ಬಂಟ್ವಾಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸಂಭ್ರಮೋತ್ಸವವನ್ನು ಮಂಗಳವಾರ ಬಿ.ಸಿ.ರೋಡ್ನ ಸ್ತ್ರೀಶಕ್ತಿ ಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ಭವನದ ಆವರಣದಲ್ಲಿ ಗಿಡ ನೆಡುವ ಮೂಲಕ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮಕ್ಕೆ ಶುಭ ಹಾರೈಸಿದ ಮಾಜಿ ಸಚಿವ ಬಿ. ರಮಾನಾಥ ರೈ, ಸರ್ಕಾರದ ಜನಪರ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿವೆ ಎಂದು ಹೇಳಿದರು.ಪಂಚ ಗ್ಯಾರಂಟಿ ತಾಲೂಕು ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಮಾಹಿತಿಗಳಿಗೆ ಕಿವಿಗೊಡದೆ, ಫಲಾನುಭವಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ಸುಮಾರು ₹395 ಕೋಟಿ ಅನುದಾನ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಸಮಿತಿ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಸಿರಾಜ್ ಮದಕ, ಸತೀಶ್ ನಾವೂರು, ಚಂದ್ರಶೇಖರ ಆಚಾರ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಬಂಟ್ವಾಳ ಸಿಡಿಪಿಓ ಮುಮ್ತಾಜ್ ಸ್ವಾಗತಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ಶೋಭಾ ಎಂ. ವಂದಿಸಿದರು.