ಎಸ್‌ಐಆರ್‌ ಬೃಹತ್ ಜಾಗೃತಿ ಕಾಲ್ನಡಿಗೆ ಜಾಥಾ

KannadaprabhaNewsNetwork |  
Published : Jul 01, 2026, 01:15 AM IST
ಸಿಕೆಬಿ-1 ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಿಂದ   ಬೃಹತ್ ಕಾಲ್ನಡಿಗೆ ಜಾಥಾಗೆ ಜಿಲ್ಲಾಧಿಕಾರಿ ಜಿ.ಪ್ರಭು ಚಾಲನೆ ನೀಡಿದರು | Kannada Prabha

ಸಾರಾಂಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಿಂದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಆಯೋಜಿಸಿದ್ದ ಬೃಹತ್ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಿ. ಪ್ರಭು ಚಾಲನೆ ನೀಡಿದ

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಿಂದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಆಯೋಜಿಸಿದ್ದ ಬೃಹತ್ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಿ. ಪ್ರಭು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಿ. ಪ್ರಭು, ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಜೂ. 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರಿಗೆ ಗಣತಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಮರಳಿ ಸ್ವೀಕರಿಸಲಿದ್ದಾರೆ. ಈ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಟ್ಟಿಯು ಅತ್ಯಂತ ಮೂಲ ದಾಖಲೆ. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಇರಬೇಕು. ಅದೇ ರೀತಿ ಅನರ್ಹ ಅಥವಾ ನಕಲಿ ಹೆಸರು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳುವುದು ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ವಿಳಾಸ ಬದಲಾವಣೆ, ತಿದ್ದುಪಡಿ ಸೇರಿ ಅಗತ್ಯ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಮಾಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. 18 ವರ್ಷ ಪೂರೈಸಿರುವ, ಅರ್ಹತೆ ಹೊಂದಿರುವ ಯುವಜನರು ತಪ್ಪದೇ ಮತದಾರರಾಗಿ ನೋಂದಾಯಿಸಿಕೊಳ್ಳಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಅಮೂಲ್ಯ ಹಕ್ಕಾಗಿದ್ದು, ಅದನ್ನು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂದು ಅವರು ತಿಳಿಸಿದರು.

ನಾಗರಿಕರ ಸಹಭಾಗಿತ್ವ: ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿ.ಪಂ. ಸಿಇಒ ಡಾ.ವೈ. ನವೀನ್ ಭಟ್ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವು ಕೇವಲ ಸರ್ಕಾರಿ ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವದಿಂದ ಮಾತ್ರ ಈ ಅಭಿಯಾನ ಯಶಸ್ವಿಯಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಹಾಗೂ ಅನರ್ಹ ಹೆಸರುಗಳು ಪಟ್ಟಿಯಲ್ಲಿ ಉಳಿಯದಂತೆ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಹಾಗೂ ಯುವಜನರು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು. ತಮ್ಮ ಕುಟುಂಬದವರು, ನೆರೆಹೊರೆಯವರು ಹಾಗೂ ಪರಿಚಯಸ್ಥರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಅಗತ್ಯವಿದ್ದರೆ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಮತದಾನದ ಕುರಿತು ಜಾಗೃತಿ ಹೆಚ್ಚಿದಷ್ಟೂ ಪ್ರಜಾಪ್ರಭುತ್ವ ಇನ್ನಷ್ಟು ಸದೃಢವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಮತದಾರರ ಜಾಗೃತಿ ಅಭಿಯಾನಕ್ಕೆ ಕೈಜೋಡಿಸಿದರು. ಸಾವಿರಕ್ಕೂ ಅಧಿಕ ಜನರ ಭಾಗವಹಿಸುವಿಕೆಯಿಂದ ನಡೆದ ಈ ಬೃಹತ್ ಕಾಲ್ನಡಿಗೆ ಜಾಥಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿತು. ಪ್ರತಿ ಅರ್ಹ ನಾಗರಿಕ ಮತದಾರರಾಗಲಿ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿ, ಪ್ರಜಾಪ್ರಭುತ್ವ ಬಲಪಡಿಸಲು ಮತದಾರರಾಗಿ ನೋಂದಾಯಿಸಿ, ಮತದಾನ ನಮ್ಮ ಹಕ್ಕು, ನಮ್ಮ ಜವಾಬ್ದಾರಿ ಎಂಬ ಘೋಷಣೆಗಳು ಜಾಥಾದ ಪ್ರಮುಖ ಆಕರ್ಷಣೆಯಾಗಿದ್ದವು. ಸಾರ್ವಜನಿಕರು ಸಹ ಜಾಥಾವನ್ನು ಗಮನಿಸಿ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಎಸ್ಪಿ ಕುಶಲ್ ಚೌಕ್ಸೆ, ಎಡಿಸಿ ಡಾ.ಎನ್.ಭಾಸ್ಕರ್, ಎಸಿ ಡಿ.ಹೆಚ್.ಅಶ್ವಿನ್, ಜಿಪಂ ಉಪಕಾರ್ಯದರ್ಶಿ ಅತಿಕ್ ಪಾಷಾ, ತಹಸೀಲ್ದಾರ್ ರಶ್ಮಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಮಂಜುನಾಥ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿ ಇದ್ದರು. ಸಿಕೆಬಿ-1 ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಬೃಹತ್ ಕಾಲ್ನಡಿಗೆ ಜಾಥಾಗೆ ಜಿಲ್ಲಾಧಿಕಾರಿ ಜಿ. ಪ್ರಭು ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ಉಪನ್ಯಾಸಕರ ವೇತನ ಭರಿಸುವುದು ವಿವಿಗಳಿಗೆ ಅಸಾಧ್ಯ: ಮಧು
ಬದುಕಿನ ಸವಾಲು ಎದುರಿಸಲು ಪುಸ್ತಕ ಓದಿ: ಡಾ.ಮಾನಸ