ಮತದಾರರ ನೋಂದಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆಯನ್ನು ಪರಿಶೀಲಿಸಬೇಕು.
ಕನ್ನಡಪ್ರಭ ವಾರ್ತೆ ಮೈಸೂರು
ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಗಳ ಪ್ರಗತಿ ಪರಿಶೀಲಿಸಿದರು.ಬಿಎಲ್ಒಗಳು ಮತದಾರರ ಪಟ್ಟಿ ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಿರ್ವಹಿಸಬೇಕು. ಮತದಾರರ ನೋಂದಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆಯನ್ನು ಪರಿಶೀಲಿಸಬೇಕು. ಎಸ್ಐಆರ್ ಕಾರ್ಯವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ನಿಗಾ ವಹಿಸಿ ಕೆಲಸ ನಿರ್ವಹಿಸಬೇಕು ಎಂದರು.ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ನಿಟ್ಟಿನಲ್ಲಿ ವಿವರಗಳನ್ನು ಅತ್ಯಂತ ಎಚ್ಚರಿಕೆಯಿಂದ ಪರಿಶೀಲಿಸಬೇಕು. ಯಾವ ಮತಗಟ್ಟೆಗಳಲ್ಲಿ ಕಡಿಮೆ ಪ್ರಗತಿ ಆಗಿದೆಯೋ ಅಂತಹ ಪ್ರದೇಶಗಳ ಕಡೆ ಹೆಚ್ಚಿನ ಗಮನಹರಿಸಿ ಸೂಕ್ತ ಮಾರ್ಗದರ್ಶನ ನೀಡಿ ಪ್ರಗತಿ ವೇಗವಾಗಿ ಆಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಿ ಎಂದು ಅವರು ಹೇಳಿದರು. ಮತದಾರರ ನೋಂದಣಾಧಿಕಾರಿಗಳು ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಹಾಗೂ ಬಿಎಲ್ಒಗಳು ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ನೇಮಕ ಮಾಡಿರುವ ಬಿಎಲ್ಎ-2 ಗಳೊಂದಿಗೆ ಸಭೆ ನಡೆಸಿ ಎಸ್ಐಆರ್ ಕಾರ್ಯದ ಪ್ರಗತಿ ವರದಿಯನ್ನು ಹಾಗೂ ಎಎಸ್ ಡಿಡಿಒ ಎಂದು ಗುರುತು ಮಾಡಿರುವ ಮತದಾರರ ವಿವರಗಳನ್ನು ಪ್ರತಿವಾರ ನೀಡುವಂತೆ ಸೂಚಿಸಿದರು.ಮುಂದಿನ ಹಂತದಲ್ಲಿ ಪರಿಷ್ಕರಣೆಯ ಕಾರ್ಯವನ್ನು ಕೈಗೊಳ್ಳುವ ಕುರಿತು, ನಿಗದಿತ ಕಾಲಮಿತಿಯಲ್ಲಿ ಪರಿಷ್ಕರಣೆಯ ಕಾರ್ಯಗಳನ್ನು ಪೂರ್ಣಗೊಳಿಸಲು ಸೂಚನೆಗಳನ್ನು ನೀಡಿದರು. ಪರಿಷ್ಕರಣೆಯ ಕಾರ್ಯದ ಸಂಬಂಧ ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಲ್ಲಿ ಇದ್ದ ಗೊಂದಲಗಳು ಹಾಗೂ ಪ್ರಶ್ನೆಗಳಿಗೆ ಪರಿಹಾರಗಳನ್ನು ಸೂಚಿಸಿದರು. ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್ಕುಮಾರ್, ನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ, ಹೆಚ್ಚುವರಿ ಆರ್. ಐಶ್ವರ್ಯ ಮೊದಲಾದವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.