವು ದಿನಗಳಿಂದ ಬಿಜೆಪಿ, ಜೆಡಿಎಸ್ ನಾಯಕರು ಅಹಿಂದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಸೊಪ್ಪು ಹಾಕಬಾರದು. ಬಿಜೆಪಿಯೇತರ ಸರ್ಕಾರ ಇರುವ ರಾಜ್ಯಗಳಲ್ಲಿ ಬಿಜೆಪಿಯು ರಾಜ್ಯಪಾಲರ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ ನಡೆಸಲು ನ್ಯಾಯಾಲಯ ನೀಡಿರುವ ತೀರ್ಪಿಗೆ ನಾವು ವಿರೋಧಿಸುತ್ತಿಲ್ಲ. ಬಿಜೆಪಿ, ಜೆಡಿಎಸ್ ಮುಖಂಡರ ಷಡ್ಯಂತ್ರ ವಿರೋಧಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಪಕ್ಷಾತೀತ:

ಈ ಜಾಥಾ ಪಕ್ಷಾತೀತವಾಗಿದ್ದು, ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡುವ ಸಲುವಾಗಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ. ಎಐಸಿಸಿ, ಕೆಪಿಸಿಸಿ ಹಾಗೂ ಕಾಂಗ್ರೆಸ್ ಪಕ್ಷದ 135 ಶಾಸಕರು, ಸಿದ್ದರಾಮಯ್ಯ ಅಭಿಮಾನಿಗಳು, ದಲಿತ ಸಂಘಟನೆಗಳು ಸೇರಿದಂತೆ ಸಾವಿರಾರು ಜನರು ಈ ಜಾಥಾ ಪಾಲ್ಗೊಳ್ಳುವ ಮೂಲಕ ಮುಖ್ಯಮಂತ್ರಿಗೆ ನೈತಿಕ ಬೆಂಬಲ ನೀಡುತ್ತಿದ್ದು, ಈ ಜಾಥಾದಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜಶೇಖರ ಮೆಣಸಿನಕಾಯಿ, ಬಾಬಾಜಾನ ಮುಧೋಳ, ವೀರನಗೌಡ ಪಾಟೀಲ, ವಿಶಾಲ ವಾಘಮೋಡೆ, ಶ್ರೀಧರ ದೊಡ್ಡಮನಿ, ಸಂಗೀತಾ ಚಾವರೆ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!