ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ ಚೊಟ್ಟನಹಳ್ಳಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಿದ್ದರಾಜು (ಸಿಮೆಂಟ್ ಸಿದ್ದು) ಹಾಗೂ ಉಪಾಧ್ಯಕ್ಷರಾಗಿ ಜಿ.ಎಂ.ಲಕ್ಷ್ಮಿ ಅವಿರೋಧ ಆಯ್ಕೆಯಾದರು.ಈ ಹಿಂದಿನ ಅಧ್ಯಕ್ಷ- ಉಪಾಧ್ಯಕ್ಷರಾಗಿದ್ದ ನಂಜುಂಡಸ್ವಾಮಿ ಮತ್ತು ಪಾರ್ವತಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಜು ಮತ್ತು ಜಿ.ಎಂ.ಲಕ್ಷ್ಮಿ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಎರಡು ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಮಹದೇವಸ್ವಾಮಿ ಘೋಷಿಸಿದರು.
ನೂತನ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಪಂಚಾಯ್ತಿ ವ್ಯಾಪ್ತಿಯ ಎಲ್ಲ 13 ಸದಸ್ಯರ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹಕಾರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಎಲ್ಲರ ಮಾರ್ಗದರ್ಶನದಲ್ಲಿ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಸರ್ಕಾರದ ವಿವಿಧ ಸವಲತ್ತುಗಳನ್ನು ಜನರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂದರು.ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ಎಲ್ಲ ಸದಸ್ಯರ ವಿಶ್ವಾಸದಿಂದ ಅಧ್ಯಕ್ಷರಾಗಿ ಸಿದ್ದರಾಜು ಅವರು ಆಯ್ಕೆಯಾಗಿದ್ದಾರೆ. ಶಾಸಕರು, ಸದಸ್ಯರು ಹಾಗೂ ಪಕ್ಷದ ಮುಖಂಡರ ಸಲಹೆಯಂತೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಿ ಎಂದರು.
ಇದೇ ವೇಳೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಮುಖಂಡರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು. ಗ್ರಾಪಂ ಮಾಜಿ ಅಧ್ಯಕ್ಷ ರಾಚೇಗೌಡ ಹಾಗೂ ಹಾಲಿ ಸದಸ್ಯರಾದ ಲೋಕೇಶ್ ಗೌಡ, ಪಾರ್ವತಿ, ಭಾಗ್ಯಮ್ಮ, ಮರಿಕೊಂಡಯ್ಯ, ಭಾಗ್ಯಮ್ಮ, ಸರೋಜಮ್ಮ, ಪವಿತ್ರಾ, ಪೂಜಾತಿ ಬೀರಪ್ಪ, ನಂಜುಂಡಸ್ವಾಮಿ, ಸೋಮಶೇಖರ್, ಎನ್.ವಿ.ನಾಗರತ್ನಮ್ಮ, ಮುಖಂಡರಾದ ರಾಚೇಗೌಡ, ಮಹದೇವು, ಬಸವರಾಜು, ಶಶಿ, ಶಿವರಾಜು, ನಾಡಗೌಡ ಪಾಲ್ಗೊಂಡಿದ್ದರು.