ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಆಕರ್ಷಕ ರಂಗೋಲಿ ಸ್ಪರ್ಧೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸ್ವ-ಸಹಾಯ ಗುಂಪಿನ ಮಹಿಳೆಯರು, ಬೂತ್ ಮಟ್ಟದ ಅಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿ, ಎಸ್ಐಆರ್ ಕುರಿತ ಜಾಗೃತಿ ಸಂದೇಶಗಳು ರಂಗೋಲಿ ಬಣ್ಣಗಳ ಮೂಲಕ ಮೂಡಿಬಂದವು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ಅತ್ಯಂತ ಆಕರ್ಷಕವಾಗಿ ಮತ್ತು ಅರ್ಥಪೂರ್ಣವಾಗಿ ರಂಗೋಲಿಗಳನ್ನು ಬಿಡಿಸಿದ್ದೀರಿ. ನಿಮ್ಮೆಲ್ಲರ ಪ್ರಯತ್ನ ಮೆಚ್ಚುವಂತದ್ದು ಎಂದು ಶ್ಘಾಘಿಸಿದರು.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಜೂನ್ 30 ರಿಂದ ಬಿಎಲ್ಒಗಳು ಮನೆ ಮನೆ ಭೇಟಿ ಮೂಲಕ ಗಣತಿ ನಮೂನೆಗಳ ವಿತರಣೆ ಪ್ರಾರಂಭ ಮಾಡಿದ್ದು, ಇದೇ ಜುಲೈ 30 ರವರೆಗೆ ನಡೆಯಲಿದೆ. ಒಂದು ವೇಳೆ ಇನ್ನು ಯಾರಾದರೂ ಗಣತಿ ನಮೂನೆ ಪಡೆದಿಲ್ಲವಾದರೆ ತಕ್ಷಣವೇ ನಿಮ್ಮ ಬಿಎಲ್ಒಗಳನ್ನು ಸಂಪರ್ಕಿಸಿ, ಗಣತಿ ನಮೂನೆಗಳನ್ನು ಪಡೆದುಕೊಂಡು ಅಗತ್ಯ ದಾಖಲೆಗಳ ಸಮೇತ ನಿಖರವಾಗಿ ಭರ್ತಿ ಮಾಡಿ, ಆದಷ್ಟು ಬೇಗ ವಾಪಸ್ ಬಿಎಲ್ಒಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಸಹಾಯಕ ಯೋಜನಾಧಿಕಾರಿ ಸುಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಜಿಲ್ಲಾ ವಾಶ್ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ನರೇಗಾ ಐಇಸಿ ಸಮಾಲೋಚಕ ರವೀಂದ್ರನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.