ಚಾಲಕರಹಿತ ರೈಲಿನ ಸಿಗ್ನಲಿಂಗ್ ತಪಾಸಣೆ ಶೀಘ್ರ

KannadaprabhaNewsNetwork |  
Published : Jun 11, 2024, 01:31 AM IST
Yello Line Metro | Kannada Prabha

ಸಾರಾಂಶ

ಎಲೆಕ್ಟ್ರಾನಿಕ್ ಸಿಟಿ ರಸ್ತೆಯ ನಮ್ಮ ಮೆಟ್ರೋ ಹಳದಿ ಮಾರ್ಗದ ಚಾಲಕರಹಿತ ರೈಲಿನ ಸಿಗ್ನಲಿಂಗ್‌ ತಪಾಸಣಾ ಕಾರ್ಯ ತಿಂಗಳಾಂತ್ಯದಿಂದ ನಡೆಯಲಿದೆ ಎಂದು ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿವೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಎಲೆಕ್ಟ್ರಾನಿಕ್ ಸಿಟಿ ರಸ್ತೆಯ ನಮ್ಮ ಮೆಟ್ರೋ ಹಳದಿ ಮಾರ್ಗದ ಚಾಲಕರಹಿತ ರೈಲಿನ ಸಿಗ್ನಲಿಂಗ್‌ ತಪಾಸಣಾ ಕಾರ್ಯ ತಿಂಗಳಾಂತ್ಯದಿಂದ ನಡೆಯಲಿದೆ ಎಂದು ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿವೆ.

ಕಳೆದ ಫೆಬ್ರವರಿಯಲ್ಲಿ ಚೀನಾದ ಸಿಆರ್‌ಆರ್‌ಸಿ ಕಂಪನಿಯಿಂದ ಬಂದಿರುವ ಚಾಲಕರಹಿತ ರೈಲು ವಿವಿಧ ಬಗೆಯ ಪರೀಕ್ಷೆಗೆ ಒಳಪಡುತ್ತಿದೆ. ಪ್ರಸ್ತುತ ರೈಲಿನ ಅತ್ಯಂತ ಮಹತ್ವದ ಸಿಗ್ನಲಿಂಗ್‌ ತಪಾಸಣೆ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮವು ಮುಂದಾಗಿದೆ. ಸೆಪ್ಟೆಂಬರ್‌ಗೆ ಪ್ರಾಯೋಗಿಕ ಚಾಲನೆ ಹಾಗೂ ವರ್ಷಾಂತ್ಯದ ಒಳಗೆ ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳಿಸುವ ಉದ್ದೇಶದಿಂದ ತಪಾಸಣೆ ಪ್ರಕ್ರಿಯೆ ಚುರುಕುಗೊಂಡಿದೆ.

ಕಳೆದ ತಿಂಗಳ ಅಂತ್ಯದಿಂದ ಹಳದಿ ಮಾರ್ಗ ಅಂದರೆ ಆರ್‌.ವಿ.ರಸ್ತೆ-ಬೊಮ್ಮಸಂದ್ರ 18.82 ಕಿ.ಮೀ ನಡುವೆ ವಿದ್ಯುದೀಕರಣ ನಡೆಸಲಾಗುತ್ತಿದೆ. ಮೆಟ್ರೋ ವಯಡಕ್ಟ್ ಮೂಲಕ ಹಾದುಹೋದ 33 ಕಿಲೋವ್ಯಾಟ್ ವಿದ್ಯುತ್ ಕೇಬಲ್‌ಗಳನ್ನು ಸಮರ್ಪಕಗೊಳಿಸಿಕೊಂಡು ವಿವಿಧ ಪರೀಕ್ಷೆ ನಡೆಸಲಾಗುತ್ತಿದೆ.

ಇದೀಗ ಜೂನ್ ಅಂತ್ಯದ ವೇಳೆಗೆ ರೈಲು ಸಿಗ್ನಲಿಂಗ್‌ ಪರೀಕ್ಷೆ ಆರಂಭವಾಗಲಿದೆ. ಜೂನ್ ಅಂತ್ಯದಿಂದ 45 ದಿನಗಳವರೆಗೆ ಸಿಗ್ನಲಿಂಗ್, ದೂರಸಂಪರ್ಕ ವ್ಯವಸ್ಥೆ, ವಿದ್ಯುತ್ ಸರಬರಾಜು ವ್ಯವಸ್ಥೆ ಸೇರಿ ಸಿಸ್ಟಮ್ ಪರೀಕ್ಷೆಗಳು ನಡೆಯಲಿವೆ.

ಹೊಸ ಮಾದರಿಯ ರೈಲು ಇದಾದ ಕಾರಣ ಒಟ್ಟಾರೆ 37 ಬಗೆಯ ತಪಾಸಣೆ ನಡೆಯಲಿದೆ. ಎಲ್ಲ ಸುರಕ್ಷತಾ ಪರೀಕ್ಷೆಗಳ ಬಳಿಕ ರಿಸರ್ಚ್ ಡಿಸೈನ್ಸ್ ಆ್ಯಂಡ್‌ ಸ್ಟ್ಯಾಂಡರ್ಡ್ ಆರ್ಗನೈಸೇಶನ್ (ಆರ್‌ಡಿಎಸ್ಒ) ಮೂಲಕ ಚಾಲನಾ ತಪಾಸಣೆ, ಕಮಿಷನರ್ ಆಫ್ ಮೆಟ್ರೋ ರೈಲು ಸುರಕ್ಷತೆಯಿಂದ (ಸಿಎಂಆರ್‌ಎಸ್) ಸುರಕ್ಷತಾ ತಪಾಸಣೆ ನಡೆಯಲಿದೆ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

ಸಿಎಂಆರ್‌ಎಸ್‌ ತಪಾಸಣೆಗೂ ಮುನ್ನ ಲೋಪದೋಷಗಳನ್ನು ಪಟ್ಟಿ ಮಾಡಿಕೊಂಡು ಅಗತ್ಯ ಬದಲಾವಣೆ ಮಾಡಿಕೊಳ್ಳಲಿದ್ದೇವೆ. ಆಗಸ್ಟ್‌ನಲ್ಲಿ ತೀತಾಘರ್‌ ರೈಲ್‌ ಸಿಸ್ಟಮ್ಸ್‌ನಿಂದ ಹಳದಿ ಮಾರ್ಗದ ಎರಡನೇ ರೈಲು ಬರಲಿದ್ದು, ಪರೀಕ್ಷಾರ್ಥ ಸಂಚಾರ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ.

ರೈಲಿನ ವೇಗ, ನಿಲ್ದಾಣದಿಂದ ನಿಲ್ದಾಣಕ್ಕೆ ತಲುಪುವ ಸಮಯ ಇತ್ಯಾದಿ ಅಂಶಗಳನ್ನು ದೃಢಪಡಿಸಿಕೊಳ್ಳಲಾಗುವುದು. ಇವೆಲ್ಲ ಪೂರ್ಣಗೊಂಡ ಬಳಿಕ ತಜ್ಞರ ಶಿಫಾರಸು ಆಧರಿಸಿ, ಸೆಪ್ಟೆಂಬರ್ ಅಂತ್ಯದಿಂದ ಪ್ರಾಯೋಗಿಕ ಸಂಚಾರ ಆರಂಭವಾಗುವ ಸಾಧ್ಯತೆಯಿದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ
ತೈಲ ಕೊರತೆ ವದಂತಿ: ಖರೀದಿಗೆ ಮುಗಿಬಿದ್ದ ಜನ-ಬಂಕ್‌ಗಳಲ್ಲಿ ಭಾರೀ ರಷ್‌