ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕರಿಗೆ ಹಮ್ಮಿಕೊಂಡ ತರಬೇತಿ ಶಿಬಿರ ಉದ್ಘಾಟನೆ
ಪೂರ್ವ ಪ್ರಾಥಮಿಕ ಶಿಕ್ಷಣವು ಮಕ್ಕಳನ್ನ ಕಲಿಕೆಗೆ ಸಿದ್ಧಗೊಳಿಸುವ ಬಹುಮುಖ್ಯವಾದ ಹಂತವಾಗಿದ್ದು, ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅವಶ್ಯವಿರುವ ಕೌಶಲ್ಯ ಕಲಿಸುವ ಸಮಯವಾಗಿದೆ ಡಯಟ್ ಮುನಿರಾಬಾದ ಪ್ರಾಂಶುಪಾಲ ದೊಡ್ಡಬಸಪ್ಪ ನೀರಲಕೇರಿ ಹೇಳಿದರು.
ಪಟ್ಟಣದ ವಿದ್ಯಾನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕರಿಗೆ ಹಮ್ಮಿಕೊಂಡ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಮಗು ಹೇಗೆ ಕಲಿಯಬೇಕು ಎನ್ನುವುದನ್ನು ಕಲಿಸುವ ಮುಖ್ಯವಾದ ಸಂದರ್ಭ ಪೂರ್ವ ಪ್ರಾಥಮಿಕ ವಿಭಾಗದ ಆಶಯವಾಗಿದೆ. ಸೃಜನಶೀಲತೆ ಮತ್ತು ಕ್ರಿಯಾತ್ಮಕ ಕಲಿಕೆಗೆ ಅವಶ್ಯವಾದ ಕೌಶಲ್ಯಗಳನ್ನು ಕಲಿಸಲು ಸಲಹೆ ನೀಡಿದರು.ಬಿಇಒ ಸುರೇಂದ್ರ ಕಾಂಬ್ಳೆ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೂ ಪೂರ್ವ ಪ್ರಾಥಮಿಕ ಶಿಕ್ಷಣ ಲಭ್ಯವಾಗಬೇಕು ಎನ್ನುವ ಸದುದ್ದೇಶದಿಂದ ಕುಷ್ಟಗಿ ತಾಲೂಕಿನಲ್ಲಿ 36 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ವಿಭಾಗ ತೆರೆಯುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು ಅತ್ಯಂತ ಸಂತಸದ ಕ್ಷಣವಾಗಿದೆ. ಗ್ರಾಮೀಣ ಭಾಗದಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳು ಆರಂಭಗೊಳ್ಳುತ್ತಿರುವುದರಿಂದ ಗ್ರಾಮೀಣ ಭಾಗದ ಜನರಲ್ಲಿ ಶಿಕ್ಷಣದ ಬಗ್ಗೆ ಹೊಸ ಅಭಿಲಾಷೆ ಮೂಡಿದೆ ಎಂದರು.
ಈ ಸಂದರ್ಭದಲ್ಲಿ ಡಯಟ್ ಉಪನ್ಯಾಸಕ ಎಂ.ಬಿ. ಅರಳಿ, ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ ಕುದುರಿ, ಗೌರವಾಧ್ಯಕ್ಷ ಲಕ್ಷ್ಮಣ ಪೂಜಾರ, ದೈಹಿಕ ಶಿಕ್ಷಣ ಪರಿವೀಕ್ಷಕಿ ಸರಸ್ವತಿ ಎಂ., ಪೂರ್ವ ಪ್ರಾಥಮಿಕ ತರಬೇತಿಯ ನೋಡಲ್ ಬಿಆರ್ಪಿ ಲೋಕೇಶ್ ಜಿ., ಅಜೀಮ್ ಪ್ರೇಮ್ ಜಿ ಫೌಂಡೇಶನ್ ಮತ್ತು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.