ಏಕವಿನ್ಯಾಸ ನಕ್ಷೆ-೯/11ರ ಅಧಿಸೂಚನೆಯಲ್ಲಿ ವಿನಾಯಿತಿ ಬೇಕು: ಸಂಸದ ಕೋಟ

KannadaprabhaNewsNetwork |  
Published : Jul 10, 2025, 01:46 AM IST
09ಸಭೆ | Kannada Prabha

ಸಾರಾಂಶ

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲೆಯಲ್ಲಿ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ನ್ನು ಹೊಸ ಅಧಿಸೂಚನೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು ವಿನಾಯಿತಿ ನೀಡಲು ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ಅನ್ನು ಪಡೆಯಲು ಅರ್ಜಿ ಸಲ್ಲಿಸಿ ತಿಂಗಳುಗಟ್ಟಲೆ ಸುತ್ತಾಡಿದರೂ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಹೊಸ ಅಧಿಸೂಚನೆಯ ಪ್ರಕಾರ ಎಲ್ಲಾ ಅರ್ಜಿಗಳನ್ನು ಅನುಮೋದನೆ ನೀಡಲೂ ಸಹ ಕಷ್ಟವಾಗುತ್ತಿದೆ. ಇದಕ್ಕೆ ಸರ್ಕಾರ ಕೆಲವೊಂದು ವಿನಾಯಿತಿಗಳನ್ನು ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ರಕರಣ ಎಂದು ತಿಳಿದು ನೀಡುವ ಅಗತ್ಯವಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯ ಜನ ಸಾಮಾನ್ಯರಿಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ಮತ್ತಿತರ ದಾಖಲೆಗಳನ್ನು ಪಡೆಯಲು ಆಗುತ್ತಿರುವ ತೊಂದರೆಯ ಬಗ್ಗೆ ಸರ್ಕಾರದ ಗಮನಕ್ಕೆ ತರಲು ಜಿಲ್ಲೆಯ ಬಾಗೀದಾರರ ಸಭೆಯನ್ನು ಕರೆದು ಅವರ ಅಹವಾಲುಗಳನ್ನು ಕೇಳಿ, ಸಮಸ್ಯೆಗಳ ಪಟ್ಟಿ ಕ್ರೋಢೀಕರಣವನ್ನು ಮುಂದಿನ ಐದು ದಿನಗಳ ಒಳಗಾಗಿ ಮಾಡಬೇಕೆಂದು ಸೂಚನೆ ನೀಡಿದರು. ಜಿಲ್ಲೆಯ ಜನತೆಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಶಾಸಕ ಸುನೀಲ್ ಕುಮಾರ್ ಮಾತನಾಡಿ, ಪ್ರಾಧಿಕಾರ ಹೊಸ ಅಧಿಸೂಚನೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಒಂದು ಪಟ್ಟಿ ಮಾಡಿ ಕೊಡಿ. ಅದನ್ನು ಮತ್ತೊಮ್ಮೆ ಎಲ್ಲರೂ ಸೇರಿ ಅದನ್ನು ಮತ್ತೊಮ್ಮೆ ಚರ್ಚಿಸಿ ಬೆಂಗಳೂರಿನಲ್ಲಿ ಕಾರ್ಯದರ್ಶಿಗಳ ಮಟ್ಟದಲ್ಲಿ ಸಭೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡೋಣ ಎಂದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಯ ಅಂಚಿನಿಂದ ಗೃಹ ನಿರ್ಮಾಣಕ್ಕೆ 6 ಮೀ. ಬಿಟ್ಟು ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡಬೇಕು. ಇದರಿಂದ ಜನರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದರು.

ಶಾಸಕರಾದ ಯಶ್ಪಾಲ್ ಎ ಸುವರ್ಣ, ಸುರೇಶ್‌ ಶೆಟ್ಟಿ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ನಗರಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರ ಮತ್ತು ಗ್ರಾಮಾಂತರ ಇಲಾಖೆಯ ಸಹಾಯಕ ನಿರ್ದೇಶಕಿ ರಮ್ಯಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರಿದ್ದರು.

PREV