ಎಸ್ಐಆರ್: ಗೌರವಧನಕ್ಕೆ ಆಶಾಗಳ ಆಗ್ರಹ

KannadaprabhaNewsNetwork |  
Published : Jul 09, 2026, 02:30 AM IST
8ಕೆಡಿವಿಜಿ5-ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತರ ಶಿವಕುಮಾರ ಅವರಿಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಯುಟಿಯುಸಿ ಜಿಲ್ಲಾ ಘಟಕದಿಂದ ಮನವಿ ಅರ್ಪಿಸಲಾಯಿತು. | Kannada Prabha

ಸಾರಾಂಶ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್‌)-2026ರ ಕರ್ತವ್ಯಕ್ಕೆ ಬಿಎಲ್‌ಒಗಳಿಗೆ ಸಹಾಯಕರಾಗಿ ಹೆಚ್ಚುವರಿ ಸಿಬ್ಬಂದಿಯಾಗಿ ನೇಮಿಸಿಕೊಂಡ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ-ಎಐಯುಟಿಯುಸಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್‌)-2026ರ ಕರ್ತವ್ಯಕ್ಕೆ ಬಿಎಲ್‌ಒಗಳಿಗೆ ಸಹಾಯಕರಾಗಿ ಹೆಚ್ಚುವರಿ ಸಿಬ್ಬಂದಿಯಾಗಿ ನೇಮಿಸಿಕೊಂಡ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ-ಎಐಯುಟಿಯುಸಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ನಗರದ ಜಿಲ್ಲಾ ಆಡಳಿತ ಭವನದಲ್ಲಿ ಸಂಘಟನೆ ಜಿಲ್ಲಾ ಪದಾಧಿಕಾರಿಗಳು, ಮುಖಂಡರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತರ ಶಿವಕುಮಾರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ ಆಶಾ ಕಾರ್ಯಕರ್ತೆಯರು ಎಸ್ಐಆರ್‌ ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಸಹಾಯಕರಾಗಿ ಹೆಚ್ಚುವರಿ ಕಾರ್ಯ ನಿರ್ವಹಿಸುತ್ತಿರುವ ತಮಗೆ ಗೌರವಧನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಸಂಘಟನೆ ಮುಖಂಡರಾ, ಎಸ್ಐಆರ್ ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಎಲ್ಓಗಳಿಗೆ ಸಹಾಯಕರಾಗಿ ಹೆಚ್ಚುವರಿ ಸಿಬ್ಬಂದಿಯಾಗಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿ, ಜಿಲ್ಲೆಯ ಆರೋಗ್ಯಾಧಿಕಾರಿಗಳು, ಹೊನ್ನಾಳಿ ತಾಲೂಕು ಹಾಗೂ ಚನ್ನಗಿರಿ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ. ಈ ಆದೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಹಕ್ಕೊತ್ತಾಯಿಸುತ್ತಿದೆ ಎಂದರು.

ಅಧಿಕೃತ ಜ್ಞಾಪನಾ ಪತ್ರದಲ್ಲಿ ಹೆಚ್ಚುವರಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನದ ಬಗ್ಗೆ ಯಾವುದೇ ಸ್ಪಷ್ಟ ವಿವರಣೆ ಅಥವಾ ಉಲ್ಲೇಖವಾಗಲಿ ಇರುವುದಿಲ್ಲ. ಈಗಾಗಲೇ ಅಲ್ಪ ಗೌರವಧನಕ್ಕೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಈ ಕೆಲಸಕ್ಕೆ 5 ಸಾವಿರ ರು.ಗಳ ಗೌರವಧನ ನೀಡಬೇಕು. ಆಶಾ ಕಾರ್ಯಕರ್ತೆಯರ ಈ ಬೇಡಿಕೆ ಬಗ್ಗೆ ಜಿಲ್ಲಾಡಳಿತ, ರಾಜ್ಯ ಸರ್ಕಾರ ಲಿಖಿತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರು ಪ್ರತಿದಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗರ್ಭಿಣಿಯರ, ಬಾಣಂತಿಯರ ಹಾಗೂ ನವಜಾತ ಶಿಶುಗಳ ಆರೈಕೆ, ಲಸಿಕಾಕರಣ, ಮತ್ತು ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸುವ ಅತ್ಯಂತ ಜವಾಬ್ದಾರಿಯುತ ತುರ್ತು ಸೇವೆಗಳಲ್ಲಿ ನಿರತರಾಗಿದ್ದಾರೆ. 30.06.2026ರಿಂದ 29.07.2026ರವರೆಗೆ ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಈ ಸುದೀರ್ಘ ಚುನಾವಣಾ ಕೆಲಸದಲ್ಲಿ ಕೈಜೋಡಿಸಿದರೆ, ಸಾರ್ವಜನಿಕ ಆರೋಗ್ಯ ಸೇವೆ ಸಂಪೂರ್ಣ ಕುಂಠಿತಗೊಳ್ಳುತ್ತವೆ. ಹೀಗಾಗಿ ಇದಕ್ಕಾಗಿ ಸಮಯ ಒದಗಿಸಿ, ಇವರ ಸೇವೆ ಪಡೆಯಲು ಜಿಲ್ಲಾ ಆರೋಗ್ಯ ಇಲಾಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಅಧ್ಯಕ್ಷೆ ಲಲಿತಮ್ಮ, ಕಾರ್ಯದರ್ಶಿ ತಿಪ್ಪೇಸ್ವಾಮಿ ಅಣಬೇರು, ಮುಖಂಡರಾದ ರೀತಾ, ಇಂದಿರಾ, ಲೀಲಾವತಿ, ನೇತ್ರಾವತಿ, ಕೌಸಲ್ಯಾ, ರಾಧಾ, ಗೀತಾ, ಜ್ಯೋತಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಬೆಳವಣಿಗೆಯತ್ತ ಪೋಷಕರು ಗಮನ ಹರಿಸಿ
ಶಾಸಕರ ನೇತೃತ್ವದಲ್ಲಿ ರಾಣೀಕೆರೆ ತೂಬು ತೆರವಿಗೆ ಕ್ಷಣಗಣನೆ