ಕೋರ್ಟ್ ವಾರಂಟ್ ಬೆನ್ನಲ್ಲೇ ಕ್ರಮ ಕೈಗೊಂಡಿರುವ ಎಸ್ಐಟಿ ಪ್ರಜ್ವಲ್ ವಿರುದ್ಧ ಕುಣಿಕೆ ಮತ್ತಷ್ಟು ಬಿಗಿ ಮಾಡಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದ ಬೆನ್ನಲ್ಲೇ ವಿದೇಶದಲ್ಲಿ ಅಜ್ಞಾತವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೋರಿ ವಿದೇಶಾಂಗ ಇಲಾಖೆಗೆ ವಿಶೇಷ ತನಿಖಾ ದಳ (ಎಸ್ಐಟಿ) ಸೋಮವಾರ ಪತ್ರ ಬರೆದಿದೆ.
ಈ ಮನವಿಗೆ ಮೇರೆಗೆ ಪ್ರಜ್ವಲ್ ಅವರ ಪಾಸ್ಪೋರ್ಟ್ ಅನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದರೆ ತಕ್ಷಣವೇ ಅವರು ಸ್ವದೇಶಕ್ಕೆ ಮರಳಬೇಕಾಗುತ್ತದೆ. ಇಲ್ಲದೆ ಹೋದರೆ ವಿದೇಶದಲ್ಲಿ ನಿರಾಶ್ರಿತ ಎಂದು ಹೇಳಿ ಆಶ್ರಯ ಪಡೆಯಬೇಕಾಗುತ್ತದೆ.
ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಕಾನೂನು ಚೌಕಟ್ಟಿನಲ್ಲಿ ಎಸ್ಐಟಿ ಹುರಿ ಬಿಗಿಗೊಳಿಸಿದ್ದು, ಸಂಸದಗೆ ಮತ್ತಷ್ಟು ಸಂಕಷ್ಟ ಸೃಷ್ಟಿಯಾಗಿದೆ.
ಲೈಂಗಿಕ ಹಗರಣ ಬೆಳಕಿಗೆ ಬಂದ ನಂತರ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿಕೊಂಡು ಏ.26ರಂದು ಜರ್ಮನಿಯ ಮ್ಯೂನಿಕ್ ನಗರಕ್ಕೆ ರಾತ್ರೋರಾತ್ರಿ ಪ್ರಜ್ವಲ್ ಪ್ರಯಾಣ ಬೆಳೆಸಿದ್ದರು. ಅಂದಿನಿಂದ ಬಹಿರಂಗವಾಗಿ ಅವರು ಎಲ್ಲೂ ಕಾಣಿಸಿಕೊಂಡಿಲ್ಲ. ಪ್ರಸ್ತುತ ವಿದೇಶದಲ್ಲಿರುವ ಆರೋಪಿ ಬಂಧನಕ್ಕೆ ಪಾಸ್ಪೋರ್ಟ್ ರದ್ದತಿಗೆ ಮುಂದಾದ ಎಸ್ಐಟಿ, ಈ ಸಂಬಂಧ ವಿದೇಶಾಂಗ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದೆ. ಇದಕ್ಕೂ ಮೊದಲು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿ ಮನವಿ ಮೇರೆಗೆ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿತ್ತು. ಈ ವಾರಂಟ್ ಆಧರಿಸಿ ಆರೋಪಿ ಪತ್ತೆಗೆ ಸಹಕರಿಸುವಂತೆ ಕೋರಿ ವಿದೇಶಾಂಗ ಇಲಾಖೆಗೆ ಎಸ್ಐಟಿ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ. ಕೇಂದ್ರದ ಅಂಗಳಕ್ಕೆ ಪ್ರಜ್ವಲ್ ಚೆಂಡು
ಲೈಂಗಿಕ ಹಗರಣ ಸಂಬಂಧ ಪ್ರಜ್ವಲ್ ರೇವಣ್ಣ ಬಂಧನ ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ ಬಿದ್ದಿದೆ. ಪ್ರಜ್ವಲ್ ಬಂಧನ ವಿಷಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಮುಗಿ ಬಿದ್ದಿದ್ದವು. ರಾಜ್ಯ ಸರ್ಕಾರದ ವೈಫಲ್ಯದಿಂದಲೇ ಪ್ರಜ್ವಲ್ ತಪ್ಪಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಬಿಜೆಪಿ ನಾಯಕರು ದೂರಿದ್ದರು. ಈ ಟೀಕೆಗಳಿಗೆ ಎಸ್ಐಟಿ ಮುಖೇನ ಕಾನೂನು ಬಳಸಿಕೊಂಡು ವಿಪಕ್ಷಗಳಿಗೆ ರಾಜ್ಯ ಸರ್ಕಾರವು ಮಾಸ್ಟರ್ ಸ್ಟ್ರೋಕ್ ನೀಡಿದೆ. ಕಾನೂನು ಮೂಲಕವೇ ಕೇಂದ್ರದ ಹೆಗಲಿಗೆ ಸಂಸದನ ಬಂಧನದ ಹೊಣೆಗಾರಿಕೆಯನ್ನು ವರ್ಗಾಯಿಸಿ ರಾಜ್ಯ ಸರ್ಕಾರವು ‘ಚೆಕ್’ ನೀಡಿದೆ. ಎಸ್ಐಟಿ ಮನವಿ ಮೇರೆಗೆ ಪ್ರಜ್ವಲ್ ಅವರ ಪಾಸ್ಪೋರ್ಟ್ ಅನ್ನು ವಿದೇಶಾಂಗ ಇಲಾಖೆ ರದ್ದುಗೊಳಿಸಿದರೆ ತಕ್ಷಣವೇ ಅವರು ಸ್ವದೇಶಕ್ಕೆ ಮರಳಬೇಕಾಗುತ್ತದೆ. ಈಗಾಗಲೇ ಬಂಧನ ವಾರಂಟ್ ಜಾರಿಯಲ್ಲಿರುವ ಕಾರಣ ದೇಶದ ಯಾವುದೇ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ಬಂದಿಳಿದರೂ ಬಂಧಿಸಲಾಗುತ್ತದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.