ಕೊಪ್ಪಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಮಹತ್ವದ ಹಕ್ಕಾಗಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ಯುವಕ-ಯುವತಿಯೂ ಮತದಾರರ ಪಟ್ಟಿಗೆ ತಮ್ಮ ಹೆಸರು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹರು ಸೆ. 23ರೊಳಗೆ ನಮೂನೆ-6 ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಸಹೋದರ, ಸಹೋದರಿಯರು ಹಾಗೂ ಸುತ್ತಮುತ್ತಲಿನ ಯುವಜನರಿಗೆ ಮತದಾರರಾಗಿ ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಸೆ. 19 ಮತ್ತು 20ರಂದು ಎಲ್ಲ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮತಗಟ್ಟೆಗಳಲ್ಲಿ ಹಾಜರಿದ್ದು, ಸಾರ್ವಜನಿಕರಿಗೆ ಮಾಹಿತಿ ಹಾಗೂ ನೆರವು ನೀಡಲಿದ್ದಾರೆ. ಗ್ರಾಪಂ ಕಚೇರಿಗಳಲ್ಲೂ ಕರಡು ಮತದಾರರ ಪಟ್ಟಿ ಲಭ್ಯವಿದ್ದು, ಸಾರ್ವಜನಿಕರು ಪರಿಶೀಲಿಸಿಕೊಳ್ಳಬಹುದು ಎಂದರು.ಭಾರತ ನಕ್ಷೆಯಲ್ಲಿ ಮಾನವ ಸರಪಳಿ: ಎಸ್ಐಆರ್ ಕುರಿತು ಜಾಗೃತಿ ಮೂಡಿಸಲು ತಾಲೂಕು ಕ್ರೀಡಾಂಗಣದಲ್ಲಿ 200×120 ಅಡಿ ವಿಸ್ತೀರ್ಣದ ಭಾರತ ನಕ್ಷೆ ರೂಪಿಸಲಾಗಿತ್ತು. ಕೊಪ್ಪಳ ತಾಲೂಕಿನ ವಿವಿಧ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನಕ್ಷೆಯ ಸುತ್ತ ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು.
ಜಿಪಂ ಯೋಜನಾ ನಿರ್ದೇಶಕ ಎಸ್.ಎಂ. ಕಾಂಬಳೆ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅನಂತಕುಮಾರ ಎ.ಎಸ್., ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಶೇಖರ ಪಾಟೀಲ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ ಇದ್ದರು.