ಸಿದ್ಧರಾಮೇಶ್ವರರು 12ನೇ ಶತಮಾನದ ಪ್ರಸಿದ್ಧ ಸಮಾಜ ಸೇವಕರು

KannadaprabhaNewsNetwork |  
Published : Feb 01, 2025, 12:00 AM IST
ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ಅಂಗವಾಗಿ ಕೊಪ್ಪಳ ನಗರದಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. | Kannada Prabha

ಸಾರಾಂಶ

12ನೇ ಶತಮಾನದ ಬಸವಾದಿ ಶರಣರ ಹೋರಾಟದಿಂದ ಕಲ್ಯಾಣ ಕ್ರಾಂತಿ ಉಗಮವಾಯಿತು. ಈ ಹೋರಾಟ ಪ್ರಪಂಚದ ಅತಿ ದೊಡ್ಡ ಕಲ್ಯಾಣ ಕ್ರಾಂತಿಯಾಗಿದೆ ಎಂದು ಗಜೇಂದ್ರಗಡ ಎಸ್.ಎಸ್. ಭೂಮರೆಡ್ಡಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಅರವಿಂದ ಎಸ್. ವಡ್ಡರ ಹೇಳಿದರು.

ಕೊಪ್ಪಳ: ಶಿವಯೋಗಿ ಸಿದ್ಧರಾಮೇಶ್ವರರು 12ನೇ ಶತಮಾನದ ಪ್ರಸಿದ್ಧ ಸಮಾಜ ಸೇವಕರಾಗಿದ್ದರು ಎಂದು ಗಜೇಂದ್ರಗಡ ಎಸ್.ಎಸ್. ಭೂಮರೆಡ್ಡಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಅರವಿಂದ ಎಸ್. ವಡ್ಡರ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. 12ನೇ ಶತಮಾನಕ್ಕೂ ಪೂರ್ವದಲ್ಲಿ ಈ ನಾಡಿನಲ್ಲಿ ಮೌಢ್ಯ, ರಾಜ್ಯ ಪ್ರಭುತ್ವದೊಳಗೆ ಗುಲಾಮಗಿರಿಯ ಅಟ್ಟಹಾಸ ನಡೆದಿತ್ತು. ಜಾತಿ ವ್ಯವಸ್ಥೆ ತುಂಬಿ ತುಳುಕಿ ಜನರು ಶೋಷಣೆಗೆ ಒಳಗಾಗಿದ್ದರು. ಇಂತಹ ಸಂದರ್ಭದಲ್ಲಿ 12ನೇ ಶತಮಾನದ ಬಸವಾದಿ ಶರಣರ ಹೋರಾಟದಿಂದ ಕಲ್ಯಾಣ ಕ್ರಾಂತಿ ಉಗಮವಾಯಿತು. ಈ ಹೋರಾಟ ಪ್ರಪಂಚದ ಅತಿ ದೊಡ್ಡ ಕಲ್ಯಾಣ ಕ್ರಾಂತಿಯಾಗಿದೆ. ಸಮಾಜದ ಸುಧಾರಣೆಯ ಪ್ರತಿಫಲವಾಗಿ ವಚನ ಸಾಹಿತ್ಯ ಹುಟ್ಟಿಕೊಂಡಿತು. ಅನೇಕ ಶರಣರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಬೆಳಕನ್ನು ನೀಡಿದ್ದಾರೆ. ಅಂತಹ ಮಹನೀಯರಲ್ಲಿ ಬಸವಣ್ಣನವರ ಅನುಭವ ಮಂಟಪದಲ್ಲಿ ವಿಶಿಷ್ಟ ವಚನಕಾರರಾಗಿ ರೂಪುಗೊಂಡವರು ಮಹಾನ್ ಶರಣ ಶಿವಯೋಗಿ ಸಿದ್ಧರಾಮೇಶ್ವರರು ಎಂದರು.

ಕ್ರಾಂತಿಕಾರಿ ಧೋರಣೆಗಳಿಂದ ಸಮಾಜ ತಿದ್ದುವ ಕಾರ್ಯ ಮಾಡುವ ಜತೆಗೆ ಸಮಾಜಮುಖಿ ಕಾಯಕ ಮಾಡುವ ಮೂಲಕ ಕಾಯಕ ಯೋಗಿ ಎನಿಸಿಕೊಂಡವರು ಶಿವಯೋಗಿ ಸಿದ್ಧರಾಮೇಶ್ವರರು. ಅವರ ಬದುಕಿನ ಚಿಂತನೆಗಳನ್ನು ನಾವು ತಿಳಿದುಕೊಳ್ಳಬೇಕು ಮತ್ತು ಇತರರಿಗೂ ತಿಳಿಸಬೇಕು ಎಂದು ಹೇಳಿದರು.

ಭೋವಿ ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷ ಸುಂಕಪ್ಪ ಮಾಲಗಿತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮಾಜದ ಮುಖಂಡರಾದ ಮಾಸ್ತೆಪ್ಪ ಕಟ್ಟಿಮನಿ, ರಾಮಣ್ಣ ಪೂಜಾರ, ರಮೇಶ ಬಸಾಪಟ್ಟಣ, ರಾಮಣ್ಣ ಅಳವಂಡಿ, ಉಚ್ಚಪ್ಪ ಭೋವಿ, ಎಕಪ್ಪ ರ‍್ಯಾವಣಕಿ, ಲಕ್ಷ್ಮಣ ಪೂಜಾರ, ಹೊನ್ನಪ್ಪ ಭೋವಿ, ದುರ್ಗಪ್ಪ ಮ್ಯಾಗೇರಿ, ರಾಮು ಹಾಗೂ ಹಲವು ಮುಖಂಡರು, ಇತರ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಭಾವಚಿತ್ರಕ್ಕೆ ಪುಷ್ಪಾರ್ಚನೆ: ಕೊಪ್ಪಳ ಜಿಲ್ಲಾ ಪ್ರವಾಸದಲ್ಲಿದ್ದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಶಿವಯೋಗಿ ಸಿದ್ರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ಸಮರ್ಪಿಸಿದರು.

ಕೊಪ್ಪಳ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್, ಮಾಜಿ ಸಂಸದ ಕರಡಿ ಸಂಗಣ್ಣ ಹಾಗೂ ಇತರ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಅದ್ಧೂರಿ ಮೆರವಣಿಗೆ: ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ನಿಮಿತ್ತ ಸಿದ್ರಾಮೇಶ್ವರ ಭಾವಚಿತ್ರದ ಮೆರವಣಿಗೆಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಚಾಲನೆ ನೀಡಿದರು. ಇದೇ ವೇಳೆ ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತಹಸೀಲ್ದಾರ್‌ ವಿಠ್ಠಲ ಚೌಗಲಾ ಇದ್ದರು.

ಮೆರವಣಿಗೆಯು ಶ್ರೀ ಗವಿಸಿದ್ದೇಶ್ವರ ಮಠದಿಂದ ಪ್ರಾರಂಭಗೊಂಡು, ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಅಶೋಕ ಸರ್ಕಲ್ ಬಳಿಯ ಸಾಹಿತ್ಯ ಭವನದ ವರೆಗೆ ಅದ್ಧೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ಮಹಿಳೆಯರು ತಲೆಯ ಮೇಲೆ ಕುಂಭ ಹೊತ್ತು ಸಾಗಿದರು. ಭೋವಿ ಸಮಾಜದವರು ಹಾಗೂ ಹಲವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ